Himachal Pradesh: ನಮ್ಮ ಕುಟುಂಬವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ- ಪ್ರತಿಭಾ ಸಿಂಗ್ ಹೇಳಿಕೆಯಲ್ಲಿ ಬೆದರಿಕೆ ತಂತ್ರ?
ಶಿಮ್ಲಾ, ಡಿಸೆಂಬರ್ 9: ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ಅವರ ಕುಟುಂಬವನ್ನು ಕಾಂಗ್ರೆಸ್ ಪಕ್ಷ ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಪ್ರತಿಭಾ ಸಿಂಗ್ ಹೇಳಿದ್ದಾರೆ. ಅವರ ಹೇಳಿಕೆಯಲ್ಲಿ ಬೆದರಿಕೆಯ ತಂತ್ರವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪ್ರತಿಭಾ ಸಿಂಗ್ ಅವರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಚುನಾವಣೆಯಲ್ಲಿ ವೀರಭದ್ರ ಸಿಂಗ್ ಅವರ ಹೆಸರನ್ನು ಬಳಸಿಕೊಳ್ಳಲಾಗಿದೆ. ಅವರ ಹೆಸರಿನಿಂದಲೇ ಕಾಂಗ್ರೆಸ್ ಬಹುಮತ ಸಿಕ್ಕಿದೆ. ಆ ಹಿನ್ನೆಲೆಯಲ್ಲಿ ವೀರಭದ್ರ ಸಿಂಗ್ ಕುಟುಂಬವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಪ್ರತಿಭಾ ಸಿಂಗ್ ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ನನಗೆ ಎಲ್ಲಾ ದೊಡ್ಡ ಜವಾಬ್ದಾರಿಗಳನ್ನು ನೀಡಿದ್ದಾರೆ. ಅವರು ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷಳನ್ನಾಗಿ ಆಯ್ಕೆ ಮಾಡಿದ್ದಾರೆ. ಆ ನಂತರ ರಾಜ್ಯದ ಎಲ್ಲಾ 68 ಕ್ಷೇತ್ರಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದಲ್ಲಿ ಪಕ್ಷ ಗೆಲ್ಲುವುದು ಖಚಿತವೆಂದು ನನಗೆ ತಿಳಿದಿತ್ತು. ನಾನು ನನ್ನ ಕೆಲಸವನ್ನು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ' ಎಂದು ಹೇಳಿದ್ದಾರೆ.

ಇಂದು ಅಥವಾ ನಾಳೆ (ಡಿಸೆಂಬರ್ 10) ವೇಳೆಗೆ ಪಕ್ಷದಿಂದ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಾನು ಹೈಕಮಾಂಡ್ ಮುಂದೆ ನನ್ನ ಹೆಸರನ್ನು ಇಡುತ್ತೇನೆ. ವೀರಭದ್ರ ಸಿಂಗ್ ಅವರ ಕುಟುಂಬವು ಈ ಚುನಾವಣೆಯಲ್ಲಿ ಕೆಲಸ ಮಾಡಿದೆ. ವೀರಭದ್ರ ಸಿಂಗ್ ಅವರ ಹೆಸರನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಳ್ಳಲಾಗಿದೆ. ಇದು ಕಾಂಗ್ರೆಸ್ನ ಹೈಕಮಾಂಡ್ಗೆ ತಿಳಿದಿದೆ. ಹೀಗಾಗಿ ಅವರು ನಮ್ಮ ಕುಟುಂಬವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
ಶಿಮ್ಲಾ ಗ್ರಾಮಾಂತರ ಕ್ಷೇತ್ರದಿಂದ ಗೆದ್ದಿರುವ ಪ್ರತಿಭಾ ಸಿಂಗ್ ಹಾಗೂ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ತಮ್ಮ ತಾಯಿ ಮುಖ್ಯಮಂತ್ರಿಯಾಗಬೇಕೆಂದು ಒತ್ತಾಯಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಬಹುಮತ ಗಳಿಸಿದೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್ ಶಾಸಕರು ಇಂದು ಶಿಮ್ಲಾದಲ್ಲಿ ಸಭೆ ಸೇರಲಿದ್ದಾರೆ.
ಹಿಮಾಚಲ ಪ್ರದೇಶದ ಒಟ್ಟು 68 ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಿಜೆಪಿ ಕೇವಲ 25 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇನ್ನೂ ಮೂರು ಸ್ಥಾನಗಳಲ್ಲಿ ಪಕ್ಷೇತರರು ಗೆಲುವು ದಾಖಲಿಸಿದ್ದಾರೆ. ಈ ಮೂವರು ಬಿಜೆಪಿ ವಿರುದ್ಧ ಬಂಡಾಯವೆದ್ದವರು.












Click it and Unblock the Notifications