ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಕೆ
ನವದೆಹಲಿ, ಜೂನ್ 27: ಜಂಟಿ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಹಲವು ವಿರೋಧ ಪಕ್ಷದ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಾಮಪತ್ರದ ಸಲ್ಲಿಕೆ ವೇಳೆ ಹಾಜರಿದ್ದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ನಿಂದ ಫಾರೂಕ್ ಅಬ್ದುಲ್ಲಾ, ಆರ್ಎಲ್ಡಿಯ ಜಯಂತ್ ಸಿನ್ಹಾ, ಸಿಪಿಐ(ಎಂ) ನ ಸೀತಾರಾಮ್ ಯೆಚೂರಿ ಮತ್ತು ತೆಲಂಗಾಣ ಸಚಿವ ಮತ್ತು ಟಿಆರ್ಎಸ್ ನಾಯಕ ಕೆಟಿ ರಾಮರಾವ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು. ಸಂಸತ್ ಭವನದಲ್ಲಿ 84 ವರ್ಷದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಯಶವಂತ್ ಸಿನ್ಹಾಗೆ ಕೊನೆಯ ಕ್ಷಣದಲ್ಲಿ ಕೆ.ಚಂದ್ರಶೇಖರ್ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಬೆಂಬಲ ಸೂಚಿಸಿದೆ.

ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್ಡಿಎ) ಅಭ್ಯರ್ಥಿ ದ್ರೌಪದಿ ಮುರ್ಮು ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಆದರೆ, ಆದರೆ ವಿರೋಧ ಪಕ್ಷಗಳ ಶಕ್ತಿ ಪ್ರದರ್ಶನವು ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟವನ್ನು ಪ್ರದರ್ಶಿಸಲು ಪ್ರಯತ್ನಿಸುತ್ತಿರುವ ಪ್ರತಿಪಕ್ಷಗಳ ಮಹತ್ವದ ರಾಜಕೀಯ ನಡೆ ಎಂದು ಪರಿಗಣಿಸಲಾಗಿದೆ.
ತಾನು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ರಬ್ಬರ್ ಸ್ಟಾಂಪ್ ರಾಷ್ಟ್ರಪತಿ ಆಗುವುದಿಲ್ಲ ಎಂದು ಹೇಳಿದ್ದಾರೆ. ಮುರ್ಮು ಅವರೊಂದಿಗೆ ಅವರು ಯಾವುದೇ ವೈಯಕ್ತಿಕ ಹೋರಾಟ ಹೊಂದಿಲ್ಲದಿದ್ದರೂ, ಚುನಾವಣೆಯು "ಭಾರತದ ಸಂವಿಧಾನವನ್ನು ಉಳಿಸಲು ಸಮಸ್ಯೆಗಳ ಯುದ್ಧ" ಎಂದು ಅವರು ಹೇಳಿದ್ದಾರೆ.

2022ರ ಜುಲೈ 18ರಂದು ನಡೆಯಲಿರುವ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದಿಂದ ಒಮ್ಮತದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಆಯ್ಕೆಯಾಗಿದ್ದಾರೆ. ಕಳೆದ ವಾರವಷ್ಟೇ ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಆಗಿರುವ ಜಾರ್ಖಂಡ್ನ ಮಾಜಿ ಗವರ್ನರ್ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸಿದ್ದರು.
ರಾಷ್ಟ್ರರಾಜಕಾರಣದಲ್ಲಿ ಅಪಾರ ಅನುಭವ ಹೊಂದಿರುವ ಸಿನ್ಹಾ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಆಯ್ಕೆಯಾಗುವದು ಅಸಾಧ್ಯ ಎನ್ನಲಾಗುತ್ತಿದೆ. ಈಗಾಗಲೇ ಬಿಎಸ್ಪಿ, ವೈಎಸ್ಆರ್, ಒಡಿಶಾ ಸಿಎಂ ನವೀನ್ ಪಟ್ನಾಯಕ್ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಬೆಂಬಲ ಸೂಚಿಸಿದ್ದಾರೆ.












Click it and Unblock the Notifications