ಇಂಡಿಯಾ ಒಕ್ಕೂಟದಲ್ಲಿ ಮತ್ತೆ ಅಪಸ್ವರ; ಮೈತ್ರಿಕೂಟ ಕೊನೆಗೊಳಿಸಬೇಕು ಎಂದ ಒಮರ್ ಅಬ್ದುಲ್ಲಾ!
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಎಪಿ ನಡುವಿನ ತಿಕ್ಕಾಟದ ಬೆನ್ನಲ್ಲೇ ಇಂಡಿಯಾ ಒಕ್ಕೂಟದಲ್ಲಿ ಅಪಸ್ವರ ಕೇಳಿ ಬಂದಿದೆ. ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂಡಿಯಾ ಒಕ್ಕೂಟದ ಅಸ್ತಿತ್ವವನ್ನೇ ಪ್ರಶ್ನೆ ಮಾಡಿದ್ದು, ರಾಷ್ಟ್ರ ರಾಜಕಾರಣಲ್ಲಿ ಚರ್ಚೆ ಹುಟ್ಟುಹಾಕಿದೆ. ಬಿಜೆಪಿ ಸೋಲಿಸಲು ಒಗ್ಗಟ್ಟಾದ ವಿಪಕ್ಷಗಳ ನಡುವೆ ಒಡಕು ಮತ್ತೊಮ್ಮೆ ಜಗಜ್ಜಾಹೀರಾಗಿದೆ.
ಗುರುವಾರ ಮಾತಾನಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಇಂಡಿಯಾ ಒಕ್ಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ, ಕಳೆದ ವರ್ಷ ಸಂಸತ್ ಚುನಾವಣೆಗಾಗಿ ರಚಿಸಲಾದ ವಿರೋಧ ಪಕ್ಷಗಳ ಬಣವನ್ನು ವಿಸರ್ಜನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹೋರಾಟ ಏರ್ಪಟ್ಟಿದೆ. ದೆಹಲಿ ಚುನಾವಣೆ ಬಗ್ಗೆ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿವೆ.
ಅಸ್ತಿತ್ವದ ಬಗ್ಗೆ ಪ್ರಶ್ನೆ ಮಾಡಿದ ಒಮರ್ ಅಬ್ದುಲ್ಲಾ
ದೆಹಲಿ ಚುನಾವಣೆ ಜೊತೆ ನಮಗೆ ಯಾವುದೇ ಸಂಬಂಧವಿಲ್ಲದ ಕಾರಣ ಅದರ ಬಗ್ಗೆ ನಾನು ಏನೂ ಮಾತನಾಡಲಾರೆ. ಆಮ್ ಆದ್ಮಿ ಪಕ್ಷ, ಕಾಂಗ್ರೆಸ್ ಮತ್ತು ಅಲ್ಲಿನ ಇತರ ಪಕ್ಷಗಳು ಬಿಜೆಪಿಯನ್ನು ಹೇಗೆ ಎದುರಿಸಬೇಕು ಎಂದು ನಿರ್ಧರಿಸಬೇಕು. ನನಗೆ ಗೊತ್ತಿರುವಂತೆ ಇಂಡಿಯಾ ಒಕ್ಕೂಟಕ್ಕೆ ಯಾವುದೇ ಸಮಯದ ಮಿತಿ ಇರಲಿಲ್ಲ. ಇಂಡಿಯಾ ಒಕ್ಕೂಟ ಸಭೆಯನ್ನು ಆಯೋಜಿಸಲು ಆಗುತ್ತಿಲ್ಲ, ಇಂಡಿಯಾ ಒಕ್ಕೂಟಕ್ಕೆ ಅಸ್ತಿತ್ವದ ಬಗ್ಗೆ ಸ್ಪಷ್ಟತೆ ಇಲ್ಲ, ಕೇವಲ ಸಂಸತ್ ಚುನಾವಣೆಗಾಗಿ ಒಕ್ಕೂಟ ರಚನೆಯಾಗಿದ್ದರೆ ಅದನ್ನು ಕೊನೆಗೊಳಿಸಬೇಕು ಎಂದು ಒಮರ್ ಅಬ್ದುಲ್ಲಾ ಹೇಳಿರುವುದಾಗಿ ಎಎನ್ಐಗೆ ತಿಳಿಸಿದ್ದಾರೆ.
ಕಳೆದ ಹಲವು ದಿನಗಳಿಂದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಮಾಡಿಕೊಳ್ಳುತ್ತಿದ್ದಾರೆ. ಬಹಿರಂಗವಾಗಿಯೆ ಎಎಪಿ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಇಂಡಿಯಾ ಒಕ್ಕೂಟಕ್ಕೆ ನಾಯಕ ಯಾರು?
ಲೋಕಸಭಾ ಚುನಾವಣೆ ನಡೆದ ಹಲವು ತಿಂಗಳ ಬಳಿಕ ಇಂಡಿಯಾ ಒಕ್ಕೂಟದ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ. ಒಕ್ಕೂಟಚನ್ನು ಮುನ್ನಡೆಸುವುದು ಯಾರು, ಭವಿಷ್ಯದ ಯೋಜನೆಗಳೇನು ಎನ್ನುವುದರ ಬಗ್ಗೆ ಯಾರಿಗೂ ಸ್ಪಷ್ಟನೆ ಇಲ್ಲದಂತಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ ಬಳಿಕ ಒಕ್ಕೂಟವನ್ನು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಮುನ್ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಲವು ಮಿತ್ರಪಕ್ಷಗಳು ಕೂಡ ಅವರನ್ನು ಬೆಂಬಲಿಸಿವೆ.
ಆದರೆ ಕಾಂಗ್ರೆಸ್ ನಾಯಕತ್ವವನ್ನು ಹಗುರವಾಗಿ ಪರಿಗಣಿಸಬಾರದು ಎಂದು ಅಬ್ದುಲ್ಲಾ ಹೇಳಿದ್ದಾರೆ. ಸಂಸತ್ತಿನಲ್ಲಿ ವಿಪಕ್ಷಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ವಿರೋಧ ಪಕ್ಷದ ನಾಯಕರಾಗಿರುವುದರಿಂದ, ಅವರನ್ನು ಕಡೆಗಣಿಸಲು ಸಾಧ್ಯವಿಲ್ಲ. ಆದರೂ ಕೆಲವು ಮಿತ್ರಪಕ್ಷಗಳಲ್ಲಿ ಅಸಮಾಧಾನ ಇದೆ, ಕಾಂಗ್ರೆಸ್ ಅವರನ್ನು ಸಮಾಧಾನ ಗೊಳಿಸಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.












Click it and Unblock the Notifications