ಉತ್ತರಾಖಂಡ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಪದಗ್ರಹಣ
ಡೆಹ್ರಾಡೂನ್, ಜುಲೈ 05: ಉತ್ತರಾಖಂಡದ ನೂತನ ಮುಖ್ಯಮಂತ್ರಿ ಆಗಿ ಬಿಜೆಪಿಯ ಪುಷ್ಕರ್ ಸಿಂಗ್ ಧಾಮಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶನಿವಾರವಷ್ಟೇ ನಡೆದ ಭಾರತೀಯ ಜನತಾ ಪಕ್ಷದ ಸಭೆಯಲ್ಲಿ ಇವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.
ಖತಿಮಾ ವಿಧಾನಸಭೆ ಕ್ಷೇತ್ರದಿಂದ ಎರಡು ಬಾರಿ ಗೆಲುವು ಸಾಧಿಸಿರುವ ಪುಷ್ಕರ್ ಸಿಂಗ್ ಧಾಮಿ, ಉತ್ತರಾಖಂಡದ 11ನೇ ಹಾಗೂ ಅತ್ಯಂತ ಕಿರಿಯ ಮುಖ್ಯಮಂತ್ರಿ ಆಗಿದ್ದಾರೆ. ಉತ್ತರಾಖಂಡದ ರಾಜಕೀಯ ಬೆಳವಣಿಗೆಯಲ್ಲಿ ಕಳೆದ ನಾಲ್ಕು ತಿಂಗಳಿನಲ್ಲಿ ಮೂರನೇ ಬಾರಿ ಮುಖ್ಯಮಂತ್ರಿ ಬದಲಾವಣೆಯಾಗಿದೆ.
ಉತ್ತರಾಖಂಡ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ
ಶನಿವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪುಷ್ಕರ್ ಸಿಂಗ್ ಧಾಮಿ ಅನ್ನು ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಲಾಗಿತ್ತು. "ಪಕ್ಷದಲ್ಲಿ ಇರುವ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ರಾಜ್ಯದ ಸೇವೆ ಮಾಡುವುದಕ್ಕೆ ಅವಕಾಶ ನೀಡಿರುವ ಹೈಕಮಾಂಡ್ ನಾಯಕರಿಗೆ ಧನ್ಯವಾದ," ಎಂದು ಧಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಿನ್ನೆಲೆ:
ಕಳೆದ 1975ರಲ್ಲಿ ಪಿತೋರ್ ಘರ್ ಜಿಲ್ಲೆಯ ಕಾನಲಿಚ್ಚಿನ್ ಗ್ರಾಮದಲ್ಲಿ ಪುಷ್ಕರ್ ಸಿಂಗ್ ಧಾಮಿ ಜನಿಸಿದರು. ಕಾನೂನು ಪದವಿ ಪಡೆದುಕೊಂಡ ಇವರು, ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆ ಕಾರ್ಯಕರ್ತರಾಗಿ ಗುರುತಿಸಿಕೊಂಡಿರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸೇರಿಕೊಂಡ ಧಾಮಿ, 2002 ಹಾಗೂ 2008ರಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು.
ತಿರಥ್ ಸಿಂಗ್ ರಾವತ್ ರಾಜೀನಾಮೆ:
ಜುಲೈ 2ರಂದು ತೀರಥ್ ಸಿಂಗ್ ರಾವತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ ಅವರ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಅನ್ನು ಆಯ್ಕೆ ಮಾಡಲಾಗಿತ್ತು. ಶಾಸಕರಲ್ಲದಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಆರು ತಿಂಗಳೊಳಗೆ ತೀರಥ್ ಸಿಂಗ್ ರಾವತ್ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಬೇಕಿತ್ತು. ಆದರೆ ಸಪ್ಟೆಂಬರ್ 10ರೊಳಗೆ ಈ ಪ್ರಕ್ರಿಯೆ ನಡೆಸುವುದು ಅಸಾಧ್ಯವಾದ ಹಿನ್ನೆಲೆ ತೀರಥ್ ಸಿಂಗ್ ರಾವತ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.