Siddaramaiah From Kolar: ಕೋಲಾರಕ್ಕೆ ಸಾಲು ಸಾಲು ಭರವಸೆ ಘೋಷಿಸಿದ ಸಿದ್ದರಾಮಯ್ಯ ಏನವು?
ಬೆಂಗಳೂರು, ಜನವರಿ 9: ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವೇಳೆ ಕ್ಷೇತ್ರದಿಂದ ಆಯ್ಕೆಯಾದರೆ ಕೋಲಾರಕ್ಕೆ ಸಾಲು ಸಾಲು ಭರವಸೆಗಳ ಘೋಷಣೆಗಳನ್ನು ಮಾಡಿದ್ದಾರೆ.
ಜನವರಿ 23ರಂದು ಕೋಲಾರದಲ್ಲಿ ಬೃಹತ್ ಸಮಾವೇಶ ಮಾಡುತ್ತೇವೆ, ಅದಕ್ಕೆ ಇಡೀ ಜಿಲ್ಲೆಯ ಜನ ಬರಬೇಕು. ಆಗ ನಿಮ್ಮೊಂದಿಗೆ ಕೆಲವು ಮಹತ್ವದ ವಿಷಯಗಳನ್ನು ಹಂಚಿಕೊಳ್ಳುತ್ತೇನೆ ಎಂದಿರುವ ಸಿದ್ದರಾಮಯ್ಯ ಅವರು, ಕೋಲಾರದಲ್ಲಿ ಬಿಜೆಪಿ ಪಕ್ಷವಿಲ್ಲ. ಆದರೂ ಬಿಜೆಪಿ ಬಗ್ಗೆ ಜನ ಎಚ್ಚರವಾಗಿರಬೇಕು. ಅವರು ಕೇವಲ ಅಲ್ಪಸಂಖ್ಯಾತರ ವಿರೋಧಿಗಳು ಮಾತ್ರ ಅಲ್ಲ, ರೈತರು, ಮಹಿಳೆಯರು, ಯುವ ಜನರ ವಿರೋಧಿಗಳು ಎಂದು ಕರೆದಿದ್ದಾರೆ.
ಕೋಲಾರದ ಜನರ ಪ್ರೀತಿ ಮತ್ತು ಅಭಿಮಾನದ ಒತ್ತಾಯಕ್ಕೆ ಮಣಿದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದಲೇ ಸ್ಪರ್ಧಿಸುವ ತೀರ್ಮಾನ ಮಾಡಿದ್ದೇನೆ. ಅಂತಿಮ ನಿರ್ಧಾರ ಪಕ್ಷದ ಹೈಕಮಾಂಡ್ ಗೆ ಸೇರಿದ್ದು. ಸಿದ್ದರಾಮಯ್ಯ ಎಂಬ ಕಾರಣಕ್ಕೆ ವಿಶೇಷ ಅವಕಾಶ, ರಿಯಾಯಿತಿ ಇಲ್ಲ ಎಂದು ಸೋಮವಾರವಷ್ಟೇ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.
ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪವರು ಸೇರಿದಂತೆ ಕೋಲಾರ ಜಿಲ್ಲೆಯ ಪಕ್ಷದ ಎಲ್ಲ ನಾಯಕರು ಕೋಲಾರದಿಂದಲೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಲೇ ಇದ್ದರು. ಎಲ್ಲ ಜಾತಿ, ಧರ್ಮಗಳ ಜನರು ಮತ್ತು ಧಾರ್ಮಿಕ ಗುರುಗಳ ಅಪೇಕ್ಷೆಯೂ ಇದೇ ಆಗಿದೆ. ಕಳೆದ ಬಾರಿ ಇಲ್ಲಿಗೆ ಭೇಟಿ ನೀಡಿದಾಗ ಅವರೆಲ್ಲರ ಜೊತೆ ಮಾತನಾಡಿದ್ದೇನೆ ಎಂದು ಸರಣಿ ಟ್ವೀಟ್ ಅನ್ನು ಸಿದ್ದರಾಮಯ್ಯ ಮಾಡಿದ್ದಾರೆ.

