ರಾಜೀವ್ ಹಂತಕರ ಬಿಡುಗಡೆ: ರಾಜ್ಯಪಾಲರ ಅಭಿಪ್ರಾಯ ಪಡೆಯಲು ಸೂಚನೆ
ನವದೆಹಲಿ, ಸೆಪ್ಟೆಂಬರ್ 6: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಲು ಮನವಿ ಸಲ್ಲಿಸಿರುವ ತಮಿಳುನಾಡು ಸರ್ಕಾರವನ್ನು ರಾಜ್ಯಪಾಲರ ಬಳಿ ಹೋಗುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರಿಗೆ ಬಿಡುಗಡೆ ಭಾಗ್ಯವಿಲ್ಲ
ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ಸುಪ್ರೀಂಕೋರ್ಟ್ ದ್ವಿಸದಸ್ಯ ನ್ಯಾಯಪೀಠ, ಅಪರಾಧಿಗಳ ತ್ವರಿತ ಬಿಡುಗಡೆಗೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಗೊಳಿಸಿತು.
ಈ ಸಂಬಂಧ ರಾಜ್ಯದ ರಾಜ್ಯಪಾಲರ ಅಭಿಪ್ರಾಯ ಮತ್ತು ನಿರ್ದೇಶನಗಳನ್ನು ಪಾಲಿಸುವಂತೆ ಅದು ತಿಳಿಸಿದೆ.
ಏಳು ಅಪರಾಧಿಗಳ ಬಿಡುಗಡೆಯ ಪ್ರಸ್ತಾವವನ್ನು ರಾಷ್ಟ್ರಪತಿಗಳು ತಿರಸ್ಕರಿಸಿರುವುದಾಗಿ ಆಗಸ್ಟ್ 10ರಂದು ಕೇಂದ್ರ ಸರ್ಕಾರ ತಿಳಿಸಿತ್ತು.
ರಾಜೀವ್ ಗಾಂಧಿ ಹತ್ಯೆ, ಕರುಣಾನಿಧಿ ಮತ್ತು ಕಾಂಗ್ರೆಸ್: ಏನೀ ಸಂಬಂಧ?
ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಎಲ್ಲ ಏಳು ಅಪರಾಧಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆ ಮಾಡುವಂತೆ 2016ರಲ್ಲಿ ತಮಿಳುನಾಡು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು.
ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಷ್ಟ್ರಪತಿ ನಕಾರ
ಈ ನಿರ್ಧಾರದ ಕುರಿತಂತೆ ತನ್ನ ನಿಲುವಿನ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಅದರಂತೆ ಕೇಂದ್ರವು ಅಫಿಡವಿಟ್ ಸಲ್ಲಿಸಿತ್ತು.
1991ರ ಮೇ ತಿಂಗಳಿನಲ್ಲಿ ತಮಿಳುನಾಡಿನ ಶ್ರೀ ಪೆರಂಬದೂರಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ರಾಜೀವ್ ಗಾಂಧಿ ಅವರನ್ನು ಎಲ್ಟಿಟಿಇಗೆ ಸೇರಿದ ಆತ್ಮಾಹುತಿ ಬಾಂಬರ್ ಹತ್ಯೆ ಮಾಡಿದ್ದರು.
ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ ಏಳು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಅವರೆಲ್ಲರೂ 27 ವರ್ಷಗಳಿಂದ ಜೈಲಿನಲ್ಲಿದ್ದಾರೆ.