ಎಸ್ಸಿ, ಎಸ್ಟಿ ಕಾಯ್ದೆ ದುರ್ಬಲ ಖಂಡಿಸಿ ಪ್ರಧಾನಿಗೆ ರಕ್ತದಲ್ಲಿ ಪತ್ರ
ಕಾನ್ಪುರ (ಉತ್ತರ ಪ್ರದೇಶ), ಏಪ್ರಿಲ್ 05: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ನಿಯಮಗಳನ್ನು ಸಡಿಲಗೊಳಿಸಿರುವ ಸುಪ್ರೀಂ ಕೋರ್ಟ್ನ ತೀರ್ಪನ್ನು ಖಂಡಿಸಿ ಭಾರತೀಯ ದಲಿತ್ ಪ್ಯಾಂಥರ್ಸ್ ಪಾರ್ಟಿಯ ಸದಸ್ಯರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಭಾರತ ಬಂದ್ ಪ್ರತಿಭಟನೆ ವೇಳೆ ಜೀವ ಕಳೆದುಕೊಂಡ ಜನರಿಗೆ ಪಕ್ಷದ ಸದಸ್ಯರು ಸಂತಾಪ ಸೂಚಿಸಿದ್ದಾರೆ.
ದಲಿತರ ಆಕ್ರೋಶದ ಬೆಂಕಿ ತೆರೆದಿಟ್ಟ ಭಾರತ್ ಬಂದ್ ಚಿತ್ರಗಳು
ದೌರ್ಜನ್ಯ ತಡೆ ಕಾಯ್ದೆಯಡಿ ಆರೋಪ ದಾಖಲಾದ ತಕ್ಷಣ ಆರೋಪಿಗಳನ್ನು ಬಂಧಿಸದಂತೆ ಮಾರ್ಚ್ 20ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ನಿರೀಕ್ಷಣಾ ಜಾಮೀನು ಪಡೆಯುವ ಸೌಲಭ್ಯವನ್ನು ಒದಗಿಸಿದೆ.
ಈ ತೀರ್ಪನ್ನು ವಿರೋಧಿಸಿ ಮತ್ತು ಹಳೆಯ ಸ್ವರೂಪವನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿ ವಿವಿಧ ದಲಿತ ಸಂಘಟನೆಗಳು ಭಾರತ ಬಂದ್ಗೆ ಕರೆ ನೀಡಿದ್ದವು.
ರೈಲು ಸಂಚಾರಕ್ಕೆ ತಡೆಯೊಡ್ಡಿದ್ದ ಪ್ರತಿಭಟನಾಕಾರರು ಅಂಗಡಿ ಬಾಗಿಲುಗಳನ್ನು ಮುಚ್ಚಿಸಿದ್ದರು. ಪಂಜಾಬ್, ಒಡಿಶಾ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಸೇರಿದಂತೆ ಸುಮಾರು ಹತ್ತು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ನಡೆದಿದ್ದವು.
ಆರಂಭದಲ್ಲಿ ಶಾಂತಿಯುತವಾಗಿ ಪ್ರತಿಭಟನೆ, ಬಳಿಕ ಹಿಂಸಾಚಾರಕ್ಕೆ ತಿರುಗಿತ್ತು. ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತಿತರ ಕಡೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆಗಳು ನಡೆದಿದ್ದವು. ಕನಿಷ್ಠ ಏಳು ರಾಜ್ಯಗಳಲ್ಲಿ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿರುವುದು ವರದಿಯಾಗಿತ್ತು.
ಸಂಘರ್ಷ ತೀವ್ರಗೊಂಡು ದೇಶದ ವಿವಿಧ ಭಾಗಗಳಿಗೆ ವ್ಯಾಪಿಸಿ 11 ಮಂದಿ ಜೀವ ಕಳೆದುಕೊಂಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ತೀರ್ಪನ್ನು ಮರುಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಕರ್ನಾಟಕ ಚುನಾವಣೆ ಮೇಲೂ ಪ್ರಭಾವ ಬೀರೀತೆ ಉತ್ತರದ ದಲಿತ ಪ್ರತಿಭಟನೆ?!
ಕೇಂದ್ರ ಸರ್ಕಾರದ ಮರುಪರಿಶೀಲನಾ ಅರ್ಜಿಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಇತ್ತೀಚಿನ ಬೆಳವಣಿಗೆಯಲ್ಲಿ, ಮಾರ್ಚ್ 20ರಂದು ತಾನು ನೀಡಿದ ತೀರ್ಪನ್ನು ತಡೆಹಿಡಿದಿದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಾಯ್ದೆಯನ್ನು ಅನೇಕ ಸಂದರ್ಭಗಳಲ್ಲಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕಾಯ್ದೆಯ ಕೆಲವು ಕಠಿಣ ನಿಯಮಗಳನ್ನು ಸಡಿಲಗೊಳಿಸಿತ್ತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
1989ರ ಎಸ್ಸಿ, ಎಸ್ಟಿ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವನ್ನು ಸುಪ್ರೀಂ ಕೋರ್ಟ್ ಪ್ರತಿಪಾದಿಸಿತ್ತು. ದಲಿತರ ಮೇಲೆ ದೌರ್ಜನ್ಯದ ಯಾವುದೇ ದೂರು ಬಂದರೂ ವಿಚಾರಣೆಯ ನಂತರವೇ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರ್ಟ್ ಆದೇಶಿಸಿತ್ತು.
ಅಲ್ಲದೆ, ಇದಕ್ಕೂ ಮುನ್ನ ಈ ಕಾಯ್ದೆಯಡಿ ಬಂಧಿತರಾಗುವವರಿಗೆ ಜಾಮೀನು ಸಹ ಸಿಗುತ್ತಿರಲಿಲ್ಲ. ಆದರೆ, ಸುಪ್ರೀಂ ಕೋರ್ಟ್ ಆರೋಪಿಗೆ ಜಾಮೀನು ನೀಡಲು ಅವಕಾಶ ಕಲ್ಪಿಸಿತ್ತು.