ಮದುವೆಗೆ ಸೇರಿದ್ದ ಮನೆಯಲ್ಲಿ ಸಿಲಿಂಡರ್ ಸ್ಫೋಟ: ಐದು ಸಾವು, 60ಕ್ಕೂ ಹೆಚ್ಚು ಗಾಯಾಳು
ಜೈಪುರ, ಡಿ. 09: ರಾಜಸ್ಥಾನದ ಜೋಧ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲಿಂಡರ್ ಸ್ಫೋಟದಿಂದ ಐದು ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೋಧ್ಪುರ ಜಿಲ್ಲೆಯ ಶೆರ್ಗಢ್ ಉಪವಿಭಾಗದ ಭುಂಗ್ರಾ ಗ್ರಾಮದಲ್ಲಿ ಮದುವೆಗೆ ಎಂದು ಅತಿಥಿಗಳು ಸೇರಿದ್ದ ಮನೆಯಲ್ಲಿ ಈ ದುರಂತ ಘಟನೆ ನಡೆದಿದೆ.
Gujarat Election Results 2022: ತನ್ನ ಸೋಲಿಗೆ ತನ್ನನ್ನೇ ದೂಷಿಸಬೇಕು ಕಾಂಗ್ರೆಸ್
ಅಡುಗೆ ಅನಿಲದ ಸಿಲಿಂಡರ್ ಸ್ಫೋಟದ ಪ್ರಭಾವದಿಂದ ಮನೆಯ ಒಂದು ಭಾಗವೂ ಕುಸಿದಿದೆ ಎಂದು ಪೊಲೀಸರು ಹೇಳಿದ್ದಾರೆ. ದುರಂತದಲ್ಲಿ 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಕೆಲವರಿಗೆ ಶೇ 80ರಿಂದ 100ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಇಬ್ಬರು ಮಕ್ಕಳಾದ ರತನ್ ಸಿಂಗ್ (5) ಮತ್ತು ಖುಷ್ಬೂ (4) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸುಟ್ಟ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ 60 ಮಂದಿಯಲ್ಲಿ 42 ಮಂದಿಯನ್ನು ಎಂಜಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ. 12 ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮಾಹಿತಿ ನೀಡಿದ್ದಾರೆ.
ಮುದುವೆ ನಡೆಯುತ್ತಿದ್ದ ಕಾರಣ ಮದುಮಗ ಸುರೇಂದ್ರ ಸಿಂಗ್ ಅವರ ಮನೆಯಲ್ಲಿ ಅತಿಥಿಗಳು ಜಮಾಯಿಸಿದ್ದರು. ಅತಿಥಿಗಳಿಗಾಗಿ ಊಟಕ್ಕೆ ಸಿದ್ದಪಡಿಸುತ್ತಿದ್ದಾಗ ಮನೆಯ ಸ್ಟೋರ್ ರೂಂನಲ್ಲಿ ಇರಿಸಲಾಗಿದ್ದ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ ಎಂದು ಜೋಧ್ಪುರ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅನಿಲ್ ಕಯಾಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೇಂದ್ರ ಸಚಿವ ಮತ್ತು ಜೋಧ್ಪುರ ಸಂಸದ ಗಜೇಂದ್ರ ಸಿಂಗ್ ಶೇಖಾವತ್ ಅವರು ಪ್ರಾಣಹಾನಿಗಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಸಂಜೆ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ.