20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಬಿಎಸ್ ವೈ ಅಭಿನಂದನೆ
ಬೆಂಗಳೂರು, ಮೇ.12: ನೊವೆಲ್ ಕೊರೊನಾ ವೈರಸ್ ವಿರುದ್ಧ ಹೋರಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಬರೋಬ್ಬರಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.
"ಕೋವಿಡ್19 ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ ಎಲ್ಲ ವರ್ಗಗಳ ಜನತೆಗೆ ನೆರವಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು 20 ಲಕ್ಷ ಕೋಟಿ ರೂ. ಮೊತ್ತದ (ನಮ್ಮ ಜಿಡಿಪಿಯ ಶೇ.10ರಷ್ಟು) ಅಭೂತಪೂರ್ವ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದನ್ನು ಸ್ವಾಗತಿಸುತ್ತೇನೆ." ಎಂದು ಸಿಎಂ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.
ಭಾರತೀಯರಿಗೆ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಮಂತ್ರಿ!
ಇದರ ಜೊತೆಗೆ ಭಾರತಕ್ಕೆ "ಎದುರಾಗಿರುವ ಸವಾಲನ್ನು ಅವಕಾಶವನ್ನಾಗಿ ಪರಿವರ್ತಿಸಿ, ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ವಸುಧೈವ ಕುಟುಂಬಕಂ ಪರಿಕಲ್ಪನೆಯ ಸದೃಢ ಸಾಮಾಜಿಕ ವ್ಯವಸ್ಥೆಯನ್ನು ಸಾಕಾರಗೊಳಿಸಲು, ಪ್ರಧಾನಿ ಮೋದಿಯವರು ಕರೆ ನೀಡಿರುವ #AtmaNirbharBharatAbhiyan ಸಮಸ್ತ ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ." ಎಂದು ಸಿಎಂ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ಘೋಷಿಸಿದ ಮೋದಿ:
ಭಾರತ ಲಾಕ್ ಡೌನ್ ಬಳಿಕ 5ನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಶ್ರಮಿಕರು, ರೈತರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಜನರಿಗಾಗಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಿಸಿದರು. ಕೇಂದ್ರ ಸರ್ಕಾರ ಘೋಷಿಸಿದ ಪ್ಯಾಕೇಜ್ ನಿಂದ ಬಡವರ ಜೇಬಿಗೆ ನೇರವಾಗಿ ಹಣ ಬೀಳುತ್ತದೆ. ಮೇ.18ರ ನಂತರ ನಾಲ್ಕನೇ ಅವಧಿಯ ಭಾರತ ಲಾಕ್ ಡೌನ್ ಹಾಗೂ ನಿಯಮಗಳ ಬಗ್ಗೆ ಮೇ.17ಕ್ಕಿಂತ ಮೊದಲು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದರು.