Rishabh Pant: ಆಸ್ಪತ್ರೆಗೆ ಬರುವುದನ್ನು ನಿಲ್ಲಿಸಿ ಎಂದು ರಿಷಬ್ ಅಭಿಮಾನಿಗಳಿಗೆ ಕ್ರಿಕೆಟ್ ಸಂಸ್ಥೆ ಮನವಿ
ನವದೆಹಲಿ, ಜ. 01: ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಅವರು ಉತ್ತರಾಖಂಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಬರುತ್ತಿರುವ ಅಭಿಮಾನಿಗಳನ್ನು ಕಂಡು ಕಳವಳ ವ್ಯಕ್ತಪಡಿಸಿದ್ದಾರೆ.
"ರಿಷಬ್ ಪಂತ್ ಅವರನ್ನು ಭೇಟಿ ಮಾಡಲು ಹೋಗುವವರು, ತಕ್ಷಣ ಅದನ್ನು ನಿಲ್ಲಿಸಬೇಕು. ಏಕೆಂದರೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ ಭೇಟಿಯಾಗುವುದನ್ನು ತಪ್ಪಿಸಬೇಕು" ಎಂದು ಹೇಳಿದ್ದಾರೆ.
"ರಿಷಬ್ ಪಂತ್ ಅವರನ್ನು ಭೇಟಿ ಮಾಡಲು ಬರುವ ಯಾವುದೇ ವಿಐಪಿಗೂ ಅವಕಾಶ ನೀಡಬಾರದು. ಪಂತ್ಗೆ ಸೋಂಕಿನ ಸಾಧ್ಯತೆಗಳಿರುವುದರಿಂದ ಅವರನ್ನು ಭೇಟಿ ಮಾಡುವ ಜನರು ಅದನ್ನು ನಿಲ್ಲಿಸಬೇಕು" ಎಂದು ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ.

ಡಿಡಿಸಿಎ ನಿರ್ದೇಶಕ ಶ್ಯಾಮ್ ಶರ್ಮಾ ಶನಿವಾರ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ಆಗಮಿಸಿ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಭೇಟಿ ಮಾಡಿ ಪಂತ್ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
"ಅವರ ಆರೋಗ್ಯ ಸ್ಥಿರವಾಗಿದ್ದಾರೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಬಿಸಿಸಿಐ ವೈದ್ಯರು ಇಲ್ಲಿನ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ. ಜಯ್ ಶಾ ಅವರು ಪಂತ್ ಆರೋಗ್ಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯಕ್ಕೆ, ಅವರು ಇಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ" ಎಂದು ಶ್ಯಾಮ್ ಶರ್ಮಾ ಹೇಳಿದ್ದಾರೆ.
"ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ತಂಡವು ಅವರ ಆರೋಗ್ಯವನ್ನು ಮೇಲ್ವಿಚಾರಣೆ ಮಾಡಲು ಮ್ಯಾಕ್ಸ್ ಆಸ್ಪತ್ರೆಗೆ ಡೆಹ್ರಾಡೂನ್ಗೆ ಹೋಗುತ್ತಿದೆ. ಪ್ಲಾಸ್ಟಿಕ್ ಸರ್ಜರಿಗಾಗಿ ಅಗತ್ಯವಿದ್ದರೆ ನಾವು ಅವರನ್ನು ದೆಹಲಿಗೆ ಸ್ಥಳಾಂತರಿಸುತ್ತೇವೆ. ನಾವು ಅವರನ್ನು ಏರ್ಲಿಫ್ಟ್ ಮಾಡುವ ಸಾಧ್ಯತೆಗಳು ಹೆಚ್ಚು" ಎಂದು ಶುಕ್ರವಾರ ಹೇಳಿದ್ದರು.

ತನ್ನ ಕಾರನ್ನು ರಸ್ತೆ ಗುಂಡಿಗಳಿಂದ ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪಂತ್ ಹೇಳಿರುವುದಾಗಿ ಶ್ಯಾಮ್ ಶರ್ಮಾ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಶುಕ್ರವಾರ ಮುಂಜಾನೆ 25 ವರ್ಷದ ರಿಷಬ್ ಪಂತ್ ಉತ್ತರಾಖಂಡದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದಾಗ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಅವಘಡ ಸಂಭವಿಸಿದೆ. ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡುವೆ ಅವರ ಕಾರು ಅಪಘಾತಕ್ಕೀಡಾಗಿದೆ. ರೂರ್ಕಿ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ.












Click it and Unblock the Notifications