ಭಾರತದಾದ್ಯಂತ ಧಗಧಗಿಸುತ್ತಿರುವ ಪೌರತ್ವ ಕಾಯ್ದೆ ವಿರೋಧಿ ಬೆಂಕಿ
ದೆಹಲಿ, ಡಿಸೆಂಬರ್.23: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದೇ ತಡ. ಅಂದಿನಿಂದ ಇಂದಿನವರೆಗೂ ಎಂಟು ದಿನಗಳ ಕಾಲ ನಿರಂತರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ, ಹೋರಾಟ, ಧಿಕ್ಕಾರ ಘೋಷಣೆಗಳು ಮೊಳಗುತ್ತಲೇ ಇವೆ.
ಇಂದು ಕೂಡಾ ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ಕರ್ನಾಯಟಕ ಸೇರಿದಂತೆ ಹಲವೆಡೆ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ.
ದೆಹಲಿಯ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಎಂಟನೇ ದಿನವೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿರುವ ಪ್ರತಿಭಟನಾಕಾರರು, ಪೊಲೀಸರ ಮೇಲೆ ಮೋದಿ ಅವರಿಗೆ ದಿಢೀರ್ ಪ್ರೀತಿ ಹುಟ್ಟಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಭವನದ ಎದುರು ಪ್ರತಿಭಟಿಸಿದ್ದಕ್ಕೆ ಬಂಧನ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಉತ್ತರ ಪ್ರದೇಶಕ್ಕೆ ಉತ್ತರ ಪ್ರದೇಶವೇ ಹೊತ್ತಿ ಉರಿದಿದೆ. ರಾಜ್ಯದ ಹಲವೆಡೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿಪ್ರಹಾರ, ಹಾಗೂ ಅಶ್ರುವಾಯು ಸಿಡಿಸಿದ್ದರು. ಜೊತೆಗೆ ಕೆಲವೆಡೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಗಾಳಿಯಲ್ಲಿ ಗುಂಡು ಹಾರಿಸಿದ್ದರು.
ಉತ್ತರ ಪ್ರದೇಶದಲ್ಲಿ ಪೊಲೀಸರ ಕ್ರಮವನ್ನು ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ದೆಹಲಿಯಲ್ಲಿರುವ ಉತ್ತರ ಪ್ರದೇಶ ಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಪ್ರತಿಭಟನಾಕಾರರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.

879 ಮಂದಿಯನ್ನು ಬಂಧಿಸಿದ ಯುಪಿ ಪೊಲೀಸರು
ಕಳೆದ ಒಂದು ವಾರದಿಂದಲೂ ಉತ್ತರ ಪ್ರದೇಶದ ಹಲವೆಡೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಡೆಯುತ್ತಿದೆ. ಇದುವರೆಗೂ ಪ್ರತಿಭಟನೆಗೆ ಸಂಬಂಧಿಸಿದಂತೆ 135ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳಲಾಗಿದೆ. 879ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, 5 ಸಾವಿರಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಡಿಜಿಪಿ ಓ.ಪಿ.ಸಿಂಗ್ ಮಾಹಿತಿ ನೀಡಿದ್ದಾರೆ.
|
ಚೆನ್ನೈನಲ್ಲಿ ಸಿಎಎ ವಿರೋಧಿಸಿ ಡಿಎಂಕೆ ಕಾರ್ಯಕರ್ತರ ಪ್ರತಿಭಟನೆ
ಉತ್ತರ ಪ್ರದೇಶವಷ್ಟೇ ಅಲ್ಲ, ತಮಿಳುನಾಡಿನಲ್ಲೂ ಕೂಡಾ ಪೌರತ್ವ ತಿದ್ದುಪಡಿ ಕಾಯ್ದೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇಂದು ಚೆನ್ನೈನಲ್ಲಿ ಡಿಎಂಕೆ ಹಾಗೂ ಎಂಡಿಎಂಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅರ್ಧ ಗಂಟೆಗಳಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ 40 ರಿಂದ 50 ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನಾಕಾರರು ಭಾಗಿಯಾಗಿದ್ದರು.
ಇನ್ನು, ಚೆನ್ನೈನಲ್ಲಿ ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟ್ಯಾಲಿನ್ ಧನ್ಯವಾದ ಅರ್ಪಿಸಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ವಿಡಿಯೋವೊಂದನ್ನು ಅಪ್ ಲೋಡ್ ಮಾಡಿರುವ ಅವರು, ಬಿಜೆಪಿ ಜಾರಿಗೊಳಿಸಲು ಹೊರಟಿರುವ ಕಾಯ್ದೆಗೆ ತಮಿಳರು ವಿರೋಧಿಸುತ್ತಿದ್ದಾರೆ. ಈ ಒಕ್ಕೊರಲಿನ ಸಂದೇಶವನ್ನು ರವಾನಿಸುವಲ್ಲಿ ನಾವೆಲ್ಲರೂ ಯಶಸ್ವಿಯಾಗಿದ್ದೇವೆ. ಸಿಎಎ ಹಾಗೂ ಎನ್ಆರ್ ಸಿ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ಜಬಲ್ ಪುರ್ ನಲ್ಲಿ ನಿಷೇಧಾಜ್ಞೆ ಮುಂದುವರಿಕೆ
ಮಧ್ಯಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಜಬಲ್ ಪುರ್ ನಲ್ಲಿ ಇಂದೂ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗುವ ಲಕ್ಷಣಗಳು ಎದ್ದು ಕಾಣಿಸಿದವು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನೋಡಿಕೊಂಡು ಜಬಲ್ ಪುರ್ ನಲ್ಲಿ ಸಿಆರ್ ಪಿಸಿ ಸೆಕ್ಷನ್ 144 ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಹೇಳಿದ್ದಾರೆ. ಕಳೆದ ಶುಕ್ರವಾರದಿಂದಲೇ ಮಧ್ಯಪ್ರದೇಶದ ಹಲವೆಡೆಗಳಲ್ಲಿ ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲವೆಡೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿತ್ತು.

ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರಕ್ಕೆ ಛಾಟಿ ಬೀಸಿದ ಹೈಕೋರ್ಟ್
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ರೀತಿ ಜಾಹೀರಾತುಗಳನ್ನು ನೀಡುವಂತಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್, ಸರ್ಕಾರಕ್ಕೆ ಛಾಟಿ ಬೀಸಿದೆ. ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾಯ್ದೆಯನ್ನು ವಿರೋಧಿಸಿ ಜಾಹೀರಾತುಗಳನ್ನು ನೀಡಲಾಗುತ್ತಿತ್ತು. ಹೈಕೋರ್ಟ್ ಗೆ ಈ ಸಂಬಂಧ ಸಾರ್ವಜನಿಕ ಹಿಸಾತಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಸರ್ಕಾರವು ಸುಖಾಸುಮ್ಮನೆ ಜಾಹೀರಾತಿಗಾಗಿ ಸಾರ್ವಜನಿಕರ ಹಣವನ್ನು ವ್ಯಯ ಮಾಡಲಾಗುತ್ತಿದೆ ಎಂದು ದೂಷಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶರಾದ ಟಿಬಿಎನ್ ರಾಧಾಕೃಷ್ಣನ್, ಸರ್ಕಾರದಿಂದ ಸಿಎಎ ಹಾಗೂ ಎನ್ಆರ್ ಸಿ ಬಗ್ಗೆ ಜಾಹೀರಾತು ನೀಡದಂತೆ ಖಡಕ್ ಸೂಚನೆ ನೀಡಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications