ಎಸ್ಸಿ, ಎಸ್ಟಿ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಮುಖಭಂಗ
ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ. ರಾಜ್ಯ ಸರ್ಕಾರದ ಈ ಪ್ರಯತ್ನಕ್ಕೆ ತಣ್ಣೀರೆರೆಚಿದ ರಾಜ್ಯಪಾಲ ವಜುಭಾಯಿ ವಾಲಾ.
ಬೆಂಗಳೂರು, ಆಗಸ್ಟ್ 22: ರಾಜ್ಯ ಸರ್ಕಾರಿ ನೌಕರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉದ್ಯೋಗಿಗಳಿಗೆ ವಿಶೇಷ ಮೀಸಲಾತಿ ನೀಡುವುದನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶಕ್ಕೆ ವಿರುದ್ಧವಾಗಿ ಸುಗ್ರೀವಾಜ್ಞೆ ಜಾರಿಗೆ ತರಲು ನಿರ್ಧರಿಸಿದ್ದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.
ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲನೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಹೀಗಾಗಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಜಾರಿಗೆ ತರುವ ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ರಾಜ್ಯ ಸರ್ಕಾರ ಕಳುಹಿಸಿತ್ತು. ಆದರೆ, ರಾಜ್ಯಪಾಲ ವಜುಭಾಯಿ ವಾಲಾ ಅವರು ಈ ಸುಗ್ರೀವಾಜ್ಞೆಯ ವಿಧೇಯಕಕ್ಕೆ ಸಹಿ ಹಾಕಲು ನಿರಾಕರಿಸಿ, ರಾಜ್ಯ ಸರ್ಕಾರಕ್ಕೆ ಆ ಕಡತವನ್ನು ವಾಪಸ್ ಕಳುಹಿಸಿದ್ದಾರೆ.
ಅನಿವಾರ್ಯ ಸಂದರ್ಭಗಳಲ್ಲಿ ಸುಗ್ರೀವಾಜ್ಞೆ ತರಬೇಕು. ಹಾಗಿರುವಾಗ ಸುಪ್ರೀಂ ಕೋರ್ಟ್ ಆದೇಶ ಪಾಲನೆ ವಿರುದ್ಧ ಸುಗ್ರೀವಾಜ್ಞೆ ತರುವ ಔಚಿತ್ಯವೇನು ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಲ್ಲದೆ, ಈ ವಿಚಾರವು (ಸುಗ್ರೀವಾಜ್ಞೆ) ವಿಧಾನ ಮಂಡಲದಲ್ಲಿ ಚರ್ಚೆಯಾಗಬೇಕಿದೆ ಎಂದು ಸಲಹೆ ನೀಡಿದ್ದಾರೆ. ಹಾಗಾಗಿ, ಇದೀಗ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದಂತಾಗಿದೆ.