ಅಯೋಧ್ಯಾ ಭೂ ವಿವಾದ ಜುಲೈ 25ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
ನವದೆಹಲಿ, ಜುಲೈ 11: ಅಯೋಧ್ಯೆಯಲ್ಲಿರುವ ರಾಮಜನ್ಮ ಭೂಮಿ- ಬಾಬ್ರಿ ಮಸೀದಿ ಆಸ್ತಿ ಹಕ್ಕು ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕೇ? ಬೇಡವೇ? ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ಇಂದು ಮಹತ್ವ ತೀರ್ಪು ನೀಡಿದೆ. ಸುಪ್ರೀಂಕೋರ್ಟ್ ನೇಮಿಸಿರುವ ಮೂವರು ಸಂಧಾನಕಾರರು ತಮ್ಮ ವರದಿಯನ್ನು ಜುಲೈ 18ರೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಜೊತೆಗೆ ಈ ಕುರಿತಂತೆ ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಲಾಗಿದೆ.
ಸಂಧಾನ ಪ್ರಕ್ರಿಯೆಯಲ್ಲಿ ಮಧ್ಯಸ್ಥಿಕೆ ಸಮಿತಿ ಹೆಚ್ಚಿನ ಪ್ರಗತಿ ಸಾಧಿಸಿಲ್ಲ ಎಂದು ಸುಪ್ರೀಂಕೋರ್ಟಿಗೆ ಅರ್ಜಿದಾರರು ತಿಳಿಸಿದ ಬಳಿಕ, ಸಂಧಾನಕಾರರ ಪ್ರಗತಿ ವರದಿ ಬಂದ ನಂತರ ಮುಂದಿನ ವಿಚಾರಣೆ ನಡೆಸುವಾಗಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ನ್ಯಾಯಪೀಠವು ಗುರುವಾರ(ಜುಲೈ 11)ದಂದು ಹೇಳಿದೆ.

ಈ ಪ್ರಕರಣವನ್ನು ಮಾತುಕತೆಯ ಮೂಲಕ ಆಗಸ್ಟ್ 15ರೊಳಗೆ ಪರಿಹಾರ ಕಂಡುಕೊಳ್ಳುವಂತೆ ಸುಪ್ರೀಂಕೋರ್ಟ್ ನ್ಯಾಯಪೀಠವು ಮಧ್ಯಸ್ಥಿಕೆ ಸಂಧಾನಕಾರರಿಗೆ ಸೂಚಿಸಲಾಗಿತ್ತು. ಆದರೆ, ಸಂಧಾನ ಪ್ರಕ್ರಿಯೆ ವಿಳಂಬವಾಗಿರುದ್ದು, ಸರಿಯಾದ ಮಾರ್ಗದಲ್ಲಿ ಸಾಗುತ್ತಿಲ್ಲ, ಕೋರ್ಟ್ ಮೂಲಕವೇ ನ್ಯಾಯ ಪಡೆಯುವುದೊಂದೇ ಪರಿಹಾರ ಎಂದು ಅರ್ಜಿದಾರ ಗೋಪಾಲ್ ಸಿಂಗ್ ವಿಶಾರದ್ ಹೇಳಿದ್ದಾರೆ.
ಜಸ್ಟೀಸ್ ಬೊಬ್ಡೆ ಅವರಲ್ಲದೆ, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ಚಂದ್ರಚೂಡ್, ಜಸ್ಟೀಸ್ ಭೂಷಣ್, ಜಸ್ಟೀಸ್ ಅಬ್ದುಲ್ ನಜೀರ್ ಅವರನ್ನೊಳಗೊಂಡ ನ್ಯಾಯಪೀಠವು, ಸಂಧಾನ ಪ್ರಗತಿ ಬಗ್ಗೆ ತಿಳಿಸಲು ಅರ್ಜಿದಾರರಿಗೆ ಸೂಚಿಸಿತ್ತು.
ನ್ಯಾ.ಇಬ್ರಾಹಿಂ ಖಾಲಿಫುಲ್ಲಾ, ರವಿಶಂಕರ್ ಗುರೂಜಿ, ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದ್ದು, ಸಂಧಾನ ಪ್ರಕ್ರಿಯೆಯನ್ನು 4 ವಾರದೊಳಗೆ ಆರಂಭಿಸಿ, 8 ತಿಂಗಳೊಳಗೆ ಮುಗಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಆದರೆ, ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ ಆಗಸ್ಟ್ 15ರ ತನಕ ಅವಕಾಶ ನೀಡಲಾಗಿದೆ.
1992 ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಮಯದಲ್ಲಿ ಒಟ್ಟು 67 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಕೇವಲ 2.7 ಎಕರೆ ಭೂಮಿಯಷ್ಟೇ ವಿವಾದಾತ್ಮಕ ಸ್ಥಳವಾಗಿದ್ದು, ಉಳಿದವು ವಿವಾದಮುಕ್ತವಾಗಿವೆ. ಆದ್ದರಿಂದ ಈ ಭೂಮಿಯ ವಾರಸುದಾರರಾದ ರಾಮ ಜನ್ಮಭೂಮಿ ನ್ಯಾಸ್ ಟ್ರಸ್ಟ್ ಗೆ ಅದನ್ನು ಹಿಂದಿರುಗಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.
2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ. 2010ರ ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ 14ಕ್ಕೂ ಅಧಿಕ ಮೇಲ್ಮನವಿಯನ್ನು ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಲಾಗಿದೆ.












Click it and Unblock the Notifications