ಮೇಕೆದಾಟು : ತಮಿಳುನಾಡು ಬಳಿಕ ಯೋಜನೆಗೆ ಪುದುಚೇರಿ ವಿರೋಧ
ಬೆಂಗಳೂರು, ಡಿಸೆಂಬರ್ 07 : ತಮಿಳುನಾಡು ಬಳಿಕ ಪುದುಚೇರಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಜಲಮಂಡಳಿ ಯೋಜನೆಯ ವಿಸ್ತ್ರೃತ ಯೋಜನಾ ವರದಿಯನ್ನು ಸಲ್ಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ.
ಶುಕ್ರವಾರ ಪುದುಚೇರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಜಲಮಂಡಳಿ ಕರ್ನಾಟಕಕ್ಕೆ ನೀಡಿರುವ ಅನುಮತಿಯನ್ನು ವಾಪಸ್ ಪಡೆಯುವಂತೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದೆ.
ಕಾವೇರಿ ನದಿ ಪಾತ್ರದ ರಾಜ್ಯಗಳಲ್ಲಿ ಪುದುಚೇರಿ ಸಹ ಸೇರುತ್ತದೆ. ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನಲ್ಲಿ ಪುದುಚೇರಿಗೆ 7 ಟಿಎಂಸಿ ಅಡಿ ನೀರನ್ನು ಹಂಚಿಕೆ ಮಾಡಲಾಗಿದೆ. ಈಗ ರಾಜ್ಯ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ.

ಮೇಕೆದಾಟು ಯೋಜನೆ ಕುರಿತು ವಿಸ್ತ್ರತ ಯೋಜನಾ ವರದಿ ತಯಾರಿಸಲು ಕರ್ನಾಟಕದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ತಜ್ಞರ ಜೊತೆ ಶುಕ್ರವಾರ ಮೇಕೆದಾಟುವಿಗೆ ಭೇಟಿ ನೀಡಿದ್ದಾರೆ.
ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ವಿರೋಧ ವ್ಯಕ್ತಪಡಿಸಿ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳು ಸುಪ್ರೀಂಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿವೆ. ಎರಡೂ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾದಾಗ ತಮುಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತದೆ. ಅದನ್ನು ಸಂಗ್ರಹ ಮಾಡಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುವುದು ಕರ್ನಾಟಕ ಸರ್ಕಾರದ ಯೋಜನೆಯಾಗಿದೆ.












Click it and Unblock the Notifications