Breaking: 3 ಕೃಷಿ ಕಾನೂನು ಹಿಂಪಡೆದ ಕೇಂದ್ರ ಸರ್ಕಾರ
ನವದೆಹಲಿ, ನವೆಂಬರ್ 19: ದೇಶದ ಕೆಲ ಭಾಗಗಳಲ್ಲಿ ವಿವಾದ ಸೃಷ್ಟಿಸಿದ್ದ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು.
ಉತ್ತರ ಪ್ರದೇಶ ಪ್ರವಾಸಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನೂತನವಾಗಿ ಜಾರಿಗೆ ತರಲಾಗಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.
ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ, ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಕೃಷಿ ಹಿತದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು.
ಆದರೆ ಅಂತಹ ಪವಿತ್ರವಾದ , ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ, ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ರೈತರಿಗೆ ನೆರವಾಗುವ ಉದ್ದೇಶದಿಂದ ಹಾಗೂ ರೈತರನ್ನು ಸ್ವಾವಲಂಬಿಗಳನ್ನಾಗಿಸಲು ಎಪಿಎಂಸಿ ಕಾಯ್ದೆಯನ್ನು ಮೋದಿ ಸರಕಾರ ಜಾರಿಗೊಳಿಸಲು ಚಿಂತನೆ ನಡೆಸಿತ್ತು. ಆದರೆ, ಒಂದು ವರ್ಗದ ರೈತರಿಂದ ಮೂಡಿ ಬಂದ ವಿರೋಧ ಹಾಗೂ ನಿರಂತರವಾಗಿ ದಿಲ್ಲಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳಿಂದ ಕೇಂದ್ರ ಸರಕಾರ ಇಂಥದ್ದೊಂದು ನಿರ್ಧಾರಕ್ಕೆ ಬಂದಿರಬಹುದೆಂದು ವಿಶ್ಲೇಷಸಲಾಗುತ್ತಿದೆ.
ಅಲ್ಲದೆ ಬರುವ ಉತ್ತರ ಪ್ರದೇಶ ಹಾಗೂ ಪಂಜಾಬ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಇಂಥದ್ದೊಂದು ನಿರ್ಧಾರಕ್ಕೆ ಬಂದಿದೆ ಕೇಂದ್ರ ಸರಕಾರ. ಇಂದು ಪವಿತ್ರ ಗುರುಪೂರಬ್ ದಿನವಾಗಿದ್ದು, ಈ ದಿನವೇ ಗುರು ನಾನಕ್ ಅವರನ್ನು ನೆನಪಿಸಿಕೊಂಡು ಮೋದಿ ಪಂಜಾಬ್ನಲ್ಲಿ ಹೆಚ್ಚು ವಿರೋಧ ವ್ಯಕ್ತವಾಗುತ್ತಿರುವ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ.
ನನ್ನ ಸರಕಾರ ರೈತರಿಗೆ ನೆರವಾಗಲು ಅವರನ್ನು ಸ್ವಾವಲಂಬಿಗಳನ್ನಾಗಿಸುವ ಅನೇಕ ನಿರ್ಧಾರಗಳಿಗೆ ಮುಂದಾಗಿದೆ. ಈ ಕಾಯ್ದೆಯನ್ನು ಅದೇ ಉದ್ದೇಶದಿಂದ ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಆದರೆ, ಅದನ್ನು ಕೆಲ ವರ್ಗದ ಜನರ ಅರ್ಥ ಮಾಡಿಕೊಳ್ಳಲು ವಿಫಲವಾಗಿ, ದಂಧೆ ಎಬ್ಬಿಸುತ್ತಿದ್ದಾರೆ. ಉರಿಯುತ್ತಿರುವ ದೀಪದಷ್ಟೇ ಕೇಂದ್ರ ಸರಕಾರ ರೈತರಿಗಾಗಿ ಕೆಲಸ ಮಾಡುತ್ತಿದೆ, ಎಂದು ಭಾವುಕರಾಗಿ ಮಾತನಾಡಿರು.
ಪಂಜಾಬ್ ರಾಜ್ಯಾದ್ಯಂತ ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ನೂತನ ಕೃಷಿ ಕಾಯ್ದೆಗೆ ವ್ಯಾಪಕ ಪ್ರತಿಭಟನೆಗಳು ವ್ಯಕ್ತವಾಗಿದ್ದವು. ಕೇಂದ್ರ ಸರ್ಕಾರ ರೈತರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿತಾದರೂ ಅದರಲ್ಲಿ ಯಶಸ್ವಿಯಾಗಲಿಲ್ಲ.
ಇದರ ಬೆನ್ನಲ್ಲೇ ಗುರು ಪೂರಬ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದು, ಮೂರು ಕೃಷಿ ಕಾನೂನುಗಳನ್ನು ವಾಪಾಸ್ ಪಡೆಯಲು ತೀರ್ಮಾನಿಸಿದೆ. ಇದರೊಂದಿಗೆ ವರ್ಷಗಳ ರೈತರ ಹೋರಾಟಕ್ಕೆ ಗೆಲುವು ಸಿಕ್ಕಂತೆ ಆಗಿದೆ.
ಈ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ನಾವು ನಿರ್ಧರಿಸಿದ್ದೇವೆ ಎಂದು ಇಡೀ ದೇಶಕ್ಕೆ ಹೇಳಲು ನಾನು ಬಂದಿದ್ದೇನೆ, ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.












Click it and Unblock the Notifications