ಎಸ್.ಎಂ. ಕೃಷ್ಣ ಅಧಿಕೃತವಾಗಿ ಬಿಜೆಪಿ ಸೇರ್ಪಡೆ
ಕಾರಣಾಂತರಗಳಿಂದ ಮುಂದೂಡಲ್ಪಟ್ಟಿದ್ದ ಎಸ್.ಎಂ. ಕೃಷ್ಣ ಅವರ ಬಿಜೆಪಿ ಸೇರ್ಪಡೆಗೆ ಈಗ ಕಾಲ ಕೂಡಿಬಂದಿದೆ.
ನವದೆಹಲಿ, ಮಾರ್ಚ್ 22: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ರಾಜಕೀಯದ ಹಿರಿಯ ಮುತ್ಸದ್ದಿ ಎಸ್.ಎಂ. ಕೃಷ್ಣ ಅವರು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ.
ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀ ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಪಡೆಯುವ ಮೂಲಕ ವಿದ್ಯುಕ್ತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ, ಕೇಂದ್ರ ಸಚಿವರಾದ ಸದಾನಂದ ಗೌಡ, ಅನಂತ ಕುಮಾರ್, ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಹಾಜರಿದ್ದರು.
ಇದೇ ತಿಂಗಳ 15ರಂದೇ ಕೃಷ್ಣ ಅವರು ಬಿಜೆಪಿ ಸೇರುವುದು ಖಚಿತವಾಗಿತ್ತು. ಆ ಹಿನ್ನೆಲೆಯಲ್ಲಿ ಅವರು ಅದರ ಹಿಂದಿನ ದಿನವೇ (ಮಾರ್ಚ್ 14) ದೆಹಲಿಗೂ ತೆರಳಿದ್ದರು. ಆದರೆ, ಅಂದೇ ಕೃಷ್ಣ ಅವರ ಸಹೋದರಿ ನಿಧನರಾದ ಹಿನ್ನೆಲೆಯಲ್ಲಿ ಅವರ ಬಿಜೆಪಿ ಸೇರ್ಪಡೆಯನ್ನು ಮುಂದೂಡಲಾಗಿತ್ತು.

ಅಮಿತ್ ಪ್ರತಿಕ್ರಿಯೆ: ಕೃಷ್ಣ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ನಂತರ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ''ಕೃಷ್ಣ ಅವರ ಬಿಜೆಪಿ ಸೇರ್ಪಡೆಯಿಂದಾಗಿ ಬಿಜೆಪಿ ಮತ್ತಷ್ಟು ಶಕ್ತಿಶಾಲಿಯಾಗಿದೆ'' ಎಂದು ತಿಳಿಸಿದ್ದಾರೆ.

ಈ ಮೂಲಕ 1962ರಲ್ಲಿ ಪ್ರಜಾ ಸೋಷಿಯಲಿಸ್ಟ್ ಪಕ್ಷದಿಂದ ರಾಜಕೀಯ ಪ್ರವೇಶಿಸಿದ್ದ ಎಸ್.ಎಂ. ಕೃಷ್ಣ, ಆನಂತರ ಕಾಂಗ್ರೆಸ್ ಸೇರಿ ಹಲವಾರು ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದಲ್ಲದೆ, ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರದಲ್ಲಿ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿದ್ದಾರೆ.











Click it and Unblock the Notifications