ಬೆಂಗಳೂರಿನಲ್ಲಿಂದು ಅಧಿಕ ಮಳೆ: ಈ ರಾಜ್ಯಗಳಲ್ಲಿ ಅಧಿಕ ಮಾನ್ಸೂನ್ ಮಳೆ- IMD ಎಚ್ಚರಿಕೆ
ಬೆಂಗಳೂರು ಅಕ್ಟೋಬರ್ 6: ದಸರಾ ಹಬ್ಬ ಮುಗಿತು. ಆದರೂ ಕೂಡ ಮುಂಗಾರು ಮಳೆ ನಿಂತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ವಿರಾಮ ತೆಗೆದುಕೊಂಡಿದ್ದ ಮಳೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಜೋರಾಗಿದೆ. ನಗರದಾದ್ಯಂತ ಇಂದು ವರುಣನ ಅರ್ಭಟ ಜೋರಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಮೋಡ ಕವಿತ ವಾತಾವರಣವಿದ್ದು ಈಗ ಹಲವೆಡೆ ಮಳೆಯಾಗುತ್ತಿದೆ. ಜೊತೆಗೆ ಅಕ್ಟೋಬರ್ 7ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಅಧಿಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆ ನೀಡಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಆಗಾಗ ತುಂತುರು ಮಳೆ ದಾಖಲಾಗಿದೆ. ಇಡಿ ದಿನ ಮೋಡ ಕವಿದ ಹಾಗೂ ಚಳಿಯ ವಾತಾವರಣ ಕಂಡು ಬಂದಿದೆ. ಹಿಂಗಾರು ಆರಂಭದ ಸೂಚನೆ ಎಂಬಂತೆ ತಂಪು ಗಾಳಿ ವಿಸ್ತರಿಸುತ್ತಿದೆ. ಜಯನಗರ, ಬನಶಂಕರಿ, ಗಾಂಧಿ ಬಜಾರ್ ಅಧಿಕ ಮಳೆಯಾಗಿದ್ದು, ವಿಜಯನಗರ, ರಾಜಾಜಿ ನಗರ ಹಲವೆಡೆ ತುಂತುರು ಮಳೆಯಾಗುತ್ತಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಅಕ್ಟೋಬರ್ 7ರವರೆಗೆ ಹಗುರದಿಂದ ಸಾಧಾರಣ ಮಳೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಎಲ್ಲೆಲ್ಲಿ IMD ಎಚ್ಚರಿಕೆ
ಭಾರತದ ಅನೇಕ ಪ್ರದೇಶಗಳಲ್ಲಿ ಮುಂಗಾರು ಇನ್ನೂ ಚುರುಕಾಗಿದೆ. ಮುಂಗಾರು ಮಳೆಯಿಂದಾಗಿ ದೇಶದ ಹಲವೆಡೆ ಅಧಿಕ ಮಳೆಯಾಗುತ್ತಿದೆ. ಮಾನ್ಸೂನ್ ಹಲವು ರಾಜ್ಯಗಳಿಂದ ಹಿಂದೆ ಸರಿದಿದೆ. ಆದರೆ ನೈಋತ್ಯ ಮಾನ್ಸೂನ್ನಿಂದಾಗಿ ಇನ್ನೂ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು ಕೆಲವು ಸ್ಥಳಗಳಲ್ಲಿ ಮಾನ್ಸೂನ್ ಮಳೆಯ ಮುನ್ಸೂಚನೆ ನೀಡಿದೆ.
ಸೂಪರ್ ಸೈಕ್ಲೋನ್ ನೋರುದಿಂದಾಗಿ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಹಲವು ಪ್ರದೇಶಗಳಲ್ಲಿ ಹವಾಮಾನದ ಮಾದರಿಯಲ್ಲಿ ಬದಲಾವಣೆ ಕಂಡುಬಂದಿದೆ. ಇಂದು ಕೂಡ ದೇಶದ ಹಲವು ಪ್ರದೇಶಗಳಲ್ಲಿ ಮುಂಗಾರು ಮಳೆಯ ಮುನ್ಸೂಚನೆ ಇದೆ. ಇಂದು ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ ಸೇರಿದಂತೆ ಅನೇಕ ನೆರೆಯ ರಾಜ್ಯಗಳು ಮುಂಗಾರು ಮಳೆಯನ್ನು ಅನುಭವಿಸಬಹುದು. ಉತ್ತರ ಪ್ರದೇಶ, ಮಧ್ಯಪ್ರದೇಶ, ಪೂರ್ವ ರಾಜಸ್ಥಾನ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ.
ದೆಹಲಿಯಲ್ಲಿ ಮಳೆ ಎಚ್ಚರಿಕೆ
ಇಂದು ದೆಹಲಿಯ ಹಲವು ಪ್ರದೇಶಗಳಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆಯಿದೆ. IMD ಪ್ರಕಾರ, ಅಕ್ಟೋಬರ್ 9 ರವರೆಗೆ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಹಲವು ಪ್ರದೇಶಗಳಲ್ಲಿ ಹಗುರದಿಂದ ಭಾರಿ ಮಾನ್ಸೂನ್ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು ರಾಜ್ಯದಲ್ಲಿ ಭಾರೀ ಮಳೆಗಾಗಿ ಹಳದಿ ಎಚ್ಚರಿಕೆಯನ್ನು ನೀಡಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಅಂಡಮಾನ್, ನಿಕೋಬಾರ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಒಡಿಶಾ, ತಮಿಳುನಾಡು, ಪುದುಚೇರಿ ಮತ್ತು ಆಂಧ್ರಪ್ರದೇಶದಲ್ಲಿ ಇಂದು ಹಗುರದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಛತ್ತೀಸ್ಗಢದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಯಾನಂ, ಪುದುಚೇರಿ, ಕಾರೈಕಲ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸದ್ಯಕ್ಕೆ ಮುಂಗಾರು ಮಳೆ ಮುಂದುವರಿಯಲಿದೆ.
ಒಡಿಶಾ, ಯುಪಿಯಲ್ಲಿ ಮಳೆ
ಖಾಸಗಿ ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ವೆದರ್ ಒಡಿಶಾ, ಉತ್ತರ ಪ್ರದೇಶ, ಛತ್ತೀಸ್ಗಢ, ತೆಲಂಗಾಣ ಮತ್ತು ಮಧ್ಯಪ್ರದೇಶದ ಕೆಲವು ಸ್ಥಳಗಳಲ್ಲಿ ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ. ಪೂರ್ವ ಭಾಗದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಉತ್ತರಾಖಂಡದ ಕೇಂದ್ರ ಭಾಗಗಳಲ್ಲಿ ಮಳೆಯಾಗಲಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಮೇಲಿನ ಪ್ರದೇಶಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.
ಕೊಂಕಣ, ಗೋವಾ, ಕರಾವಳಿ ಕರ್ನಾಟಕ ಮಳೆ ಸೂಚನೆ
ಪಶ್ಚಿಮ ಬಂಗಾಳ, ಬಿಹಾರ ಮತ್ತು ಜಾರ್ಖಂಡ್ ನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಈಶಾನ್ಯ ಭಾರತ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಕರಾವಳಿ ಕರ್ನಾಟಕ, ಪಶ್ಚಿಮ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು, ಆಂಧ್ರಪ್ರದೇಶ, ಕೇರಳ ಮತ್ತು ದೆಹಲಿಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.