ಕೊರೊನಾವೈರಸ್ ಮರು-ಸೋಂಕಿತರ ಮೇಲೆ ಲಕ್ಷ್ಯ: ಡಾ. ಹರ್ಷವರ್ಧನ್
ನವದೆಹಲಿ, ಸಪ್ಟೆಂಬರ್.27: ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 60 ಲಕ್ಷದ ಗಡಿ ದಾಟಿದ್ದು, ಪ್ರತಿಯೊಬ್ಬ ಸೋಂಕಿತರ ಪರೀಕ್ಷಾ ವಿಧಾನದ ಬಗ್ಗೆ ಲಕ್ಷ್ಯ ವಹಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ವಿಶ್ವದಾದ್ಯಂತ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಜನತೆಯನ್ನು ಆತಂಕಕ್ಕೆ ದೂಡಿದೆ. ಈ ನಡುವೆ ಕೊವಿಡ್-19 ಸೋಂಕಿತರಿಗೇ ಮತ್ತೊಮ್ಮೆ ಸೋಂಕು ಕಾಣಿಸಿಕೊಳ್ಳುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.
ಭಾರತವಷ್ಟೇ ಅಲ್ಲದೇ ಜಗತ್ತಿನಾದ್ಯಂತ ಸೋಂಕಿತರಿಗೇ ಮರು-ಸೋಂಕು ಅಂಟಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ಸೂಕ್ಷ್ಮವಾಗಿ ಗಮಸಿದ್ದು, ಎರಡನೇ ಬಾರಿ ಸೋಂಕು ಅಂಟಿಕೊಳ್ಳುವುದಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಅಧ್ಯಯನ ನಡೆಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಐಸಿಎಂಆರ್ ತಜ್ಞರ ತಂಡದಿಂದ ಅಧ್ಯಯನ:
ಎರಡನೇ ಬಾರಿ ಕೊರೊನಾವೈರಸ್ ಸೋಂಕು ತಗುಲಿದ ವ್ಯಕ್ತಿಗಳ ಪರೀಕ್ಷಾ ವರದಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯ ತಜ್ಞರ ತಂಡವು ಮರುಪರಿಶೀಲನೆ ನಡೆಸಲಿದೆ. ಈ ವೇಳೆ ಮರು-ಸೋಂಕಿನ ಪ್ರಕರಣಗಳ ಸಂಖ್ಯೆ ಶೂನ್ಯವಾಗಿದ್ದರೆ, ಸಮಸ್ಯೆಯನ್ನು ನಾವು ನಿಯಂತ್ರಿಸುವುದಕ್ಕೆ ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 88,600 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಸೆಪ್ಟೆಂಬರ್ 26ರ ತನಕ 7,12,57,836 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಸೆಪ್ಟೆಂಬರ್ 26ರಂದು 9,87,861 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.












Click it and Unblock the Notifications