ರಾಹುಲ್ ಅಧ್ಯಕ್ಷರಾದರೆ ಕಾಂಗ್ರೆಸ್ ಮುಕ್ತ ಭಾರತ ಗುರಿ ಸಲೀಸು: ಯೋಗಿ
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ಅವರಿಗೆ ಕೊಟ್ಟರೆ 'ಕಾಂಗ್ರೆಸ್ ಮುಕ್ತ ಭಾರತ' ಮಾಡಬೇಕು ಅಂದುಕೊಂಡಿರುವ ಬಿಜೆಪಿಯ ಕಾರ್ಯಸೂಚಿ ಬಹಳ ಸುಲಭವಾಗಿ ಈಡೇರುತ್ತದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿ ಕೂರಿಸುವುದು ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಖಾತ್ರಿಯಾದ ಒಂದು ದಿನದ ನಂತರ ಉತ್ತರಪ್ರದೇಶದ ಗೋರಖ್ ಪುರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡುತ್ತಾ ಯೋಗಿ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರಾಗುವ ಮೂಲಕ ರಾಹುಲ್ ಗಾಂಧಿ ಅವರು ಬಿಜೆಪಿಯ ಕಾರ್ಯಸೂಚಿಯಾದ 'ಕಾಂಗ್ರೆಸ್ ಮುಕ್ತ ಭಾರತಕ್ಕೆ' ಅನುಕೂಲ ಮಾಡಿಕೊಟ್ಟಿದ್ದಾರೆ. ವಂಶಪಾರಂಪರ್ಯ ಆಡಳಿತವನ್ನೇ ಕಾಂಗ್ರೆಸ್ ಪ್ರತಿನಿಧಿಸುತ್ತದೆ. ಅಲ್ಲಿ ಸೋನಿಯಾ ಅವರ ನಂತರ ರಾಹುಲ್ ಗಾಂಧಿಯೇ ಅಧ್ಯಕ್ಷರಾಗಬೇಕು. ಇದಕ್ಕಾಗಿ ಅಷ್ಟೆಲ್ಲ ಏಕೆ ಹುಯಿಲೆಬ್ಬಿಸಬೇಕು ಎಂದು ಅವರು ಹೇಳಿದ್ದಾರೆ.
2014ರಲ್ಲಿ ನರೇಂದ್ರ ಮೋದಿಯವರು ನೀಡಿದ್ದ ಕಾಂಗ್ರೆಸ್ ಮುಕ್ತ ಭಾರತದ ಗುರಿ ತಲುಪಲು ರಾಹುಲ್ ಗಾಂಧಿ ಅವರು ಬಿಜೆಪಿಗೆ ಸಲೀಸು ಮಾಡಿಕೊಟ್ಟಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.












Click it and Unblock the Notifications