ಪದ್ಮಭೂಷಣ ಪ್ರಶಸ್ತಿಗೆ ಶಟ್ಲರ್ ಸಿಂಧು ಹೆಸರು ಶಿಫಾರಸು
ನವದೆಹಲಿ, ಸೆಪ್ಟೆಂಬರ್ 25: ಒಲಿಂಪಿಕ್ಸ್ ಬೆಳ್ಳಿ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡುವಂತೆ ಕೇಂದ್ರ ಕ್ರೀಡಾ ಇಲಾಖೆಯು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಿದೆ.
2015ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಅವರು ಇದೀಗ ಮತ್ತೊಂದು ನಾಗರಿಕ ಪ್ರಶಸ್ತಿಗೆ ಶಿಫಾರಸುಗೊಂಡಿದ್ದಾರೆ.
ಇತ್ತೀಚೆಗೆ ನಡೆದ ಕೊರಿಯಾ ಓಪನ್ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಿ.ವಿ. ಸಿಂಧು ಅವರು ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ, ಈ ಸಾಧನೆ ಮಾಡಿದ ಭಾರತದ ಮೊಟ್ಟ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಈ ಹಿನ್ನೆಲೆಯಲ್ಲಿ, ಸಿಂಧು ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಕ್ರೀಡಾ ಇಲಾಖೆ ತನ್ನ ಶಿಫಾರಸಿನಲ್ಲಿ ತಿಳಿಸಿದೆ. ಕೊರಿಯಾ ಓಪನ್ ನಲ್ಲಿ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ, ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕಳೆದ ವಾರ ಆರಂಭಗೊಂಡ ಜಪಾನ್ ಓಪನ್ ಸೂಪರ್ ಸೀರಿಸ್ ನ ಆರಂಭಿಕ ಸುತ್ತಿನಲ್ಲೇ ಸಿಂಧು ಸೋಲು ಕಂಡರೂ ಅವರ 2ನೇ ಶ್ರೇಯಾಂಕ ಅಬಾಧಿತವಾಗಿದೆ.