ಪ್ರಧಾನಿ ನರೇಂದ್ರ ಮೋದಿ ಜೊತೆ ಹೆಚ್ಚು ಹೊತ್ತು ಮಾತಾಡಿಲ್ಲ; ಸತ್ಯಪಾಲ್ ಮಲ್ಲಿಕ್ ಸ್ಪಷ್ಟನೆ
ನವದೆಹಲಿ. ಜನವರಿ 3: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳು ಮತ್ತು ರೈತರ ಪ್ರತಿಭಟನೆ ಕುರಿತು ಚರ್ಚೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಘಟನೆಗೆ ಸಂಬಂಧಿಸಿದಂತೆ ತಾವು ನೀಡಿದ ಹೇಳಿಕೆಗೆ ಮೇಘಾಲಯದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಸ್ಪಷ್ಟನೆ ಕೊಟ್ಟಿದ್ದಾರೆ.
"ಮೂರು ಕೃಷಿ ಕಾಯ್ದೆಗಳ ಬಗ್ಗೆ ಚರ್ಚಿಸಲು ನಾನು ಪ್ರಧಾನಿಯನ್ನು ಭೇಟಿಯಾದಾಗ, ಅವರು ಹೆಚ್ಚು ಹೊತ್ತು ಮಾತನಾಡುವುದಕ್ಕೆ ಸಿಗಲಿಲ್ಲ, ನನ್ನ ಮಾತು ಕೇಳುವುದಕ್ಕೂ ಸಿದ್ಧರಿರಲಿಲ್ಲ. ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡುವಂತೆ ನನಗೆ ಸೂಚಿಸಿದ್ದರು," ಎಂದು ಸತ್ಯಪಾಲ್ ಮಲ್ಲಿಕ್ ಖಾಸಗಿ ಸುದ್ದಿ ವಾಹಿನಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಅಮಿತ್ ಶಾ ಅವರು ಮೋದಿಯವರನ್ನು ತುಂಬಾ ಗೌರವಿಸುತ್ತಾರೆ, ಜನರು ಪ್ರಧಾನಿಯನ್ನು ದಾರಿತಪ್ಪಿಸುತ್ತಾರೆ ಎಂದು ಹೇಳಿದ್ದರು. 'ಮುಂದೊಂದು ದಿನ ಪ್ರಧಾನಿ ಇದನ್ನು ಅರ್ಥಮಾಡಿಕೊಳ್ಳುತ್ತಾರೆ (ಮೂರು ಕಾನೂನುಗಳೊಂದಿಗಿನ ರೈತರ ವಿವಾದ)' ಎಂದು ನನಗೆ ಹೇಳಲಾಗಿತ್ತು. ಅಮಿತ್ ಶಾ ಅವರು ಪ್ರಧಾನಿಯ ಬಗ್ಗೆ ಕೆಟ್ಟ ಉದ್ದೇಶದಿಂದ ಏನನ್ನೂ ಹೇಳಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ನನ್ನ ಕಾಳಜಿ ಅರ್ಥವಾಗುತ್ತದೆ ಎಂದು ಮಾತ್ರ ಅವರು ಹೇಳಿದರು," ಎಂದು ಸತ್ಯಪಾಲ್ ಮಲ್ಲಿಕ್ ತಿಳಿಸಿದ್ದಾರೆ.

ನವೆಂಬರ್ 19ರಂದು ಕೃಷಿ ಕಾಯ್ದೆ ರದ್ದು ಘೋಷಣೆ:
ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿದ್ದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ 2021ಕ ನವೆಂಬರ್ 19ರಂದು ಪ್ರಧಾನಿ ಮೋದಿ ಘೋಷಿಸಿದರು. ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದರು.
ಉಭಯ ಸದನಗಳಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ:
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ರದ್ಧತಿ ಮಸೂದೆಯನ್ನು ಸಂಸತ್ತಿನ ಅಧಿವೇಶನದ ಮೊದಲ ದಿನವೇ ಉಭಯ ಸದನಗಳಲ್ಲಿ ಅಂಗೀಕರಿಸಲಾಯಿತು. ಹೊಸ ಮಸೂದೆ ಮೇಲೆ ಚರ್ಚೆ ನಡೆಸುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದು ಕುಳಿತಿದ್ದವು. ಇದರ ಹೊರತಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾಯ್ದೆಗಳ ರದ್ದತಿ ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಧ್ವನಿಮತದ ಮೂಲಕ ಕೇಂದ್ರ ಸರ್ಕಾರವು ಮಸೂದೆಯನ್ನು ಅಂಗೀಕರಿಸಿದೆ. ತದನಂತರ ರಾಜ್ಯಸಭೆಯಲ್ಲೂ ಯಾವುದೇ ರೀತಿ ಚರ್ಚೆಯಿಲ್ಲದೇ ಮಸೂದೆ ಅಂಗೀಕರಿಸಲಾಯಿತು.
ವಿವಾದಕ್ಕೆ ಕಾರಣವಾದ ಕೃಷಿ ಕಾಯ್ದೆಗಳು:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು.












Click it and Unblock the Notifications