ಪರೀಕ್ಷೆ ಮುಂದೂಡಲು ಪ್ರದ್ಯುಮ್ನ ಹತ್ಯೆ ನಡೆಯಿತು!
ಗುರ್ಗಾಂವ್, ನವೆಂಬರ್ 8 : ರಾಯನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣ ವಿಚಿತ್ರ ತಿರುವು ಪಡೆದುಕೊಳ್ಳುತ್ತಿದೆ. ಪರೀಕ್ಷೆ ಮತ್ತು ಪೋಷಕರ ಸಭೆ ಮುಂದೂಡಲು ಕೊಲೆ ಮಾಡಲಾಗಿತ್ತು ಎಂಬುದು ಬಹಿರಂಗವಾಗಿದೆ.
ಪ್ರದ್ಯುಮ್ನ ಹತ್ಯೆ : ಹನ್ನೊಂದನೇ ತರಗತಿ ವಿದ್ಯಾರ್ಥಿ ವಶಕ್ಕೆ
ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 11ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಇಂದು ಮಧ್ಯಾಹ್ನ 2ಗಂಟೆಗೆ ವಿದ್ಯಾರ್ಥಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.
ಸಿಬಿಐ ವಕ್ತಾರರು 11ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ಖಚಿತ ಪಡಿಸಿದ್ದಾರೆ. ನಡೆಯಬೇಕಿದ್ದ ಪರೀಕ್ಷೆ ಮುಂದೂಡಲು ಮತ್ತು ಪೋಷಕರ ಸಭೆಯನ್ನು ರದ್ದುಗೊಳಿಸಲು ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ.
11ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿರುವುದನನ್ನು ಅವರ ತಂದೆ ಸಹ ಖಚಿತಪಡಿಸಿದ್ದಾರೆ. ಇಂದು ಮಧ್ಯಾಹ್ನ 2ಗಂಟೆಗೆ ಸಿಬಿಐ ಅಧಿಕಾರಿಗಳು ವಿದ್ಯಾರ್ಥಿಯನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಆರೋಪಿಯ ವಯಸ್ಸು 17 ವರ್ಷಗಳಾಗಿದ್ದು ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುತ್ತದೆ.
ಸೆ.8ರಂದು ಶಾಲೆಗೆ ತೆರಳಿದ್ದ 2ನೇ ತರಗತಿ ವಿದ್ಯಾರ್ಥಿ ಪ್ರದ್ಯುಮ್ನ ಠಾಕೂರ್ ಮೃತದೇಹ ಶಾಲೆಯ ಶೌಚಾಲಯದಲ್ಲಿ ಪತ್ತೆಯಾಗಿತ್ತು. ಮೊದಲು ಈ ಕೊಲೆ ಪ್ರಕರಣದ ತನಿಖೆಗೆ ಹರ್ಯಾಣ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಬಾಲಕನ ತಂದೆ ಸಿಬಿಐ ತನಿಖೆ ನಡೆಸುವಂತೆ ಒತ್ತಾಯಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ನಂತರ ತನಿಖೆ ಸಿಬಿಐಗೆ ಹಸ್ತಾಂತರವಾಗಿತ್ತು.