ಭಾರತ್ ಜೋಡೋ ಯಾತ್ರೆ ತಡೆಯಲು ಬಿಜೆಪಿಯಿಂದ ಹೊಸ ಕುತಂತ್ರ: ರಾಹುಲ್ ಗಾಂಧಿ
ನವದೆಹಲಿ, ಡಿಸೆಂಬರ್ 22: ಕೋವಿಡ್ ನಿಯಮಗಳನ್ನು ಪಾಲಿಸಲು ಸಾಧ್ಯವಾಗದಿದ್ದರೆ, ಭಾರತ್ ಜೋಡೋ ಯಾತ್ರೆಯನ್ನು ಮುಂದೂಡಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ. ಇದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ವಾಗ್ದಾಳಿಗಳಿಗೆ ಕಾರಣವಾಗಿದೆ.
ಈ ವಿಚಾರವಾಗಿ ಹರಿಯಾಣದ ನುಹ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, 'ಈ ಯಾತ್ರೆ ಕಾಶ್ಮೀರದವರೆಗೆ ಸಾಗಲಿದೆ. ಈಗ ಅವರು (ಬಿಜೆಪಿ) ಹೊಸ ಕುತಂತ್ರವನ್ನು ಮಾಡುತ್ತಿದ್ದಾರೆ. ದೇಶದಲ್ಲಿ ಕೋವಿಡ್ ಹೆಚ್ಚುತ್ತಿದೆ. ಆದ್ದರಿಂದ ಯಾತ್ರೆಯನ್ನು ನಿಲ್ಲಿಸಿ ಎಂದು ಅವರು ನನಗೆ ಪತ್ರ ಬರೆದಿದ್ದಾರೆ' ಎಂದು ತಿಳಿಸಿದ್ದಾರೆ.
ಈಗ ಯಾತ್ರೆಯನ್ನು ನಿಲ್ಲಿಸಲು ಸಕಾರಣಗಳನ್ನು ಅವರು ಹುಡುಕುತ್ತಿದ್ದಾರೆ. ಮಾಸ್ಕ್ ಧರಿಸಿ, ಕೋವಿಡ್ ನಿಯಮ ಪಾಲಿಸಿ. ಇಲ್ಲದಿದ್ದರೆ ಯಾತ್ರೆಯನ್ನೇ ನಿಲ್ಲಿಸಿ ಎಂದು ಅವರು ಹೇಳುತ್ತಿದ್ದಾರೆ. ಈ ದೇಶದ ಶಕ್ತಿ ಮತ್ತು ಸತ್ಯಕ್ಕೆ ಅವರು ಹೆದರುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಕೋವಿಡ್ ಹೊಸತಳಿಯ ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್ನಲ್ಲಿ ಗುಜರಾತ್ ಮತ್ತು ಒಡಿಶಾದಲ್ಲಿ ವರದಿಯಾಗಿದೆ. ಆರೋಗ್ಯ ಸಚಿವರು ನಿನ್ನೆ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಇಂದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಭಾರತ್ ಜೋಡೋ ಯಾತ್ರೆ ದೆಹಲಿಗೆ ಪ್ರವೇಶಿಸಲಿದೆ. ಈ ಕ್ರೊನಾಲಜಿಯನ್ನು ನೀವು ಅರ್ಥ ಮಾಡಿಕೊಳ್ಳಿ' ಎಂದು ತಿಳಿಸಿದ್ದಾರೆ.
ಕೋವಿಡ್ ಕುರಿತು ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವೀಯ ಅವರು ಲೋಕಸಭೆಯಲ್ಲಿ ಮಾತನಾಡಿದ್ದಾರೆ.
ಚೀನಾದಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ನಾವು ಗಮನಿಸುತ್ತಿದ್ದೇವೆ. ಜಿನೋಮ್ ಸಿಕ್ವೆನ್ಸಿಂಗ್ ಪರೀಕ್ಷೆ ಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದೇವೆ. ಅಂತರಾಷ್ಟ್ರೀಯ ಪ್ರಯಾಣಿಕ ಆರ್ಟಿಪಿಸಿಆರ್ ಪರೀಕ್ಷೆ ಮಾಡಲು ಹೇಳಿದ್ದೇವೆ ಎಂದು ತಿಳಿಸಿದ್ದಾರೆ. ಕೋವಿಡ್ ಹೊಸ ತಳಿಯ ಸೋಂಕಿನಿಂದ ಬಂದಿರುವ ನಾಲ್ಕು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ. ಈ ಕುರಿತು ತಜ್ಞರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಮಾಲೋಚನೆ ನಡೆಸುತ್ತಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯು ಈಗಾಗಲೇ ನೂರು ದಿನಗಳನ್ನು ಪೂರೈಸಿದೆ. ತಮಿಳು ನಾಡು, ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಯಾತ್ರೆ ಸಾಗಿದೆ. ಪ್ರಸ್ತುತ ಹರಿಯಾಣದಲ್ಲಿದೆ. ಡಿಸೆಂಬರ್ 24ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರವೇಶ ಪಡೆಯಲಿದೆ. ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆ ಕೊನೆಗೊಳ್ಳಲಿದೆ.












Click it and Unblock the Notifications