ಅಮೆರಿಕದಲ್ಲಿರುವ ಭಾರತೀಯರಿಗೆ ರಾಕೇಶ್ ಟಿಕಾಯತ್ ಮಾಡಿದ ಮನವಿ ಏನು?
ನವದೆಹಲಿ, ಸೆಪ್ಟೆಂಬರ್ 24: ಅಮೆರಿಕದಲ್ಲಿರುವ ಭಾರತೀಯರ ಬಳಿ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮನವಿ ಮಾಡಿದ್ದಾರೆ.
ಸೆಪ್ಟೆಂಬರ್ 25 ರಂದು ಅಮೆರಿಕಾದಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ವಿವಾದಿತ ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟಿಸಿ ರೈತರಿಗೆ ಬೆಂಬಲ ವ್ಯಕ್ತಪಡಿಸುವಂತೆ ಭಾರತೀಯ ಕಿಸಾನ್ ಯೂನಿಯನ್ ನಾಯಕ ಕೇಳಿಕೊಂಡಿದ್ದಾರೆ.
ಸೆಪ್ಟೆಂಬರ್ 27ರಂದು ಭಾರತ್ ಬಂದ್; ರೈತ ಮುಖಂಡರ ಅಭಿಪ್ರಾಯ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲ ಅಮೆರಿಕಾಗೆ ಭೇಟಿ ನೀಡಿದ್ದು, ಬೈಡನ್ ಹಾಗೂ ಕಮಲಾ ಹ್ಯಾರಿಸ್ ಸೇರಿದಂತೆ ಇನ್ನಿತರೆ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಶನಿವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ಹೀಗಾಗಿ ಅಮೆರಿಕಾದಲ್ಲಿರುವ ಎಲ್ಲಾ ಭಾರತೀಯರೂ ನ್ಯೂಯಾರ್ಕ್ ನಲ್ಲಿ ಸೆಪ್ಟೆಂಬರ್ 25 ರಂದು ನಡೆಯುವ ಕಾರ್ಯಕ್ರಮದಲ್ಲಿ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಬೇಕು. ಈ ಮೂಲಕ ರೈತರಿಗೆ ಬೆಂಬಲ ನೀಡಬೇಕು. ನಿಮ್ಮ ವಾಹನಗಳ ಮೇಲೆ ರೈತರ ಧ್ವಜಗಳನ್ನು ಅಂಟಿಸಿಕೊಳ್ಳಿ, ರೈತರಿಲ್ಲದೆ ಆಹಾರವಿಲ್ಲ ಎಂಬ ಬ್ಯಾನರ್ ಗಳನ್ನು ಪ್ರದರ್ಶಿಸಿ ನಮಗೆ ಬೆಂಬಲ ನೀಡಿ ಮನವಿ ಮಾಡಿಕೊಂಡಿದ್ದಾರೆ.
ಅಮೆರಿಕಾದಲ್ಲಿರುವ ಭಾರತೀಯರಿಗೆ ವಿಡಿಯೋ ಸಂದೇಶ ರವಾನಿಸಿರುವ ಅವರು, ಕಳೆದ 10 ತಿಂಗಳುಗಳಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳ ವಿರುದ್ಧ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಈ ವರೆಗೂ 750 ರೈತರು ಸಾವನ್ನಪ್ಪಿದ್ದಾರೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಮಸೂದೆಗಳನ್ನು ವಾಪಸ್ ಪಡೆದುಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ.
Dear @POTUS, we the Indian Farmers are protesting against 3 farm laws brought by PM Modi's govt. 700 farmers have died in the last 11 months protesting. These black laws should be repealed to save us. Please focus on our concern while meeting PM Modi. #Biden_SpeakUp4Farmers
— Rakesh Tikait (@RakeshTikaitBKU) September 24, 2021
ಈ ಕರಾಳ ಕಾನೂನುಗಳನ್ನು ಹಿಂಪಡೆದುಕೊಂಡರೆ, ನಮ್ಮನ್ನು ರಕ್ಷಣೆ ಮಾಡಿದಂತಾಗುತ್ತದೆ. ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ದಯವಿಟ್ಟು ಈ ವಿಚಾರದತ್ತ ಗಮನಹರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದಷ್ಟೇ ಅಲ್ಲದೆ, ಅಮೆರಿಕಾ ಅಧ್ಯಕ್ಷರಿಗೂ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಟಿಕಾಯತ್ ಅವರು, ಭಾರತೀಯ ರೈತರಾದ ನಾವು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ 3 ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ. ಕಳೆದ 11 ತಿಂಗಳುಗಳಿಂದ 700 ರೈತರು ಸಾವನ್ನಪ್ಪಿದ್ದಾರೆ.
ಸೆಪ್ಟಂಬರ್ 25ರಂದು ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಪ್ರಧಾನಿ ನರೇಂದ್ರ ಮೋದಿ, ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡುವರು. ಸೆೆಪ್ಟೆಂಬರ್ 25ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋದಿಯೇ ಮೊದಲ ಭಾಷಣಕಾರರು.
2019ರಲ್ಲಿ ಮೋದಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಖುದ್ದಾಗಿ ಹೋಗಿ ಭಾಗವಹಿಸಿದ್ದರು. 2020ರಲ್ಲಿ ಕೊರೊನಾದ ಕಾರಣದಿಂದ ವರ್ಚುವಲ್ ಆಗಿ ನಡೆದ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಭಾರತದಿಂದಲೇ ಮಾತನಾಡಿದ್ದರು. ಈಗ ಖುದ್ದಾಗಿ ಹೋಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡುವರು.