ಎನ್ ಸಿಪಿ ನಾಯಕ ಆರ್.ಆರ್.ಪಾಟೀಲ್ ನಿಧನ
ಮುಂಬೈ, ಫೆ.16: ಅಂಗಾಂಗ ವೈಫಲ್ಯ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಾರಾಷ್ಟ್ರ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಎನ್ಸಿಪಿ ಹಿರಿಯ ನಾಯಕ ಆರ್.ಆರ್.ಪಾಟೀಲ್ ಸೋಮವಾರ ನಿಧನರಾಗಿದ್ದಾರೆ.
ಕ್ಯಾನ್ಸರ್ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾಟೀಲ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
1957 ಆಗಸ್ಟ್ 16ರಂದು ಮಹಾರಾಷ್ಟ್ರದ ಸಾಂಗ್ಲಿಯ ಅಂಜಾನಿ ಗ್ರಾಮದಲ್ಲಿ ಜನಿಸಿದ ಆರ್.ಆರ್.ಪಾಟೀಲ್ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ರಂಗ ಪ್ರವೇಶ ಮಾಡಿದ್ದರು.
ತಾಸಗಾಂವ್ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಪಾಟೀಲ್, 2004ರಿಂದ 2008ರವರೆಗೆ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಹಾಗೂ 2009ರಿಂದ 2014ರವೆಗೆ ಪೃಥ್ವಿರಾಜ್ ಚೌವ್ಹಾಣ್ ಅವರ ಸರ್ಕಾರದಲ್ಲಿ ಗೃಹಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.
ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ಪಕ್ಷದ ನಾಯಕರಾದ ಅಜಿತ್ ಪವಾರ್, ಸುಪ್ರಿಯಾ ಸುಳೆ, ಸುನೀಲ್ ತತ್ಕರೆ, ಛಗನ್ ಭುಜಬಲ್ ಅವರು ಪಾಟೀಲ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.