ಪುಲ್ವಾಮ ದಾಳಿ : ಭದ್ರತಾ ಸಂಪುಟ ಸಮಿತಿ ಸಭೆ ಕರೆದ ಮೋದಿ
ಶ್ರೀನಗರ, ಫೆಬ್ರವರಿ 15 : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಭಾರತ ಕಟು ಶಬ್ದಗಳಿಂದ ಖಂಡಿಸಿದೆ. ದಾಳಿಯ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ಕರೆದಿದ್ದಾರೆ.
ಗುರುವಾರ ಮಧ್ಯಾಹ್ನ ಪುಲ್ವಾಮದ ಅವಂತಿಪುರ್ನಲ್ಲಿ ಉಗ್ರರು ಸೇನಾ ವಾಹನದ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದರು. ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿದ ದಾಳಿಯಲ್ಲಿ 44 ಯೋಧರು ಹುತಾತ್ಮರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ಕರೆದಿದ್ದಾರೆ. ಭಾರತದ ಮುಂದಿನ ನಡೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಗೃಹ ಸಚಿವ ರಾಜನಾಥ್ ಸಿಂಗ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
2001ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಕಟ್ಟಡಕ್ಕೆ ಸ್ಫೋಟಕ ತುಂಬಿದ ವಾಹನ ನುಗ್ಗಿಸಿ ದಾಳಿ ಮಾಡಲಾಗಿತ್ತು. ಈ ಘಟನೆಯಲ್ಲಿ 38 ಜನರು ಮೃತಪಟ್ಟಿದ್ದರು. ಇದೇ ಮಾದರಿಯಲ್ಲಿ 2019ರ ಫೆ.14ರಂದು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಸೇನಾ ವಾಹನದ ಮೇಲೆ ದಾಳಿ ಮಾಡಿದೆ.
ಉಗ್ರರ ದಾಳಿಯಲ್ಲಿ ಮೃತಪಟ್ಟ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು ಎಂಬ ಅಭಿಪ್ರಾಯ ದೇಶಾದ್ಯಂತ ವ್ಯಕ್ತವಾಗುತ್ತಿದೆ.