Haryana Assembly Election 2024: 'ಮೇರಾ ಬೂತ್ ಸಬ್ಸೆ ಮಜ್ಬೂತ್' ಸಂವಾದಕ್ಕೆ ಮೋದಿ ಕರೆ
ಹರಿಯಾಣ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿ ಅವರು ಕಾರ್ಯಕರ್ತರನ್ನು ಸಶಕ್ತಗೊಳಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಹರಿಯಾಣ ಚುನಾವಣೆಗೂ ಮುನ್ನ ʼಮೇರಾ ಬೂತ್ ಸಬ್ಸೆ ಮಜ್ಬೂತ್ʼ (ನನ್ನ ಬೂತ್ ಪ್ರಬಲವಾಗಿದೆ) ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.
ಮೋದಿ ಅವರು ಇಂದು ಈ 'ಮೇರಾ ಬೂತ್ ಸಬ್ಸೆ ಮಜ್ಬೂತ್' ಕಾರ್ಯಕ್ರಮವನ್ನು ಘೋಷಿಸಿದರು. ಹರಿಯಾಣದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ಸ್ವಯಂಸೇವಕರು ಮತ್ತು ಬೆಂಬಲಿಗರೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ಇದೇ ಸೆಪ್ಟೆಂಬರ್ 26ರಂದು ಮಧ್ಯಾಹ್ನ 12.30ಕ್ಕೆ ನಮೋ ಅಪ್ಲಿಕೇಶನ್ ಮೂಲಕ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿ ಮೋದಿ ತಮ್ಮ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ.
ನಮ್ಮ ಕಾರ್ಯಕರ್ತರು, ಸ್ವಯಂಸೇವಕರು ಮತ್ತು ಬೆಂಬಲಿಗರು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರತಿ ಬೂತ್ನಲ್ಲಿ ಕಮಲವನ್ನು ಅರಳಿಸಲು ಪಣ ತೊಟ್ಟಿದ್ದಾರೆ ಎಂದು ಮೋದಿ ಶ್ಲಾಘಿಸಿದ್ದಾರೆ. ನಿಮ್ಮ ಪ್ರಶ್ನೆಗಳು ಮತ್ತು ಸಲಹೆಗಳನ್ನು ನನಗೆ ಕಳುಹಿಸಿ ಎಂದು ಕರೆ ನೀಡಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಹರಿಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ಗುಡುಗಿದ್ದರು. ಅಲ್ಲದೆ ಮತದಾರರನ್ನು ಸೆಳೆಯುವಂತೆ ಭರ್ಜರಿ ಭಾಷಣವನ್ನೂ ಮಾಡಿದ್ದರು. ಇದೀಗ ಹರಿಯಾಣದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಮೋದಿ ಫುಲ್ ಆಕ್ಟಿವ್ ಆಗಿದ್ದಾರೆ.
ಹರಿಯಾಣ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್ ಅಗರ್ವಾಲ್ ಮಾತನಾಡಿ, ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಭಾರತದ ಚುನಾವಣಾ ಆಯೋಗವು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯೊಂದಿಗೆ ವಿಶೇಷ ಕ್ರಮಗಳನ್ನು ಜಾರಿಗೆ ತಂದಿದೆ ಎಂದಿದ್ದಾರೆ.
ಇನ್ನು ಕಳೆದ ಚುನಾವಣೆಗೆ ಹೋಲಿಸಿದರೆ, ಈ ಬಾರಿ ಶ್ಲೋಗನ್ ಬರವಣಿಗೆ, ಚಿತ್ರಕಲೆ, ಬೀದಿ ನಾಟಕಗಳು ಮತ್ತು ಪೋಸ್ಟರ್ ತಯಾರಿಕೆ ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಮತದಾರರನ್ನು ಮತದಾನ ಮಾಡಲು ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಹರಿಯಾಣದ ಮತದಾರರು ಈಗಾಗಲೇ ರಾಜಕೀಯವಾಗಿ ಜಾಗೃತರಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಹೇಳಿದ್ದು, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳೆ ಎರಡರಲ್ಲೂ ಇಲ್ಲಿ ಮತದಾನದ ಶೇಕಡಾವಾರು ಪ್ರಮಾಣವು ಬೇರೆ ರಾಜ್ಯಗಳಿಗಿಂತ ನಿರಂತರವಾಗಿ ಹೆಚ್ಚುತ್ತಲೇ ಇದೆ ಎಂದು ಮಾಹಿತಿ ನೀಡಿದ್ದಾರೆ.
ಹರಿಯಾಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ 68.31ರಷ್ಟು ಮತದಾನ ನಡೆದಿತ್ತು. ಈ ಬಾರಿ ಮತದಾರರ ಭಾಗವಹಿಸುವಿಕೆಯನ್ನು ಮತ್ತಷ್ಟು ಹೆಚ್ಚಿಸಲು ಚುನಾವಣಾ ಆಯೋಗದೊಂದಿಗೆ ಈ ಪ್ರಜಾಪ್ರಭುತ್ವದ ಹಬ್ಬ-ರಾಜ್ಯದ ಹೆಮ್ಮೆಯಲ್ಲಿ ಪಾಲ್ಗೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮತ್ತು ಹಕ್ಕು ಎಂದು ಪ್ರತಿಪಾದಿಸಿದ್ದಾರೆ.
ಈಗ ಬರಲಿರುವ ಹರಿಯಾಣ ವಿಧಾನಸಭೆ ಚುನಾವಣೆಯ ಸಮಯದಲ್ಲಿ ನಾಗರಿಕರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕು. ಹೆಚ್ಚಿನ ಮತದಾನ ಸಾಧಿಸಲು ಪ್ರತಿ ಮತವು ಕೊಡುಗೆ ನೀಡುತ್ತದೆ ಎಂದು ಹೇಳಿದ್ದಾರೆ.












Click it and Unblock the Notifications