'ಸಂವಿಧಾನ ಉಳಿಸಿ' ಅಭಿಯಾನಕ್ಕೆ ಇಂದು ರಾಹುಲ್ ಚಾಲನೆ
ನವದೆಹಲಿ, ಏಪ್ರಿಲ್ 23: ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 'ಸಂವಿಧಾನ ಉಳಿಸಿ' ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಂವಿಧಾನದ ಮೇಲಿನ ಆಕ್ರಮಣ ಮತ್ತು ದಲಿತರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಲ್ಲಿಕಾರ್ಜುನ್ ಖರ್ಗೆ, ಗುಲಾಮ್ ನಬಿ ಅಜಾದ್, ಸುಶೀಲ್ ಕುಮಾರ್ ಶಿಂಧೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರಲ್ಲದೆ ಪಕ್ಷದ ಹಾಲಿ ಮತ್ತು ಮಾಜಿ ಜನಪ್ರಿನಿಧಿಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾಸಕರು, ಸಂಸದರು, ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳೂ ಈ ಅಭಿಯಾನದಲ್ಲಿ ಸಕ್ರಿಯ ಪಾತ್ರ ವಹಿಸಲಿದ್ದಾರೆ.
ರಾಜ್ಯ ಕರಾವಳಿಯಲ್ಲಿ ಪ್ರಚಾರ ಮಾಡಲಿದ್ದಾರೆ ಪ್ರಿಯಾಂಕ ವಾದ್ರಾ
ಇವರಲ್ಲದೆ ಯುವಕರು, ಮಹಿಳೆಯರು ಮತ್ತು ಸೇವಾ ದಳದ ಸದಸ್ಯರು ಕೂಡ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಕಾರ್ಯಕ್ರಮ ದೆಹಲಿಯ ತಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯಲಿದೆ.
ಇಲ್ಲಿ ಭಾಗವಹಿಸಿದ ಪ್ರತಿನಿಧಿಗಳು 'ಸಂವಿಧಾನ ಉಳಿಸಿ' ಅಭಿಯಾನದ ವಿಚಾರವನ್ನು ದೇಶದಾದ್ಯಂತ ಹರಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಮತ್ತು ಕಾರ್ಯಕ್ರಮದ ಆಯೋಜಕ ನಿತಿನ್ ರಾವತ್ ಹೇಳಿದ್ದಾರೆ.
ಬಿಜೆಪಿ ಆಡಳಿತಾವಧಿಯಲ್ಲಿ ಸಂವಿಧಾನಕ್ಕೆ ಆಪತ್ತು ಎದುರಾಗಿದೆ. ಸಮುದಾಯಕ್ಕೆ ಶೈಕ್ಷಣಿಕ ಮತ್ತು ಔದ್ಯೋಗಿಕ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ಸಮಾಜದಲ್ಲಿ ಹಲವು ವಿಷಯಗಳ ಬಗ್ಗೆ ಆಕ್ರೋಶವಿದೆ. ಸಭೆಯಲ್ಲಿ ಈ ಬಗ್ಗೆ ಗಮನಹರಿಸಲಾಗುತ್ತದೆ ಎಂದು ಅವರು ವಿವರ ನೀಡಿದ್ದಾರೆ.
2019ರ ಲೋಕಸಭೆ ಚುನಾವಣೆಗೂ ಮುನ್ನ ದಲಿತರನ್ನು ತಲುಪುವ ಉದ್ದೇಶವೂ ಈ ಅಭಿಯಾನದ ಹಿಂದೆ ಇದೆ.