ಕೊರೊನಾ ಭೀತಿ: ಸಿಎಂಗಳ ಜೊತೆಗಿನ ಸಭೆಯಲ್ಲಿ ಪ್ರಧಾನಿ ಹೇಳಿದ್ದೇನು?
ನವದೆಹಲಿ, ಮಾರ್ಚ್ 17: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು.
ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಂಜಾಬ್, ಕರ್ನಾಟಕ ಸೇರಿದಂತೆ ಕೊರೊನಾವೈರಸ್ ಸೋಂಕು ಹೆಚ್ಚಾಗುತ್ತಿರುವ ರಾಜ್ಯಗಳಲ್ಲಿ ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಏನು ಮಾಡಬೇಕು ಎಂಬುದರ ಬಗ್ಗೆ ಸಿಎಂಗಳಿಂದ ಪ್ರಧಾನಿ ಮೋದಿ ಮಾಹಿತಿ ಪಡೆದರು.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪಂಜಾಬ್ ಸಿಎಂ ಅಮರೀಂದರ್ ಸಿಂಗ್, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಸಭೆಯಲ್ಲಿ ಮಾತನಾಡುವುದಕ್ಕೆ ಅವಕಾಶ ನೀಡಲಾಗಿದೆ. ಸಿಎಂಗಳಿಂದ ಮಾಹಿತಿ ಪಡೆದ ನಂತರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ಈ ಸಭೆಯ ಪ್ರಮುಖ ಅಂಶಗಳ ಕುರಿತು ಒಂದು ವರದಿ ಇಲ್ಲಿದೆ ನೋಡಿ.

ಕೊರೊನಾವೈರಸ್ ಸೋಂಕಿನ ಅಲೆಗಳ ಬಗ್ಗೆ ಆತಂಕ
ಜಗತ್ತಿನ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿನ ಅಲೆಗಳು ಗೋಚರಿಸಿವೆ. ಅದೇ ರೀತಿ ಭಾರತದಲ್ಲೂ ದಿಢೀರನೇ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದೆ. ಇಂಥ ಸಂದರ್ಭದಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಹೆಚ್ಚಿನ ಲಕ್ಷ್ಯ ವಹಿಸಬೇಕಾಗುತ್ತದೆ. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕಿನ ಏರಿಕೆಯಾಗಿವೆ. ಈ ಬಗ್ಗೆ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಕಾಳಜಿ ವ್ಯಕ್ತಪಡಿಸಿದ್ದಾರೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ದೇಶದ 70 ಜಿಲ್ಲೆಗಳಲ್ಲಿ ಕೊರೊನಾಗೆ ನಿಯಂತ್ರಣವಿಲ್ಲ
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆಯಲ್ಲಿ 70 ಜಿಲ್ಲೆಗಳ ಪಾತ್ರ ಹೆಚ್ಚಾಗಿದೆ. ಈ ಜಿಲ್ಲೆಗಳಲ್ಲಿ ಸೋಂಕು ಹರಡುವಿಕೆಗೆ ಕಡಿವಾಣ ಹಾಕಬೇಕಿದೆ. ಕಳೆದ ಕೆಲವು ವಾರಗಳಲ್ಲಿ ಇದೇ 70 ಜಿಲ್ಲೆಗಳಲ್ಲಿ ಶೇ.150ರಷ್ಟು ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಈ ಏರಿಕೆಯನ್ನು ಈಗಲೇ ನಿಯಂತ್ರಿಸದಿದ್ದಲ್ಲಿ ಮುಂದೆ ಅಪಾಯವನ್ನು ಎದುರಿಸಬೇಕಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಶಿಷ್ಟಾಚಾರ ಪಾಲನೆ ಮಾಡುವಂತೆ ಕರೆ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯನ್ನು ಭಾರತವು ಎದುರಿಸುತ್ತಿದೆ. ಜನತಾ ಜನಾರ್ಧನರ ಸಹಕಾರವಿಲ್ಲದೇ ಕೊವಿಡ್-19 ಸೋಂಕು ನಿಯಂತ್ರಿಸುವುದಕ್ಕೆ ಸಾಧ್ಯವಿಲ್ಲ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಗೊಳ್ಳುವುದು, ಮೈಕ್ರೋ ಕೊವಿಡ್-19 ಝೋನ್ ಗಳನ್ನು ಸ್ಥಾಪಿಸುವುದು, ಕೊವಿಡ್-19 ಪರೀಕ್ಷೆ ವೇಗ ಹೆಚ್ಚಿಸುವುದರ ಮೂಲಕ ಮಹಾಮಾರಿಗೆ ಕಡಿವಾಣ ಹಾಕುವುದಕ್ಕೆ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಈ ರಾಜ್ಯದ ಮುಖ್ಯಮಂತ್ರಿಗಳು ಗೈರು ಹಾಜರು
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಸೇರಿದಂತೆ ಹಲವು ರಾಜ್ಯದ ಸಿಎಂಗಳು ಗೈರು ಹಾಜರಾಗಿದ್ದರು.

ದೇಶದಲ್ಲಿ ಇರುವ ಕೊರೊನಾವೈರಸ್ ಪರಿಸ್ಥಿತಿ
ಇದರ ಮಧ್ಯೆ ದೇಶದಲ್ಲಿ ಒಂದೇ ದಿನ 28903 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈವರೆಗೂ ಒಟ್ಟು 1,14,38,734 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 17,741 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,10,45,284ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,34,406 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.












Click it and Unblock the Notifications