Manipur violence: ಸರ್ವಪಕ್ಷಗಳ ಸಭೆ ಪ್ರಧಾನಿ ಮೋದಿಗೆ ಮುಖ್ಯವಲ್ಲ- ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ, ಜೂನ್ 22: 110 ಕ್ಕೂ ಹೆಚ್ಚು ಜೀವಗಳನ್ನು ಬಲಿತೆಗೆದುಕೊಂಡ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಈ ಸಭೆಯಲ್ಲಿ ಜನಾಂಗೀಯ ಘರ್ಷಣೆಯಿಂದ ನಲುಗಿದ ರಾಜ್ಯದ ಪರಿಸ್ಥಿತಿಯ ಬಗ್ಗೆ ಚರ್ಚಿಸಲಾಗುತ್ತದೆ.ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆದಿರುವ ಸರ್ವಪಕ್ಷ ಸಭೆಯು ಈಗ ಮಹತ್ವ ಪಡೆದುಕೊಂಡಿದೆ.
ಕೆಲವು ದಿನಗಳ ಹಿಂದೆ, ಮಣಿಪುರ ಹಿಂಸಾಚಾರದ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆಯದೇ ಇರುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದರು.

ಈಗ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸದೇ ಇರುವುದಕ್ಕೆ ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, '50 ದಿನಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದೆ. ಆದರೆ ಪ್ರಧಾನಿ ಮೌನವಾಗಿದ್ದಾರೆ. ಸ್ವತಃ ಪ್ರಧಾನಿಯೇ ದೇಶದಲ್ಲಿ ಇಲ್ಲದಿದ್ದಾಗ ಸರ್ವಪಕ್ಷ ಸಭೆ ಕರೆಯಲಾಗಿದೆ. ಈ ಸಭೆಯು ಪ್ರಧಾನಿಗೆ ಮುಖ್ಯವಲ್ಲ' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಈ ವಿಷಯದ ಬಗ್ಗೆ ಪ್ರಧಾನಿ ಮೌನವನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಿಂಸಾಚಾರವು ರಾಜ್ಯದಲ್ಲಿ 'ಆಳವಾದ ಗಾಯವನ್ನು' ಉಂಟುಮಾಡಿದೆ ಎಂದು ಹೇಳಿದ್ದಾರೆ.

ಯೋಜಿತ ಸಭೆಗೆ ಒಂದು ದಿನ ಮುಂಚಿತವಾಗಿ, ವಿವಿಧ ವಿರೋಧ ಪಕ್ಷಗಳ ನಾಯಕರು ಪಾಟ್ನಾದಲ್ಲಿ ಸೇರುವ ನಿರೀಕ್ಷೆಯಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ಸರ್ವಪಕ್ಷ ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವರು ಎಲ್ಲಾ ರಾಜಕೀಯ ಪಕ್ಷಗಳನ್ನು ಆಹ್ವಾನಿಸಿದ್ದಾರೆ. ಅವರು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ಸಭೆ ಸೇರಿ ಬಿಕ್ಕಟ್ಟನ್ನು ಬಗೆಹರಿಸುವ ಬಗ್ಗೆ ಸರ್ವಪಕ್ಷಗಳ ನಾಯಕರ ಮಾರ್ಗದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು, ಅಮಿತ್ ಶಾ ಅವರು ಮಣಿಪುರಕ್ಕೆ ನಾಲ್ಕು ದಿನಗಳ ಕಾಲ ಭೇಟಿ ನೀಡಿದ್ದರು. ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಮಾಡಿದ್ದರು. ಅವರು ಪರಿಹಾರ ಶಿಬಿರಗಳಲ್ಲಿ ಮೈಟೆಯಿ ಮತ್ತು ಕುಕಿ ಸಮುದಾಯದ ಸಂತ್ರಸ್ತರನ್ನು ಭೇಟಿ ಮಾಡಿದ್ದರು. ಭದ್ರತೆಯ ಬಗ್ಗೆ ಭರವಸೆ ನೀಡಿದ್ದರು. ಅವರು ಸುರಕ್ಷಿತವಾಗಿ ಮನೆಗೆ ಮರಳುವುದನ್ನು ಖಚಿತಪಡಿಸಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದ್ದರು.

ಆದರೂ, ಮಣಿಪುರದಲ್ಲಿ ಹಿಂಸಾಚಾರ ನಿಲ್ಲುತ್ತಿಲ್ಲ. ಪ್ರತಿಭಟನಾಕಾರರು ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿದ್ದಾರೆ. ದೊಂಬಿ, ಗಲಭೆ, ಗುಂಡಿನ ದಾಳಿಗಳಲ್ಲಿ ಜನರು ತೊಡಗಿಕೊಂಡಿದ್ದಾರೆ. ಪರಿಸ್ಥಿತಿ ಕೈಮೀರಿ ಹೋಗಿದೆ ಎಂದು ನಿವೃತ್ತ ಮಿಲಿಟರಿ ಅಧಿಕಾರಿಗಳು ಖೇದ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಮಾತನಾಡದೇ ಇರುವುದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದೆ.
ಹಿಂಸಾಚಾರದಲ್ಲಿ ಆಡಳಿತಾರೂಢ ಬಿಜೆಪಿಯ ನಾಯಕರ ಮನೆಗಳೂ ಒಳಗೊಂಡಂತೆ ಚುನಾಯಿತ ಪ್ರತಿನಿಧಿಗಳ ಮನೆಗಳ ಮೇಲೆ ದಾಳಿಗಳನ್ನು ಮಾಡಲಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಮಣಿಪುರದ ಎಂಟು ಬಿಜೆಪಿ ಶಾಸಕರು ಸಾರ್ವಜನಿಕರು ರಾಜ್ಯ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದರು.












Click it and Unblock the Notifications