Haryana Election Result: ಬಹುಮತ ಕೊಟ್ಟಿದ್ದಕ್ಕೆ ಜನರಿಗೆ ಧನ್ಯವಾದ; ಪ್ರಧಾನಿ ನರೇಂದ್ರ ಮೋದಿ
ಚುನಾವಣೋತ್ತರ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಸರಳ ಬಹುಮತಕ್ಕೆ ಬೇಕಾದಷ್ಟು ಸ್ಥಾನಗಳನ್ನು ಗೆದ್ದುಕೊಂಡಿದ್ದು ಸರ್ಕಾರ ರಚನೆಗೆ ಮುಂದಾಗಿದೆ. ಹರಿಯಾಣದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು ಜನರಿಗೆ ಧನ್ಯವಾದ ತಿಳಿಸಿದ್ದಾರೆ.
ಹರಿಯಾಣದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬರುತ್ತಿರುವುದು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯದ ಗೆಲುವು ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಚುನಾವಣಾ ಆಯೋಗ ಫಲಿತಾಂಶವನ್ನು ಘೋಷಣೆ ಮಾಡಿದ ಬಳಿಕ, ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

"ಭಾರತೀಯ ಜನತಾ ಪಕ್ಷಕ್ಕೆ ಮತ್ತೊಮ್ಮೆ ಸ್ಪಷ್ಟ ಬಹುಮತ ನೀಡಿದ್ದಕ್ಕಾಗಿ ಹರಿಯಾಣದ ಜನರಿಗೆ ನಾನು ತಲೆಬಾಗುತ್ತೇನೆ" ಎಂದ ಅವರು, ಬಿಜೆಪಿ ಗೆಲುವಿಗೆ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಿದ ಅವರು, ಈ ಐತಿಹಾಸಿಕ ಗೆಲುವು ಕಾರ್ಯಕರ್ತರು, ನಾಯಕರ ಪರಿಶ್ರಮವೇ ಕಾರಣ ಎಂದು ಹೇಳಿದರು.
ಕಾರ್ಯಕರ್ತರಿಗೆ ವಂದನೆ
ಎಕ್ಸ್ನಲ್ಲಿ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಈ ಗೆಲುವಿಗಾಗಿ ಸಂಪೂರ್ಣ ಸಮರ್ಪಣಾಭಾವದಿಂದ ನಿರಂತರವಾಗಿ ಶ್ರಮಿಸಿದ ಪಕ್ಷದ ನನ್ನೆಲ್ಲಾ ಕಾರ್ಯಕರ್ತರಿಗೆ ಹೃದಯಪೂರ್ವಕ ಅಭಿನಂದನೆಗಳು. ರಾಜ್ಯದ ಜನತೆಗೆ ಪೂರ್ಣ ಪ್ರಮಾಣದಲ್ಲಿ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ, ನಮ್ಮ ಅಭಿವೃದ್ಧಿ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ದಿರಿ, ಆದ್ದರಿಂದಲೇ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ ಎಂದು ಹೇಳಿದ್ದಾರೆ.
ಮೂರನೇ ಬಾರಿ ಅಧಿಕಾರಕ್ಕೆ
10 ವರ್ಷಗಳ ಕಾಲ ಅಧಿಕಾರ ನಡೆಸಿದ್ದ ಬಿಜೆಪಿ ಈ ಬಾರಿ ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿತ್ತು. ಚುನಾವಣೋತ್ತರ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಭವಿಷ್ಯ ನುಡಿದಿದ್ದವು. ಆದರೆ ಎಲ್ಲ ಲೆಕ್ಕಾಚಾರ ಫಲಿತಾಂಶದ ದಿನ ಉಲ್ಟಾ ಆಗಿದ್ದು, ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ.
ಕನಿಷ್ಠ ಬೆಂಬಲ ಬೆಲೆಯ ಬೇಡಿಕೆ, ಅಗ್ನಿವೀರ್ ಯೋಜನೆ ಬಗ್ಗೆ ಅಸಮಾಧಾನ, ಕ್ರೀಡಾಪಟುಗಳ ಪ್ರತಿಭಟನೆ, ರೈತರ ಪ್ರತಿಭಟನೆಯ ಲಾಭವನ್ನು ಪಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಹಿನ್ನಡೆ ಅನುಭವಿಸಿದ್ದ ಬಿಜೆಪಿ ಎಚ್ಚೆತ್ತುಕೊಂಡು, ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಿದ್ದು ಫಲ ಕೊಟ್ಟಿದೆ.
ಜಮ್ಮು ಮತ್ತು ಕಾಶ್ಮೀರ ಚುನಾವಣಾ ಫಲಿತಾಂಶದ ಬಗ್ಗೆ ಕೂಡ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಹೆಚ್ಚಿನ ಮತದಾನಕ್ಕೆ ಸಾಕ್ಷಿಯಾಗಿದ್ದು, ಪ್ರಜಾಪ್ರಭುತ್ವದಲ್ಲಿ ಜನರಿಗೆ ನಂಬಿಕೆ ಇದೆ ಎನ್ನುವುದು ಮತ್ತೆ ಸಾಬೀತಾಗಿದೆ. ಇದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ಮತಾದರರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
2014ರಲ್ಲಿ 25 ಸ್ಥಾನಗಳಲ್ಲಿ ಬಿಜೆಪಿ ಗೆದ್ದಿತ್ತು, ಈ ಬಾರಿ 29 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವುದು ಸಂತಸ ತಂದಿದೆ ಎಂದ ಅವರು, ಬಿಜೆಪಿಗೆ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೆಲಸ ಮಾಡುವುದನ್ನು ಮುಂದುವರೆಸುತ್ತೇವೆ ಎಂದು ಹೇಳಿದರು.












Click it and Unblock the Notifications