ಕನ್ನಡದಲ್ಲಿ ಟ್ವೀಟ್ ಮಾಡಿ ಪ್ರಧಾನಿ ಗಮನ ಸೆಳೆದ ಸುರ್ಜೆವಾಲ!
ಬೆಂಗಳೂರು, ಅ. 17: ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಎಂಬಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರೂ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಭೀಮಾ ನದಿಯ ಪ್ರವಾಹದಿಂದಾಗಿ ಉತ್ತರ ಹಾಗೂ ಕಲ್ಯಾಣ ಕರ್ನಾಟಕದ ಜನರು ತತ್ತರಿಸಿ ಹೋಗಿದ್ದಾರೆ. ನೂರಾರು ಹಳ್ಳಿಗಳಲ್ಲಿ ಜನರು ತಮ್ಮ ಮನೆ-ಮಠ, ಆಸ್ತಿ-ಪಾಸ್ತಿಗಳನ್ನು ಕಳೆದುಕೊಂಡು ದಿಕ್ಕೇ ತೋಚದೇ ಕಂಗಾಲಾಗಿದ್ದಾರೆ. ಕಳೆದ 30 ವರ್ಷಗಳಲ್ಲಿ ಕಂಡಿರದ ಪ್ರವಾಹ ಇದಾಗಿದೆ. ಐತಿಹಾಸಿಕ ಚಂದ್ರಲಾ ಪರಮೇಶ್ವರಿ ದೇವಸ್ಥಾನ ಮತ್ತು ಬುದ್ದ ದೇವಾಲಯಗಳು ಕೂಡ ಮುಳುಗಿ ಹೋಗಿವೆ.
ಸಾವಿರಾರು ಎಕರೆ ರೈತರ ಜಮೀನು ಸಂಪೂರ್ಣ ಜಲಾವೃತವಾಗಿದ್ದು, ಅನ್ನದಾತರಿಗೆ ಭಾರಿ ನಷ್ಟವಾಗಿದೆ. ಆದರೆ ರಾಜ್ಯದ ಹಾಗೂ ಕೇಂದ್ರದ ಮಂತ್ರಿಗಳು ಈವರೆಗೂ ಇತ್ತ ತಲೆ ಹಾಕಿಲ್ಲ. ಬಂದವರೂ ಕಾಟಾಚಾರಕ್ಕೆ ಬಂದು ಹೋಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈ ಕೂಡಲೇ ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಬೇಕೆಂದು ಆಗ್ರಹಿಸುತ್ತೇನೆ.

ಅಲ್ಲದೆ, ಪ್ರವಾಹ ಪೀಡಿತರ ರಕ್ಷಣೆಗಾಗಿ ಕೂಡಲೇ ಎನ್ಡಿಆರ್ಎಫ್ ತಂಡಗಳನ್ನು ನೆರೆಪೀಡಿತ ಎಲ್ಲ ಪ್ರದೇಶಗಳಿಗೆ ನಿಯೋಜಿಸಬೇಕು. ಬೆಳೆ ಪರಿಹಾರ ಸೇರಿದಂತೆ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪರಿಹಾರ ಕಾರ್ಯಗಳಿಗೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಈ ಮೂಲಕ ಆಗ್ರಹಿಸುತ್ತಿದ್ದೇನೆ ಎಂದು ರಣದೀಪ್ ಸುರ್ಜೆವಾಲಾ ಟ್ವೀಟ್ಮೂಲಕ ಆಗ್ರಹಿಸಿದ್ದಾರೆ.












Click it and Unblock the Notifications