Ambedkar Remarks: ಮೋದಿ ಭೇಟಿಯಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ: ಅಮಿತ್ ಶಾ ರಾಜೀನಾಮೆಗೆ ಆಗ್ರಹ
ನವದೆಹಲಿ, ಡಿಸೆಂಬರ್ 18: ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಭಾರೀ ಗದ್ದಲದ ನಡುವೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಪ್ರತಿಪಕ್ಷಗಳ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬುಧವಾರ ಒತ್ತಾಯಿಸಿದೆ.ಅಮಿತ್ ಶಾ ಅವರು ತಮ್ಮ ಹೇಳಿಕೆಗೆ ಸಾರ್ವಜನಿಕವಾಗಿ ಮತ್ತು ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

ಇನ್ನೂ ಈ ಕುರಿತು ಸಂಸತ್ತಿನ ಆವರಣದಲ್ಲಿ ಸುದ್ದಿಗಾರರೊಂದಿಗೆ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಮಾತನಾಡಿ, ಅಂಬೇಡ್ಕರ್ ಅವರನ್ನು ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ನೀಡಬೇಕು ಮತ್ತು ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದ ಸಂವಿಧಾನವನ್ನು ಅಮಿತ್ ಶಾ ಅವಮಾನಿಸಿದ್ದಾರೆ ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ಆರೋಪಿಸಿದ್ದಾರೆ.
ಮನುಸ್ಮೃತಿ ಮತ್ತು ಆರೆಸ್ಸೆಸ್ ಸಿದ್ಧಾಂತವು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನಕ್ಕೆ ಗೌರವ ನೀಡಲು ಬಯಸುವುದಿಲ್ಲ ಎಂಬುದನ್ನು ತೋರಿಸುತ್ತದೆ. ಅದಕ್ಕಾಗಿಯೇ ನಾವು, ಎಲ್ಲಾ ಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸುತ್ತೇವೆ ಮತ್ತು ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಹೇಳಿದ್ದಾರೆ. ಯಾರಾದರೂ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಈ ರೀತಿ ಅವಮಾನಿಸಿದರೆ ದೇಶಾದ್ಯಂತ ಬೆಂಕಿ ಹೊತ್ತಿಕೊಳ್ಳುತ್ತದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಇಂತಹ ಅವಮಾನವನ್ನು ನಾವು ಪಕ್ಷಗಳು ಒಪ್ಪುವುದಿಲ್ಲ ಎಂದು ಹೇಳಿದರು.
ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವುದು ಒಂದು ಫ್ಯಾಶನ್ ಆಗಿದೆ ಎಂದು ಟೀಕಿಸಿದ್ದಾರೆ. ಇದು ದೇಶದ ದಲಿತರು ಮತ್ತು ಬಾಬಾಸಾಹೇಬರಿಗೆ ಮಾಡಿದ ಅವಮಾನವಾಗಿದೆ" ಎಂದು ಅವರು ಹೇಳಿದ್ದಾರೆ.
ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಫ್ಯಾಷನ್ ಆಗಿಬಿಟ್ಟಿದೆ. ಎಷ್ಟೋ ಬಾರಿ ದೇವರ ನಾಮಸ್ಮರಣೆ ಮಾಡಿದ್ದರೆ ಸ್ವರ್ಗದಲ್ಲಿ ಅವರಿಗೆ ಸ್ಥಾನ ಸಿಗುತ್ತಿತ್ತು ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಹೇಳಿದ್ದರು.
ಕಾಂಗ್ರೆಸ್ ಸಂಸದ ನೀರಜ್ ಡಾಂಗಿ ಅವರು ಈ ಕುರಿತು ಮಾತನಾಡಿ, ತಮ್ಮ ಹೇಳಿಕೆಗೆ ಅಮಿತ್ ಶಾ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವುದು ಒಂದು ಫ್ಯಾಶನ್ ಆಗಿದೆ ಎಂದು ಟೀಕಿಸಿದ್ದಾರೆ. ಇದು ದೇಶದ ದಲಿತರು ಮತ್ತು ಬಾಬಾಸಾಹೇಬರಿಗೆ ಮಾಡಿದ ಅವಮಾನವಾಗಿದೆ ಎಂದು ಅವರು ಹೇಳಿದ್ದಾರೆ
ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಅಮಿತ್ ಶಾ ಇಡೀ ದೇಶಕ್ಕೆ ತೋರಿಸಿದ್ದಾರೆ. ಬಿಜೆಪಿ ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದು, ಇದೇ ವರ್ಗದವರು ಅವರನ್ನು 240ರಿಂದ 40ಕ್ಕೆ ಇಳಿಸಲಿದ್ದಾರೆ. ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಅವರು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತನಾಡಿದ್ದನ್ನು ಗಂಭೀರವಾಗಿ ಪರಿಗಣಿಸಿದರೆ ಅವರು ಸಾಂವಿಧಾನಿಕ ಹುದ್ದೆ ಅಲಂಕರಿಸುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಡಾಂಗಿ ಹೇಳಿದರು.












Click it and Unblock the Notifications