ಒವೈಸಿಯನ್ನು ಮಾತುಕತೆಗೆ ಕರೆದ ಶರದ್ ಪವಾರ್!
ನವದೆಹಲಿ, ಜೂ. 21: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್ಸಿಪಿ) ವರಿಷ್ಠ ಶರದ್ ಪವಾರ್ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿಯನ್ನು ಮಾತುಕತೆಗೆ ಕರೆದಿದ್ದಾರೆ.
ಓವೈಸಿ ಎಐಎಂಐಎಂ ನಾಯಕ ಇಮ್ತಿಯಾಜ್ ಜಲೀಲ್ರನ್ನು ಸಭೆಗೆ ನಿಯೋಜಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆ ಕುರಿತು ಚರ್ಚಿಸಲು ಶರದ್ ಪವಾರ್ ಅಸಾದುದ್ದೀನ್ ಓವೈಸಿಯನ್ನು ಸಭೆಗೆ ಆಹ್ವಾನಿಸಿದ್ದಾರೆ. ಈ ರೀತಿಯ ಆಹ್ವಾನಕ್ಕಾಗಿ ಓವೈಸಿ ಪವಾರ್ಗೆ ಧನ್ಯವಾದ ಅರ್ಪಿಸಿದ್ದಾರೆ.
ಸಭೆಯಲ್ಲಿ ಎಐಎಂಐಎಂ ಪ್ರತಿನಿಧಿಸಲು ಔರಂಗಾಬಾದ್ ಸಂಸದ ಇಮ್ತಿಯಾಜ್ ಜಲೀಲ್ರನ್ನು ನಿಯೋಜಿಸಿದ್ದಾರೆ ಎಂದು ಎಐಎಂಐಎಂ ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ. ಮುಂಬರುವ ರಾಷ್ಟ್ರಪತಿ ಚುನಾವಣೆಯ ಕುರಿತು ಚರ್ಚಿಸಲು ಎನ್ಸಿಪಿ ಜೂನ್ 21ರಂದು ವಿರೋಧ ಪಕ್ಷಗಳ ಸಭೆಯನ್ನು ಕರೆದಿದೆ.

ಜುಲೈ 18 ರಂದು ನಡೆಯಲಿರುವ ಚುನಾವಣೆ
ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಚರ್ಚಿಸಲು ಮಂಗಳವಾರ ಮಧ್ಯಾಹ್ನ 2.30ಕ್ಕೆ ಸಂಸತ್ ಭವನದಲ್ಲಿ ವಿರೋಧ ಪಕ್ಷಗಳ ಸಭೆ ಆಯೋಜಿಸಲಾಗಿದೆ. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಲಾಗುವುದು ಎಂದು ಎನ್ಸಿಪಿ ಹೇಳಿಕೆಯಲ್ಲಿ ತಿಳಿಸಿದೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ ಸಂಸದೀಯ ಮಂಡಳಿ ಸಭೆ ನಡೆಸಲಿದ್ದು, ಜುಲೈ 18 ರಂದು ನಡೆಯಲಿರುವ ಚುನಾವಣೆಗೆ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

ರಾಷ್ಟ್ರಪತಿಯಾಗಲು ಪವಾರ್ ನಿರಾಕರಣೆ
ಚುನಾವಣಾ ಉಸ್ತುವಾರಿಗಾಗಿ ಬಿಜೆಪಿ ಈಗಾಗಲೇ 14 ಸದಸ್ಯರ ನಿರ್ವಹಣಾ ತಂಡವನ್ನು ರಚಿಸಿದೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಈ ತಂಡದ ಸಂಚಾಲಕರಾಗಿದ್ದಾರೆ. ಈ ಹಿಂದೆ ಹಲವು ವಿರೋಧ ಪಕ್ಷಗಳ ನಾಯಕರು ಶರದ್ ಪವಾರ್ರನ್ನು ಜಂಟಿ ಅಭ್ಯರ್ಥಿಯಾಗುವಂತೆ ಒತ್ತಾಯಿಸಿದ್ದರು. ಆದರೆ ಹಿರಿಯ ಎನ್ಸಿಪಿ ನಾಯಕರೂ ಆಗಿರುವ ಪವಾರ್ ಈ ಪ್ರಸ್ತಾಪವನ್ನು ನಿರಾಕರಿಸಿದರು. ವಿರೋಧ ಪಕ್ಷದ ಸಭೆಯನ್ನು ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕರೆದಿದ್ದು, 17 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಹೆಸರು ಮುನ್ನೆಲೆಗೆ
ಬಳಿಕ ಶರದ್ ಪವಾರ್ ಜೊತೆಗೆ ಇನ್ನೂ ಎರಡು ಹೆಸರುಗಳನ್ನು ಬ್ಯಾನರ್ಜಿ ಪ್ರಸ್ತಾಪಿಸಿದ್ದು, ಇದರಲ್ಲಿ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರ ಹೆಸರುಗಳು ಸೇರಿದ್ದವು. ಆದರೆ, ಈ ಎರಡು ಹೆಸರುಗಳ ಬಗ್ಗೆ ಈ ಸಭೆಯಲ್ಲಿ ಯಾವುದೇ ಪಕ್ಷದ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿರಲಿಲ್ಲ. ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವಿರೋಧ ಪಕ್ಷದ ನಾಯಕರ ಮನವಿಯನ್ನೂ ಅಬ್ದುಲ್ಲಾ ತಿರಸ್ಕರಿಸಿದ್ದರು.

ಆಮ್ ಆದ್ಮಿ ಪಕ್ಷ, ಕೆಸಿಆರ್ ಭಾಗವಹಿಸಲಿಲ್ಲ
ಕಾನ್ ಸ್ಟಿಟ್ಯೂಷನ್ ಕ್ಲಬ್ನಲ್ಲಿ ನಡೆದ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಭಾಗವಹಿಸಿರಲಿಲ್ಲ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಸಭೆಗೆ ಪ್ರತಿನಿಧಿಯನ್ನು ಕಳುಹಿಸಿರಲಿಲ್ಲ. ಕಾಂಗ್ರೆಸ್ 16 ರಾಜಕೀಯ ಪಕ್ಷಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದೆ. ಟಿಎಂಸಿ, ಕಾಂಗ್ರೆಸ್ ಮತ್ತು ಎನ್ಸಿಪಿ, ಸಿಪಿಐ, ಸಿಪಿಐ(ಎಂ), ಸಿಪಿಐಎಂಎಲ್, ಆರ್ಎಸ್ಪಿ, ಶಿವಸೇನೆ, ಆರ್ಜೆಡಿ, ಎಸ್ಪಿ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿ(ಎಸ್), ಡಿಎಂಕೆ, ಆರ್ಎಲ್ಡಿ, ಐಯುಎಂಎಲ್ ಮತ್ತು ಜೆಎಂಎಂ ಸೇರಿದಂತೆ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು. ರಾಷ್ಟ್ರಪತಿ ಚುನಾವಣೆಗೆ ಜುಲೈ 18 ರಂದು ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications