ಕನ್ನಡದ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ
ಬೆಂಗಳೂರು ಅಕ್ಟೋಬರ್ 29: ಕನ್ನಡದ ಜನಪ್ರಿಯ ನಟ ಪುನೀತ್ ರಾಜ್ಕುಮಾರ್ ಅವರ ಹಠಾತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವಾರು ಪ್ರಮುಖ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ. ಪ್ರಸ್ತುತ G20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಅವರು ತಮ್ಮ ಟ್ವೀಟ್ನಲ್ಲಿ ಪುನೀತ್ ರಾಜ್ಕುಮಾರ್ ಅವರ ಸಾವಿಗೆ ಸಂತಾಪ ಸೂಚಿಸಿ ಅವರು ಸಮೃದ್ಧ ಮತ್ತು ಪ್ರತಿಭಾವಂತ ನಟ ಎಂದು ಬಣ್ಣಿಸಿದ್ದಾರೆ. ಕನ್ನಡದ ಖ್ಯಾತ ನಟ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂಬರುವ ಪೀಳಿಗೆಗಳು ಪುನೀತ್ ಅವರ ಅದ್ಭುತ ವ್ಯಕ್ತಿತ್ವವನ್ನು ಅವಳವಡಿಸಿಕೊಳ್ಳಬೇಕು ಎಂದು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ ಎಂದು ಶುಕ್ರವಾರ ಹೇಳಿದ್ದಾರೆ.
ಟ್ವೀಟ್ ಮಾಡಿರುವ ದೇಶದ ಪ್ರಧಾನಿ ನರೇಂದ್ರ ಮೋದಿ, "ಕ್ರೂರ ವಿಧಿ ನಮ್ಮಿಂದ ಸಮೃದ್ಧ ಮತ್ತು ಪ್ರತಿಭಾವಂತ ನಟ ಪುನೀತ್ ರಾಜ್ಕುಮಾರ್ ಅವರನ್ನು ಕಿತ್ತುಕೊಂಡಿದೆ. ಅವರಿಗೆ ಸಾಯುವ ವಯಸ್ಸಾಗಿರಲಿಲ್ಲ. ಮುಂಬರುವ ಪೀಳಿಗೆಗಳು ಅವರ ಕೆಲಸ ಮತ್ತು ಅದ್ಭುತ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಲಿ ಎಂದು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಖ:ವನ್ನು ಭರಿಸುವಂತ ಶಕ್ತಿ ದೇವರು ಕರುಣಿಸಲಿ. ಓಂ ಶಾಂತಿ" ಎಂದು ಬರೆದಿದ್ದಾರೆ.
A cruel twist of fate has snatched away from us a prolific and talented actor, Puneeth Rajkumar. This was no age to go. The coming generations will remember him fondly for his works and wonderful personality. Condolences to his family and admirers. Om Shanti. pic.twitter.com/ofcNpnMmW3
— Narendra Modi (@narendramodi) October 29, 2021
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ನಟನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. "ಕನ್ನಡದ ನಟ ಪುನೀತ್ ರಾಜ್ಕುಮಾರ್ ಅವರ ನಿಧನಕ್ಕೆ ನನ್ನ ಸಂತಾಪಗಳು. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ದುಖ: ಭರಿಸುವ ಶಕ್ತಿ ನೀಡಲಿ" ಎಂದು ಅವರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಇನ್ನೂ ಪುನೀತ್ ರಾಜ್ಕುಮಾರ್ ಅವರ ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವಗಳೊಂದಿಗೆ ಮಾಡಲಾಗುತ್ತದೆ ಎಂದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
"ಕರ್ನಾಟಕದ ಅತ್ಯಂತ ಪ್ರೀತಿಯ ಸೂಪರ್ಸ್ಟಾರ್ ಪುನೀತ್ ರಾಜ್ಕುಮಾರ್ ನಮ್ಮೊಂದಿಗಿಲ್ಲದ ಕಾರಣ ಆಘಾತ ಮತ್ತು ತೀವ್ರ ದುಃಖವಾಗಿದೆ. ಒಂದು ದೊಡ್ಡ ವೈಯಕ್ತಿಕ ನಷ್ಟ ಉಂಟಾಗಿದೆ ಮತ್ತು ಅದನ್ನು ನಿಭಾಯಿಸುವುದು ಕಷ್ಟವಾಗಿದೆ. ರಾಜ್ಕುಮಾರ್ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲು ಸರ್ವಶಕ್ತನನ್ನು ಪ್ರಾರ್ಥಿಸುತ್ತೇನೆ," ಎಂದು ಕರ್ನಾಟಕ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಬಾಲ್ಯದಲ್ಲೇ ಚಿತ್ರರಂಗ ಪ್ರವೇಶಿಸಿ ಕನ್ನಡಿಗರ ಕಣ್ಮಣಿಯೆನಿಸಿದ್ದ ಕನ್ನಡ ಚಿತ್ರರಂಗದ ಯುವ ನಟರಾದ ಪುನೀತ್ ರಾಜ್ಕುಮಾರ್ ಅವರ ನಿಧನ ನಿಜಕ್ಕೂ ಆಘಾತಕರ ಸುದ್ದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ. "ಪವರ್ ಸ್ಟಾರ್" ಎಂದೇ ಪುನೀತ್ ಖ್ಯಾತಿ ಪಡೆದಿದ್ದರು. ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಪ್ರಖ್ಯಾತ ನಟರಾದ ಡಾ. ರಾಜ್ಕುಮಾರ್ ಅವರ ಪುತ್ರರಾದ ಪುನೀತ್ ಅವರು "ಅಪ್ಪು' ಎಂದೇ ಜನಗನ್ನಣೆ ಗಳಿಸಿದ್ದರು. ನಾಡಿನ ಸಮಸ್ತ ಕನ್ನಡಿಗರಿಗೆ ಈ ವಿಷಯ ಆಘಾತವನ್ನು ತಂದಿದೆ ಎಂದು ತಿಳಿಸಿದ್ದಾರೆ. ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಿ.ಟಿ.ರವಿ ಅವರು ಪ್ರಾರ್ಥಿಸಿದ್ದಾರೆ. ಅಪ್ಪ ಡಾ.ರಾಜ್ಕುಮಾರ್ ಅವರಂತೆ ಸಾವಿನಲ್ಲೂ ಪುನೀತ್ ರಾಜ್ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ. ಆ ಎರಡು ಕಣ್ಣುಗಳು ಬೇರೆಯವರ ಅಂಧಕಾರವನ್ನು ಹೋಗಲಾಡಿಸಿ ಪ್ರಪಂಚ ನೋಡುವ ಭಾಗ್ಯವನ್ನು ಕರುಣಿಸಿದ ನಟ ಪುನೀತ್ ರಾಜ್ಕುಮಾರ್ ಅವರಿಗೆ ಶತ ಶತ ನಮನಗಳು ಎಂದು ಅವರು ತಿಳಿಸಿದ್ದಾರೆ.
ಪುನೀತ್ ರಾಜ್ಕುಮಾರ್ (46) ಶುಕ್ರವಾರ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು. ಇಂದು ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅವರನ್ನು ಆಸ್ಪತ್ರೆಗೆ ಸಾಗಿಸಲಾದರೂ ಅವರು ಬದುಕುಳಿಯಲಿಲ್ಲ. 46 ವರ್ಷದ ಪುನೀತ್ ರಾಜ್ಕುಮಾರ್ ಅವರಿಗೆ ನಿನ್ನೆ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ಆದರೂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿರಲಿಲ್ಲ. ಶುಕ್ರವಾರ ಬೆಳಗ್ಗೆ ಅವರು ಜಿಮ್ಗೆ ಹೋಗಿದ್ದರು. ಆಗ ಎದೆನೋವು ಎಂದು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ. ದಿವಂಗತ ರಾಜ್ಕುಮಾರ್ ಮತ್ತು ಪಾರ್ವತಮ್ಮ ಅವರ ಪ್ರೀತಿಯ ಪುತ್ರ, ಅವರನ್ನು ಅವರ ಅಭಿಮಾನಿಗಳು ಪ್ರೀತಿಯಿಂದ 'ಅಪ್ಪು' ಎಂದು ಕರೆಯುತ್ತಾರೆ. ಜನಪ್ರಿಯ ನಿರೂಪಕ, ಬಾಲ ಕಲಾವಿದನಾಗಿ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದ 'ಪವರ್ ಸ್ಟಾರ್' ಕನ್ನಡ ಚಲನಚಿತ್ರೋದ್ಯಮದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರು.