ಉತ್ತರ ಭಾರತದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ
ನವದೆಹಲಿ, ಆಗಸ್ಟ್.27: ಉತ್ತರ ಭಾರತದಲ್ಲಿ ಗುರುವಾರ ಕೂಡಾ ವರುಣನ ರೌದ್ರನರ್ತನ ಮುಂದುವರಿಯಲಿದೆ. ರಾಜಸ್ಥಾನ, ಗುಜರಾತ್ ಮತ್ತು ನವದೆಹಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಕೆಳಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಾಗಿದೆ. ಇದರಿಂದ ದಕ್ಷಿಣ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಲಿದ್ದು, ಶುಕ್ರವಾರ ವರುಣ ಅಬ್ಬರಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ದೆಹಲಿಯಲ್ಲಿ ಎರಡು ಗಂಟೆಗಳಲ್ಲೇ ಭಾರಿ ಮಳೆಯ ಮುನ್ಸೂಚನೆ
ಹಿಮಾಚಲ ಪ್ರದೇಶ, ಉತ್ತರಾಖಂಡ್, ನವದೆಹಲಿ, ರಾಜಸ್ಥಾನದ ಪಶ್ಚಿಮ ಭಾಗ ಮತ್ತು ಉತ್ತರ ಪ್ರದೇಶದಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯಿಂದಾಗಿ ಹಿನ್ನೆಲೆ ಎಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚನೆ ನೀಡಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಎಚ್ಚರಿಕೆ:
ಪಂಜಾಬ್, ಹರಿಯಾಣ, ಚಂಡೀಗಢ್, ದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಸಲಾಗಿದೆ. ಗುರುವಾರ ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಉತ್ತರಾಖಂಡ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬುಧವಾರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರಾಖಂಡ್ ನಲ್ಲಿ ಗುರುವಾರವೂ ವರುಣದೇವ ಅಬ್ಬರಿಸುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸ್ಥಳೀಯರಿಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗುವ ಆತಂಕವಿದ್ದು, ಸುರಕ್ಷಿತವಾಗಿರುವಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಇನ್ನು, ಮಳೆಯ ದಾಖಲೆಯ ಪ್ರಕಾರ, 15 ಮಿ.ಮೀ ಮಳೆಯನ್ನು ಅಲ್ಪ, 15 ರಿಂದ 64.5 ಮಿ.ಮೀ ಮಳೆಯನ್ನು ಸಾಧಾರಣ ಮತ್ತು 64.5 ಮಿ.ಮೀಟರ್ ಗಿಂತ ಹೆಚ್ಚಿನ ಮಳೆಯನ್ನು ಭಾರಿ ಮಳೆ ಎಂದು ಗುರುತಿಸಲಾಗುತ್ತದೆ.