ಮಧ್ಯ ಪ್ರದೇಶ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ: ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ
ಬುರ್ಹಾನ್ಪುರ, ನವೆಂಬರ್ 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯು ಬುಧವಾರ ಮಧ್ಯಪ್ರದೇಶವನ್ನು ಪ್ರವೇಶಿಸಿದೆ.
ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಗಡಿಯಲ್ಲಿರುವ ಬೊಡೆರ್ಲಿ ಗ್ರಾಮದ ಮೂಲಕ ಯಾತ್ರೆಯು ರಾಜ್ಯವನ್ನು ಪ್ರವೇಶಿಸಿದೆ.
ರಾಹುಲ್ ಗಾಂಧಿ ಸಮ್ಮುಖದಲ್ಲಿ ಭಾರತ್ ಜೋಡೊ ಯಾತ್ರೆಯ ಧ್ವಜವನ್ನು ಮಧ್ಯಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಮಲ್ ನಾಥ್ಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಗೋವಿಂದ್ ಸಿಂಗ್ ಸೇರಿದಂತೆ ಪಕ್ಷದ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಯಾತ್ರೆಯು ಬೊಡೆರ್ಲಿ ಬಸ್ ನಿಲ್ದಾಣದಿಂದ ಆರಂಭಗೊಂಡು ಬುರ್ಹಾನ್ಪುರ ಜಿಲ್ಲೆಯ ಜೈನಾಬಾದ್ ಫಟಾದಲ್ಲಿ ನಿಲ್ಲಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಗುಜರಾತ್ ಚುನಾವಣೆ ಪ್ರಚಾರದಲ್ಲಿ ರಾಹುಲ್ ಭಾಗಿ
ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ಚುನಾವಣೆ ಪ್ರಚಾರದಲ್ಲಿ ರಾಹುಲ್ ಗಾಂಧಿ ಪಾಲ್ಗೊಂಡಿದ್ದರು. ಸೋಮವಾರ ಹಾಗೂ ಮಂಗಳವಾರ ಗುಜರಾತ್ನಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ಬಿಜೆಪಿ ನೇತೃತ್ವದ ಸರ್ಕಾರ ಆದಿವಾಸಿಗಳನ್ನು ಕಡೆಗಣಿಸುತ್ತಿದೆ. ಇಬ್ಬರು ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡುತ್ತಿದೆ. ಬಿಜೆಪಿ ಹಾಗೂ ಆರ್ಎಸ್ಎಸ್ನವರು ಆದಿವಾಸಿಗಳನ್ನು ವನವಾಸಿಗಳೆಂದು ಕರೆಯುತ್ತಾರೆ. ಆದಿವಾಸಿಗಳೇ ಇಲ್ಲಿನ ಮೂಲ ನಿವಾಸಿಗಳು. ಬಿಜೆಪಿಯವರಿಗೆ ಆದಿವಾಸಿಗಳ ಮಕ್ಕಳು ಎಂಜಿನಿಯರ್ಗಳು, ಡಾಕ್ಟರ್ಗಳಾಗುವುದು ಬೇಡ ಎಂದು ಹರಿಹಾಯ್ದಿದ್ದರು.
ಗುಜರಾತ್ನಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇಲ್ಲಿರುವುದು ಭ್ರಷ್ಟಾಚಾರ ಪ್ಲಸ್ ಕಮಿಷನ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದರು.

ಗುಜರಾತ್ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ
ಈ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಾರಣ, ಈ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇದಕ್ಕೂ ಮೊದಲು ಗುಜರಾತ್ನಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಆದರೆ, ಈ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡುತ್ತಿದೆ. ಬಿಜೆಪಿ ಹಾಗೂ ಎಎಪಿ ಪಕ್ಷಗಳು ಅಬ್ಬರದ ಪ್ರಚಾರಕ್ಕೆ ಮಣೆ ಹಾಗಿದರೆ, ಕಾಂಗ್ರೆಸ್ ಮಾತ್ರ ಮೌನ ಪ್ರಚಾರಕ್ಕೆ ಮೊರೆ ಹೋಗಿದೆ. ಭಾರತ್ ಜೋಡೊ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಗುಜರಾತ್ ಚುನಾವಣಾ ಪ್ರಚಾರಕ್ಕೆ ದುಮುಕಿರುವುದು ಕಾಂಗ್ರೆಸ್ಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೊ ಯಾತ್ರೆ
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ಈಗಾಗಲೇ ಆರು ರಾಜ್ಯಗಳಲ್ಲಿ ಸಾಗಿರುವ ಯಾತ್ರೆ ಪ್ರಸ್ತುತ ಮಧ್ಯಪ್ರದೇಶವನ್ನು ಪ್ರವೇಶಿಸಿದೆ. ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಕ್ರಮಿಸಿರುವ ಯಾತ್ರೆಗೆ ಜನಬೆಂಬಲ ದೊರೆತಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಾಮಾಜಿಕ ಹೋರಾಟಗಾರರು, ಕಲಾವಿದರು, ವ್ಯಾಪಾರಿಗಳು, ಕಾರ್ಮಿಕರು ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಡಿಸೆಂಬರ್ 8ರಂದು ಗುಜರಾತ್ ಚುನಾವಣೆ ಫಲಿತಾಂಶ
182 ಸದಸ್ಯನ್ನು ಹೊಂದಿರುವ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 01 ಹಾಗೂ 05ರಂದು ಮತದಾನ ನಡೆಯಲಿದೆ. ಡಿಸೆಂಬರ್ 08ರಂದು ಮತ ಫಲಿತಾಂಶ ಪ್ರಕಟಗೊಳ್ಳಲಿದೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯವಾದ ಗುಜರಾತ್ನಲ್ಲಿ ಬಿಜೆಪಿಗೆ ಜಯಗಳಿಸುವ ಅನಿವಾರ್ಯತೆ ಇದೆ. ಕಾರಣ, ಈ ರಾಜ್ಯವು ಬಿಜೆಪಿ ಪಾಲಿನ ಪ್ರತಿಷ್ಠೆಯಾಗಿದೆ. ಈಗಾಗಲೇ ಗುಜರಾತ್ಗೆ ಹಲವು ಬಾರಿ ಭೇಟಿ ನೀಡಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೊ ಯಾತ್ರೆ ವಿರುದ್ಧ ಹರಿಹಾಯ್ದಿರುವ ಅವರು, ಅಧಿಕಾರದಿಂದ ಹೊರಹಾಕಲ್ಪಟ್ಟವರು ಯಾತ್ರೆಯ ಮೂಲಕ ಅಧಿಕಾರದ ಆಸೆ ಪಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.












Click it and Unblock the Notifications