ಜಾತಿ ನಿಂದನೆ ಪ್ರಕರಣ ದಾಖಲಾಗುತ್ತಿದ್ದಂತೆ ಬಂಧನ; ಸುಪ್ರೀಂ ಆದೇಶ
ನವದೆಹಲಿ, ಅಕ್ಟೋಬರ್ 02 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ವಿರುದ್ಧದ ಜಾತಿನಿಂದನೆ ಪ್ರಕರಣದಲ್ಲಿ ನೀಡಿದ್ದ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಬದಲಾವಣೆ ಮಾಡಿದೆ. 2018ರಲ್ಲಿ ನೀಡಿದ್ದ ತೀರ್ಪಿನಲ್ಲಿ ಬದಲಾವಣೆ ಮಾಡಲಾಗಿದೆ.
1989ರ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಇಬ್ಬರು ನ್ಯಾಯಮೂರ್ತಿಗಳ ಪೀಠ ತೀರ್ಪು ನೀಡಿತ್ತು. ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ ಇದರಲ್ಲಿ ಬದಲಾವಣೆ ಮಾಡಿ ತೀರ್ಪು ನೀಡಿದೆ.
ಅಟ್ರಾಸಿಟಿ ಪ್ರಕರಣಗಳು ದಾಖಲಾಗುತ್ತಲೇ ಪೂರ್ವ ವಿಚಾರಣೆ ಇಲ್ಲದೆ ಎಫ್ಐಆರ್ ದಾಖಲಿಸುವ ಮತ್ತು ತಕ್ಷಣವೇ ಆರೋಪಿಯನ್ನು ಬಂಧಿಸುವ ನಿಯಮವನ್ನು ಜಾರಿಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

2018ರ ಮಾರ್ಚ್ 20ರಂದು ನೀಡಿದ್ದ ತೀರ್ಪಿನಲ್ಲಿ ದೂರು ದಾಖಲಾಗುತ್ತಲೇ ಆರೋಪಿಯನ್ನು ಬಂಧಿಸಬಾರದು ಎಂದು ನ್ಯಾಯಾಲಯ ಉಲ್ಲೇಖಿಸಿತ್ತು. ಇದು ಸಂವಿಧಾನದ ಆಶಯಕ್ಕೆ ವಿರುದ್ಧ ಎಂದು ದ್ವಿ ಸದಸ್ಯ ಪೀಠ ತೀರ್ಪು ನೀಡಿತ್ತು.
ಸುಪ್ರೀಂಕೋರ್ಟ್ ಆದೇಶವನ್ನು ಮರು ಪರಿಶೀಲನೆ ನಡೆಸಬೇಕು ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನವಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರುಣ್ ಮಿಶ್ರಾ, ಎಂ. ಆರ್. ಶಾ ಮತ್ತು ಬಿ. ಆರ್. ಗಾವಿ ನೇತೃತ್ವದ ತ್ರಿ ಸದಸ್ಯ ಪೀಠ ಆದೇಶದಲ್ಲಿ ಬದಲಾವಣೆ ಮಾಡಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಾನತೆಯ ಹೋರಾಟ ಇನ್ನೂ ಮುಗಿದಿಲ್ಲ. ಈಗಲೂ ಅವರ ವಿರುದ್ಧ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಅಸ್ಪೃಶ್ಯತೆ ಇನ್ನೂ ಇದೆ. ಸ್ವಚ್ಛತಾ ಕಾರ್ಮಿಕರಿಗೆ ಇನ್ನೂ ಸರಿಯಾದ ಸವಲತ್ತುಗಳು ಸಿಗುತ್ತಿಲ್ಲ ಎಂದು ತೀರ್ಪಿನಲ್ಲಿ ನ್ಯಾಯಾಲಯ ಹೇಳಿದೆ.












Click it and Unblock the Notifications