ಪುದುಚೇರಿ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ನಾರಾಯಣಸ್ವಾಮಿ ಹೆಸರೇ ಇಲ್ಲ
ಪುದುಚೇರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 14 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಅಚ್ಚರಿಯ ಬೆಳವಣಿಗೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಹೆಸರು ಪ್ರಕಟವಾಗಿಲ್ಲ.
ಪುದುಚೇರಿಯ ವಿಧಾನಸಭೆಯ 30 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್, 15 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ನಾರಾಯಣಸ್ವಾಮಿ ಪ್ರತಿನಿಧಿಸುತ್ತಿದ್ದ, ಯಾನಂ ಕ್ಷೇತ್ರ ಹೊರತುಪಡಿಸಿ ಉಳಿದ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಚುನಾವಣೆ ಘೋಷಣೆಗೆ ಕೆಲವು ವಾರಗಳು ಇರುವ ಮುನ್ನ, ನಾರಾಯಣಸ್ವಾಮಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೈಕಮಾಂಡ್ಗೆ ನಾರಾಯಣಸ್ವಾಮಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಆದರೆ ನಾರಾಯಣಸ್ವಾಮಿ ಮನವೊಲಿಸುವ ಕಾರ್ಯವೂ ನಡೆದಿದೆ ಎನ್ನಲಾಗಿದೆ, ಹೀಗಾಗಿ, ಆ ಕ್ಷೇತ್ರವನ್ನು ಬಿಟ್ಟು ಉಳಿದ 14 ಕ್ಷೇತ್ರಗಳಿಗೆ, ಅಭ್ಯರ್ಥಿಗಳನ್ನು ಕಾಂಗ್ರೆಸ್ ಘೋಷಿಸಿದೆ.
ಒಟ್ಟು 30 ಕ್ಷೇತ್ರಗಳಲ್ಲಿ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಡಿಎಂಕೆ 13 ಹಾಗೂ ಸಿಪಿಐ ಹಾಗೂ ವಿಎಂಕೆ ತಲಾ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕೇಂದ್ರ ಚುನಾವಣಾ ಆಯೋಗವು ತಮಿಳುನಾಡು,ಪುದುಚೇರಿ,ಅಸ್ಸಾಂ,ಕೇರಳ,ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನಾಂಕಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಪುದುಚೇರಿಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮಾರ್ಚ್ 27ಕ್ಕೆ ಮೊದಲ ಹಂತದ ಚುನಾವಣೆ, ಏಪ್ರಿಲ್ 1 ರಿಂದ ಎರಡನೇ ಹಂತದ ಚುನಾವಣೆ, ಏಪ್ರಿಲ್ 6ಕ್ಕೆ ಮೂರನೇ ಹಂತದ ಚುನಾವಣೆ ಹಾಗೂ ಮೇ2ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications