ಸನಾತನ ಧರ್ಮದ ಕುರಿತು ಪದೇ ಪದೇ ಮಾತನಾಡುತ್ತಲೇ ಇರುತ್ತೇನೆ: ಮತ್ತೆ ಹೇಳಿಕೆ ನೀಡಿದ ಉದಯನಿಧಿ ಸ್ಟಾಲಿನ್
ಚೆನ್ನೈ , ಸೆಪ್ಟೆಂಬರ್ 04: ಸನಾತನ ಧರ್ಮ ನಿರ್ಮೂಲನೆ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯು ದೇಶದಾದ್ಯಂತ ವಿವಾದವನ್ನೇ ಸೃಷ್ಟಿ ಮಾಡಿದೆ. ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಉದಯನಿಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಆದರೆ, ಉದಯನಿಧಿ ಸ್ಟಾಲಿನ್ ಅವರು ತಮ್ಮ ಹೇಳಿಕೆಗೆ ಬದ್ಧವಾಗಿ ನಿಂತಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ'ಗೆ ಪ್ರತಿಕ್ರಿಯಿಸಿರುವ ಅವರು, 'ಮೊನ್ನೆ ನಾನು ಅದರ ಬಗ್ಗೆ (ಸನಾತನ ಧರ್ಮ) ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದೆ. ನಾನು ಮತ್ತೆ ಮತ್ತೆ ಅದನ್ನೇ ಹೇಳುತ್ತೇನೆ. ಹಿಂದೂಗಳಷ್ಟೇ ಅಲ್ಲ. ಎಲ್ಲ ಧರ್ಮಗಳನ್ನೂ ಸೇರಿಸಿಯೇ ನಾನು ಮಾತನಾಡಿದ್ದೇನೆ. ಜಾತಿ ಭೇದಗಳನ್ನು ಖಂಡಿಸಿ ಮಾತನಾಡಿದ್ದೇನೆ ಅಷ್ಟೇ' ಎಂದು ಉದಯನಿಧಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಚೆನ್ನೈನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಉದಯನಿಧಿ ಸ್ಟಾಲಿನ್, 'ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಅದನ್ನು ನಿರ್ಮೂಲನೆ ಮಾಡಬೇಕು' ಎಂದು ಹೇಳಿದ್ದಾರೆ.

ಸನಾತನ ಧರ್ಮವು ಕೊರೊನಾ ವೈರಸ್, ಮಲೇರಿಯಾ ಮತ್ತು ಡೆಂಗ್ಯೂ ಇದ್ದ ಹಾಗೆ. ಇಂತಹ ವಿಷಯಗಳನ್ನು ವಿರೋಧಿಸಬಾರದು. ಆದರೆ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಉದಯನಿಧಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದೆ. ಉದಯನಿಧಿ ಅವರು ಹಿಂದುಗಳ ನರಮೇಧಕ್ಕೆ ಕರೆ ನೀಡಿದ್ದಾರೆ ಎಂದು ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಉದಯನಿಧಿ, ಬಿಜೆಪಿ ನನ್ನ ಹೇಳಿಕೆಯನ್ನು ತಿರುಚಿದೆ. ಸುಳ್ಳು ಸುದ್ಧಿ ಹಬ್ಬಿಸುತ್ತಿದೆ ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸನಾತನ ಧರ್ಮವನ್ನು ಅನುಸರಿಸುತ್ತಿರುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ. ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಬೇರು ಸಮೇತ ಕಿತ್ತು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿ ಹಿಡಿಯಬೇಕು' ಎಂದು ತಿಳಿಸಿದ್ದಾರೆ.

'ನಾನು ಹೇಳಿದ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ನಾನು ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಜನರ ಪರವಾಗಿ ಮಾತನಾಡಿದ್ದೇನೆ' ಎಂದು ಅವರು ಹೇಳಿದ್ದಾರೆ.
'ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ' ಎಂದೂ ಅವರು ತಿಳಿಸಿದ್ದಾರೆ.
'ನನ್ನ ಭಾಷಣದ ನಿರ್ಣಾಯಕ ಅಂಶವನ್ನು ನಾನು ಪುನರುಚ್ಚರಿಸುತ್ತೇನೆ. ಕೊರೊನಾ, ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂಬುದಾಗಿ ನಾನು ನಂಬುತ್ತೇನೆ' ಎಂದು ಹೇಳಿದ್ದಾರೆ.
ನ್ಯಾಯಾಲಯ ಅಥವಾ ಜನತಾ ನ್ಯಾಯಾಲಯದಲ್ಲಿ ಯಾವುದೇ ಸವಾಲುಗಳನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಿ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.












Click it and Unblock the Notifications