ಮಳೆ ಹಾನಿ: ಸಿಎಂ ಯಡಿಯೂರಪ್ಪ ಜತೆ ಪ್ರಧಾನಿ ಮೋದಿ ಮಾತುಕತೆ
ನವದೆಹಲಿ, ಅಕ್ಟೋಬರ್ 16: ಚಂಡಮಾರುತದ ಪರಿಣಾಮದಿಂದ ದೇಶದ ಅನೇಕ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ ಉತ್ತರ ಭಾಗದಲ್ಲಿ ಅಪಾರ ಹಾನಿಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಲಂಗಾಣ, ಆಂಧ್ರಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿ, ಪರಿಹಾರದ ಭರವಸೆ ನೀಡಿದ್ದರು. ಕರ್ನಾಟಕವೂ ಮಳೆಯಿಂದ ತುಂಬಾ ನಷ್ಟ ಅನುಭವಿಸಿದೆ. ಆದರೆ ಮೋದಿ ರಾಜ್ಯದ ಬಗ್ಗೆ ಮಾತನಾಡದೆ ಇರುವುದು ವಿರೋಧಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.
'ಕರ್ನಾಟಕದ ವಿವಿಧ ಭಾಗಗಳಲ್ಲಿನ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ಪ್ರವಾದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ನಮ್ಮ ಎಲ್ಲ ಸಹೋದರ ಸಹೋದರಿಯರ ಜತೆಗೆ ನಾವಿದ್ದೇವೆ. ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು, ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವುಗಳನ್ನು ಒದಗಿಸುವ ಭರವಸೆ ನೀಡಿದ್ದೇನೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೂ ಪ್ರವಾಹ ಮತ್ತು ಮಳೆ ಸಂಕಷ್ಟದ ಬಗ್ಗೆ ಚರ್ಚಿಸಿ ವಿವರ ಪಡೆದಿದ್ದಾರೆ.
ಮಹಾ ಮಳೆ ಮತ್ತು ಪ್ರವಾಹದಿಂದ ಕಲ್ಯಾಣ ಕರ್ನಾಟಕ ಭಾಗ ತತ್ತರಿಸಿದೆ. ಆದರೆ ಇದುವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ಭರವಸೆ, ಅನುಕಂಪದ ಮಾತು ಕೂಡ ಬಂದಿಲ್ಲ. ಒಂದು ರೂಪಾಯಿ ಸಹ ನೆರವು ನೀಡಿಲ್ಲ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದರು.












Click it and Unblock the Notifications