ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಕಾಂಗ್ರೆಸ್ ವರಿಷ್ಠರಿಗೆ ಸಲಹೆ ನೀಡಿದ ಸಿದ್ದರಾಮಯ್ಯ
ನವದೆಹಲಿ, ಅಕ್ಟೋಬರ್ 28: ಮುಂದಿನ ಏಳೆಂಟು ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಲಿದೆ. ಗೆಲ್ಲುವ ಉತ್ಸಾಹದಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕರು ಹಲವು ತಂತ್ರಗಳನ್ನು ರೂಪಿಸಿದ್ದಾರೆ. ಚುನಾವಣೆ ವಿಚಾರವಾಗಿ ರಾಜ್ಯ ನಾಯಕರು ಹಾಗೂ ಕಾಂಗ್ರೆಸ್ ವರಿಷ್ಠರ ನಡುವೆ ಸರಣಿ ಸಭೆಗಳಾಗಿವೆ. ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆಸಿರುವ ಸಿದ್ದರಾಮಯ್ಯ
ನವೆಂಬರ್ ಅಂತ್ಯದೊಳಗೆ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ವರಿಷ್ಠರಿಗೆ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಆ ಬಳಿಕ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, 'ಮುಂದಿನ ತಿಂಗಳ ಅಂತ್ಯದೊಳಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವಂತೆ ವೇಣುಗೋಪಾಲ್ ಅವರಲ್ಲಿ ಕೇಳಿದ್ದೇನೆ. ಚುನಾವಣಾ ಸಿದ್ಧತೆಗಳ ಮೇಲ್ವಿಚಾರಣೆಗಾಗಿ ಸ್ಟೀರಿಂಗ್ ಸಮಿತಿಯನ್ನು ರಚಿಸುವಂತೆಯೂ ಮನವಿ ಮಾಡಿದ್ದೇನೆ' ಎಂದು ತಿಳಿಸಿದ್ದಾರೆ.
ಸರಣಿ ಯಾತ್ರೆಗಳಿಗೆ ಕಾಂಗ್ರೆಸ್ ಸಿದ್ದತೆ
ತೀವ್ರ ಉತ್ಸಾಹದಲ್ಲಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಮತ್ತೆ ಯಾತ್ರೆಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸಿದೆ. ಈ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, 'ಉತ್ತರ ಕರ್ನಾಟಕದಲ್ಲಿ ಎರಡು ಯಾತ್ರೆಗಳನ್ನು ನಡೆಸಲಿದ್ದೇವೆ. ಮೊದಲ ಯಾತ್ರೆ ಮಹಾದಾಯಿ ಪ್ರದೇಶದಲ್ಲಿ ಹಾಗೂ ಎರಡನೆಯದು ಕೃಷ್ಣಾ ಪ್ರದೇಶದಲ್ಲಿ ನಡೆಯಲಿವೆ' ಎಂದು ತಿಳಿಸಿದ್ದಾರೆ.
'ಹೈದರಾಬಾದ್ ಕರ್ನಾಟಕದಲ್ಲಿ ಮೂರನೇ ಯಾತ್ರೆ ಹಮ್ಮಿಕೊಳ್ಳುವ ಬಗ್ಗೆಯೂ ಪಕ್ಷದ ವರಿಸ್ಠರೊಂದಿಗೆ ಚರ್ಚಿಸಲಾಗಿದೆ. ಆದರೆ, ಅದು ಇನ್ನೂ ನಿರ್ಧಾರವಾಗಿಲ್ಲ' ಎಂದು ಹೇಳಿದ್ದಾರೆ.
'ಮಹದಾಯಿ ಯೋಜನೆ ನೆನೆಗುದಿಗೆ ಬಿದ್ದಿದೆ. ಇನ್ನೂ ಅಧಿಸೂಚನೆಯೇ ಜಾರಿಯಾಗಿಲ್ಲ. ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೂ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಹೈದರಾಬಾದ್ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದೆ. 371J ಅನ್ನು ಅಚ್ಚುಕಟ್ಟಾಗಿ ಜಾರಿಗೆ ತಂದಿಲ್ಲ' ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಭಾರತ್ ಜೋಡೊ ಯಾತ್ರೆಗೆ ಕರ್ನಾಟಕದಲ್ಲಿ ಅಪಾರ ಜನಬೆಂಬಲ ದೊರೆತಿದ್ದು, ರಾಜ್ಯ ನಾಯಕರಿಗೆ ಯಾತ್ರೆಗಳ ಬಗ್ಗೆ ಹೆಚ್ಚು ಉತ್ಸಾಹ ಬಂದಂತಿದೆ.
14 ಲೋಕಸಭಾ ಕ್ಷೇತ್ರಗಳಲ್ಲಿ ಸಿದ್ದು ಪ್ರಚಾರ
ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎಲ್ಲಿಲ್ಲಿ ಪ್ರಚಾರ ಮಾಡಬೇಕೆಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಇದಕ್ಕೆ 50-50 ಫಾರ್ಮುಲಾವನ್ನು ಅಳವಡಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ಆ ಪೈಕಿ 14 ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಹಾಗೂ ಇನ್ನುಳಿದ 14 ಕ್ಷೇತ್ರಗಳಲ್ಲಿ ಡಿಕೆಶಿ ಪ್ರಚಾರ ಕೈಗೊಳ್ಳಬೇಕೆಂದು ಹೈಕಮಾಂಡ್ ನಿರ್ಧರಿಸಿದೆ.
ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಪ್ರಚಾರ?
ನೂತನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೈದರಾಬಾದ್ ಕರ್ನಾಟಕದವರು. ಅವರ ವರ್ಚಸ್ಸನ್ನು ಬಳಸಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಬಹುದು ಎಂಬ ಮಾತುಗಳು ಕೇಳಿಬಂದಿವೆ. ಯುಪಿಎ ಸರ್ಕಾರದಲ್ಲಿ ಕೇಂದ್ರ ಮಂತ್ರಿಯಾಗಿದ್ದ ಖರ್ಗೆ, 371J ಅನ್ನು ಜಾರಿಗೆ ತರಲು ಯತ್ನಿಸಿ ಸಫಲವಾಗಿದ್ದರು. ಈಗ ಪಕ್ಷದ ನೂತನ ಅಧ್ಯಕ್ಷರಾಗಿರುವುದು ಹೈದರಾಬಾದ್ ಕರ್ನಾಟಕದ ಅವರ ಅಭಿಮಾನಿಗಳಲ್ಲಿ ಉತ್ತಷ್ಟು ಉತ್ಸಾಹ ತಂದಿದೆ. ಇದನ್ನೇ ಬಳಸಿಕೊಳ್ಳಲು ಕರ್ನಾಟಕ ಕಾಂಗ್ರೆಸ್ ನಾಯಕರು ಮುಂದಾಗಬಹುದು.
ಪಂಚಮಸಾಲಿ ಲಿಂಗಾಯತ ಮೀಸಲಾತಿ: ಸಿದ್ದು ಹೇಳಿದ್ದೇನು?
ಪಂಚಮಸಾಲಿ ಲಿಂಗಾಯತ ಮೀಸಲಾತಿ ಬೇಡಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಈ ಕುರಿತು ಅಧ್ಯಯನ ಮಾಡಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಸುಭಾಷ್ ಅಡಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಸರ್ಕಾರ ನಿರ್ಧಾರ ಕೈಗೊಳ್ಳಲಿ. ಆ ನಂತರ ನನ್ನ ಅಭಿಪ್ರಾಯ ತಿಳಿಸುತ್ತೇನೆ' ಎಂದರು.