ಚೆನ್ನೈನಲ್ಲಿ ಎಡೆಬಿಡದೆ ಸುರಿದ ಮಳೆ: ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ- ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?
ಚೆನ್ನೈ, ಆಗಸ್ಟ್ 14: ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಭಾನುವಾರ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಪ್ರದೇಶಗಳು ತೀವ್ರ ಜಲಾವೃತವಾಗಿದೆ. ಚೆನ್ನೈನ ಪ್ರಮುಖ ಏರಿಯಾಗಳಾದ ಮೌಂಟ್ರೋಡ್ ಮತ್ತು ನುಂಗಂಬಾಕ್ಕಂನ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.
ಸೋಮವಾರ ಬೆಳಗ್ಗೆ ಮಳೆಯ ತೀವ್ರತೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಡಳಿತ ಪ್ರಕಟಿಸಿದೆ.

ಸೋಮವಾರ ಬೆಳಿಗ್ಗೆ 5.30 ರ ವರೆಗೆ ವಿಮಾನ ನಿಲ್ದಾಣವು 90 ಮಿಮೀ ಮಳೆಯನ್ನು ದಾಖಲಿಸಿದೆ. 1943 ರಿಂದ ಆಗಸ್ಟ್ ತಿಂಗಳಿನಲ್ಲಿ ಎರಡನೇ ಬಾರಿ ಅತಿ ಹೆಚ್ಚು ಮಳೆಯಾಗಿದೆ. 1967ರ ಆಗಸ್ಟ್ 16ರಂದು ಅತಿ ಹೆಚ್ಚು ( 98.7 ಮಿ.ಮೀ.) ಅಧಿಕ ಮಳೆಯಾಗಿತ್ತು ಎಂದು ಹವಾಮಾನ ಇಲಾಖೆಯ ದಾಖಲೆಗಳು ಹೇಳಿವೆ.
ಚೆನ್ನೈನ ಜಾಮಿನ್ ಕೊರಟ್ಟೂರ್ ಪ್ರದೇಶದಲ್ಲಿ 144 ಮಿಮೀ ಮತ್ತು ಅಂಬತ್ತೂರ್ನಲ್ಲಿ 100 ಮಿಮೀ ಮಳೆ ಬಿದ್ದಿದೆ. ಪೂನಮಲ್ಲೆ, ಮುಗಲಿವಾಕ್ಕಂ, ಮಧುರವೊಯಲ್, ಮುಗಲಿವಾಕ್ಕಂ ಮತ್ತು ಮಲಾರ್ ಕಾಲೋನಿಗಳಲ್ಲಿ 100 ಮಿಮೀಗಿಂತ ಹೆಚ್ಚು ಮಳೆಯಾಗಿದೆ. ಮಧ್ಯ ಮತ್ತು ದಕ್ಷಿಣ ಚೆನ್ನೈನಲ್ಲಿ ಹೆಚ್ಚಿನ ಮಳೆಯಾಗಿದೆ.
ಚೆನ್ನೈನಲ್ಲಿ ಮಳೆ ಸುರಿಯುತ್ತಿರುವುದರಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಇಲ್ಲಿಯ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮುಂದಿನ ಇಪ್ಪತ್ನಾಲ್ಕು ಗಂಟೆಗಳ ಕಾಲ ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಬಿಲಾಸ್ಪುರ್, ಚಂಬಾ, ಹಮೀರ್ಪುರ್, ಕಂಗ್ರಾ, ಕುಲು, ಮಂಡಿ, ಶಿಮ್ಲಾ, ಸಿರ್ಮೌರ್, ಸೋಲನ್, ಉನಾ, ಕಿನ್ನೌರ್ನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಲಾಹೌಲ್, ಸ್ಪಿತಿ ಸೇರಿದಂತೆ ಒಂದೆರಡು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಬಾಲ್ಹ್ ಕಣಿವೆಯಲ್ಲಿ ಭಾನುವಾರವೂ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ.

ನೆರೆಯಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 12ರಿಂದ 14 ರ ವರೆಗೆ ಶಿಮ್ಲಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕವಾದ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಭೂಕುಸಿತ ಹಾಗೂ ಬಂಡೆ ಕುಸಿತಗಳು ಸಾಮಾನ್ಯವಾಗಿವೆ. ರಾತ್ರಿಯಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಹಿಮಾಚಲ ಪ್ರದೇಶ ಪೊಲೀಸರು ನಾಗರಿಕರಿಗೆ ಸಲಹೆಯನ್ನು ನೀಡಿದ್ದಾರೆ.
ನಿನ್ನೆ ಸಂಜೆ ಶಿಮ್ಲಾ ನಗರದ ಶಿವ ದೇವಾಲಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಸೋಲನ್ನಲ್ಲಿ ಮೇಘಸ್ಫೋಟದ ನಂತರ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ಎರಡು ದಿನಗಳಲ್ಲಿ ಸಾವಿನ ಸಂಖ್ಯೆ 21 ಕ್ಕೆ ತಲುಪಿದೆ. ಹಿಮಾಚಲ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.












Click it and Unblock the Notifications