ಸಿಬಿಎಸ್ಸಿ ಪರೀಕ್ಷೆ ವಿರುದ್ಧ ಧ್ವನಿ ಎತ್ತಿದ ಪ್ರಿಯಾಂಕಾ ಗಾಂಧಿ
ನವದೆಹಲಿ, ಏಪ್ರಿಲ್ 9: ದೇಶದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಮತ್ತೆ ಏರಿಕೆಯಾಗುತ್ತಿರುವುದರ ನಡುವೆಯೇ ಸಿಬಿಎಸ್ಇ ಬೋರ್ಡ್ ಪರೀಕ್ಷೆ 2021 ನಡೆಸುತ್ತಿರುವುದರ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಧ್ವನಿಗೂಡಿಸಿದ್ದಾರೆ.
ದೇಶದಲ್ಲಿನ ಕೋವಿಡ್-19 ಸನ್ನಿವೇಶ ಮತ್ತಷ್ಟು ಕೆಟ್ಟದಾಗುತ್ತಿರುವ ಸಂದರ್ಭದಲ್ಲಿ 10 ಮತ್ತು 12ನೇ ತರಗತಿಗಳಿಗೆ ಆಫ್ಲೈನ್ ಪರೀಕ್ಷೆ ನಡೆಸುವ ಸಿಬಿಎಸ್ಇಯಂತಹ ಬೋರ್ಡ್ಗಳು ವಿದ್ಯಾರ್ಥಿಗಳು ಪರೀಕ್ಷೆಗೆ ಕೂರುವಂತೆ ಒತ್ತಾಯಿಸುವುದು ಸರಿಯಲ್ಲ ಎಂದು ಪ್ರಿಯಾಂಕಾ ಹೇಳಿದ್ದಾರೆ.
'ಈಗಿನ ಸಂದರ್ಭದಲ್ಲಿ ಪರೀಕ್ಷೆಗೆ ಕುಳಿತುಕೊಳ್ಳುವಂತೆ ವಿದ್ಯಾರ್ಥಿಗಳ ಮೇಲೆ ಸಿಬಿಎಸ್ಇಯಂತಹ ಬೋರ್ಡ್ಗಳು ಒತ್ತಡ ಹೇರುವುದು ಸರಿಯಾದ ನಡೆಯಲ್ಲ. ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಬೇಕು ಮತ್ತು ಮರುನಿಗದಿಪಡಿಸಬೇಕು ಅಥವಾ ಜನಸಂದಣಿಯ ಪರೀಕ್ಷಾ ಕೇಂದ್ರಗಳಿಗೆ ಮಕ್ಕಳು ದೈಹಿಕವಾಗಿ ಹಾಜರಾಗುವ ಅಗತ್ಯವಿಲ್ಲದಂತೆ ಪರೀಕ್ಷೆ ನಡೆಸಬೇಕು' ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅನಿಶ್ಚಿತ ಅವಧಿಯಲ್ಲಿ ನಡೆಸಲಾಗುವ ಪರೀಕ್ಷೆಯಿಂದ ಉಂಟಾಗುವ ಒತ್ತಡವು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಅಪಾಯವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
'ನಮ್ಮ ದೇಶದಲ್ಲಿ ಕೊರೊನಾ ಮತ್ತೆ ತೀವ್ರವಾಗುತ್ತಿದೆ. ಈಗ ಪರೀಕ್ಷೆ ಬರೆಯಬೇಕಾದ ಒತ್ತಡವು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ನಮ್ಮ ಶಿಕ್ಷಣ ವ್ಯವಸ್ಥೆಯು ಈ ಮನೋಭಾವದಲ್ಲಿ ವ್ಯಾಪಕ ಬದಲಾವಣೆ ಮಾಡಿಕೊಳ್ಳಬೇಕಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
'ದೇಶದ ಶೈಕ್ಷಣಿಕ ವ್ಯವಸ್ಥೆಯು ತನ್ನ ಸಮ್ಮೇಳನ ಹಾಗೂ ಸಭೆಗಳಲ್ಲಿ ಕೇವಲ ಮಾತನಾಡುವ ಬದಲು ಸೂಕ್ಷ್ಮತೆಯನ್ನು ಪ್ರದರ್ಶಿಸಬೇಕು ಮತ್ತು ಮಕ್ಕಳ ಬಗ್ಗೆ ಸಹಾನುಭೂತಿ ಬೆಳೆಸಿಕೊಳ್ಳಬೇಕು' ಎಂದು ಸಲಹೆ ನೀಡಿದ್ದಾರೆ.
ಸಿಬಿಎಸ್ಇ ಪರೀಕ್ಷೆಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಈಗಿನ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆಯುವುದು ಅಪಾಯಕಾರಿ ಎಂದು ಕಳವಳ ವ್ಯಕ್ತಪಡಿಸುತ್ತಿದ್ದಾರೆ.












Click it and Unblock the Notifications