ಅಕ್ರಮ ಆಸ್ತಿಗಳಿಕೆ : ಫೆಬ್ರವರಿ ತನಕ ಜಯಲಲಿತಾ ನಿರಾಳ
ಬೆಂಗಳೂರು, ನವೆಂಬರ್ 23 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ 2016ರ ಫೆಬ್ರವರಿ 2ರಿಂದ ನಡೆಯಲಿದೆ.
ಸೋಮವಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಅರ್ಜಿಯ ವಿಚಾರಣೆಗೆ ದಿನಾಂಕವನ್ನು ನಿಗದಿಪಡಿಸಲಾಯಿತು. ಫೆಬ್ರವರಿ 2ರಿಂದ ದಿನಬಿಟ್ಟು ದಿನ ಅರ್ಜಿಯ ವಿಚಾರಣೆಯನ್ನು ನಡೆಸಲಾಗುತ್ತದೆ ಎಂದು ಕೋರ್ಟ್ ತಿಳಿಸಿತು. [ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ನಿವೃತ್ತಿ]

ಡಿಎಂಕೆ ನಾಯಕ ಅನ್ಬಳಗನ್ ಅವರು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಕರ್ನಾಟಕ ಸರ್ಕಾರದ ಅರ್ಜಿಯೊಂದಿಗೆ ಸೇರಿಸಿ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. [ಜಯಾ ಪ್ರಕರಣದ timeline]
ಅರ್ಜಿಯಲ್ಲಿ ಏನಿದೆ? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ದೋಷಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. [4 ಸಾವಿರ ಪುಟದ ಮೇಲ್ಮನವಿ ಸಲ್ಲಿಸಿದ ಕರ್ನಾಟಕ]
ಕರ್ನಾಟಕ ಸರ್ಕಾರ ಸಲ್ಲಿಸಿರುವ 4000 ಪುಟಗಳ ಮೇಲ್ಮನವಿಯಲ್ಲಿ, ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿ, ವಿಶೇಷ ಕೋರ್ಟ್ ನೀಡಿದ್ದ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ.ಗಳ ದಂಡದ ತೀರ್ಪಿನ ಜಾರಿಗೆ ಮನವಿ ಮಾಡಿದೆ.
ಹೈಕೋರ್ಟ್ ಆದೇಶವೇನು? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಕರ್ನಾಟಕ ಸರ್ಕಾರ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದೆ. ಒಂದು ವೇಳೆ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ಸಿಕ್ಕರೆ, ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ 4 ವರ್ಷದ ಜೈಲು ಶಿಕ್ಷೆ ತೀರ್ಪು ಜಾರಿಗೆ ಬರಲಿದೆ. [ಪಿಟಿಐ ಚಿತ್ರ]












Click it and Unblock the Notifications