ಅಭಿಮಾನಕ್ಕೆ ನಾನು ಕೃತಜ್ಞನಾಗಿದ್ದೇನೆ
ಕೋಲಾರದಿಂದ ನಾನು ಸ್ಪರ್ಧಿಸಿದರೆ ನಾನು ಸ್ಪರ್ಧಿಸದೆ ಬೆಂಬಲ ನೀಡುತ್ತೇನೆ ಎಂದು ಕ್ಷೇತ್ರದ ಹಾಲಿ ಶಾಸಕರಾದ ಶ್ರೀನಿವಾಸ ಗೌಡ ಅವರು ಹೇಳಿದ್ದಾರೆ. ಅವರ ಅಭಿಮಾನಕ್ಕೆ ನಾನು ಕೃತಜ್ಞನಾಗಿದ್ದೇನೆ. ಕೋಲಾರ ಕ್ಷೇತ್ರದಿಂದ ಆಯ್ಕೆಯಾದರೆ ಪ್ರತೀ ವಾರ ಕ್ಷೇತ್ರಕ್ಕೆ ಬರುತ್ತೇನೆ. ಜನ ಮಧ್ಯವರ್ತಿಗಳಿಲ್ಲದೆ ನನ್ನನ್ನು ಭೇಟಿ ಮಾಡಬಹುದು. ಸಾಮಾನ್ಯ ವ್ಯಕ್ತಿಯೂ ಬಂದು ನೇರವಾಗಿ ಭೇಟಿ ಮಾಡಿ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು. ಇದು ನಾನು ನಡೆಸಿಕೊಂಡು ಬಂದಿರುವ ಸಂಪ್ರದಾಯ ಎಂದು ಅವರು ತಿಳಿಸಿದ್ದಾರೆ.

ಕೋಲಾರದ ಅಭಿವೃದ್ಧಿಗೆ ವಿಶೇಷ ಮಹತ್ವ
ಕೋಲಾರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸುದರ್ಶನ್ ಅವರು ಕೆಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಇಲ್ಲಿಂದಲೇ ಚುನಾವಣೆಗೆ ನಿಂತು ಶಾಸಕನಾದರೆ ಕ್ಷೇತ್ರವೂ ಸೇರಿದಂತೆ ಇಡೀ ಕೋಲಾರದ ಅಭಿವೃದ್ಧಿಗೆ ವಿಶೇಷ ಮಹತ್ವ ಕೊಡುತ್ತೇನೆ. ಇದರಲ್ಲಿ ಅನುಮಾನವೇ ಬೇಡ. ನಾವು ಕೆ.ಸಿ ವ್ಯಾಲಿ ಯೋಜನೆಗೆ 1,400 ಕೋಟಿ ಅನುದಾನ ನೀಡಿ, ಜಾರಿ ಮಾಡಿದ್ದೆವು, ಎನ್,ಸಿ ವ್ಯಾಲಿ ಯೋಜನೆ ಜಾರಿ ಮಾಡಿದ್ದೆವು. ಎತ್ತಿನಹೊಳೆ ಯೋಜನೆಗೆ ಚಿಕ್ಕಬಳ್ಳಾಪುರದಲ್ಲಿ ಭೂಮಿ ಪೂಜೆ ಮಾಡಿದ್ದು ನಮ್ಮ ಕಾಲದಲ್ಲಿ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದ್ದರೆ ಈ ಯೋಜನೆಯನ್ನು ಪೂರ್ಣಗೊಳಿಸುತ್ತಿದ್ದೆವು ಎಂದು ಹೇಳಿದರು.

ಎಲ್ಲಾ ನೀರಾವರಿ ಯೋಜನೆಗಳ ಪೂರ್ಣ
ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳಲು ರೂ.24,000 ಕೋಟಿ ಬೇಕಾಗುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ಬದ್ಧರಿದ್ದೇವೆ. 5 ವರ್ಷಗಳಲ್ಲಿ 2 ಲಕ್ಷ ಕೋಟಿ ಹಣವನ್ನು ಖರ್ಚು ಮಾಡಿ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಜನರ ಮಧ್ಯೆ ಜಗಳ ತಂದಿಟ್ಟು ಲಾಭ
ಬಿಜೆಪಿ ಒಂದು ಸುಳ್ಳಿನ ಫ್ಯಾಕ್ಟರಿ. ಅವರಿಗೆ ಜನ ಶಾಂತಿ, ನೆಮ್ಮದಿಯಿಂದ ಇರುವುದು ಬೇಡ. ಜನರ ಮಧ್ಯೆ ಜಗಳ ತಂದಿಟ್ಟು ಅದರಿಂದ ರಾಜಕೀಯ ಲಾಭ ಪಡೆಯಲು ಚಿಂತಿಸುವವರು ಅವರು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲಾ ವರ್ಗದ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತದೆ. ಮನಮೋಹನ್ ಸಿಂಗ್ ಅವರ ಸರ್ಕಾರ 78,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿತ್ತು. ನಾನು 22,27,000 ರೈತರ 8,165 ಕೋಟಿ ರೂ. ಸಾಲ ಮನ್ನಾ ಮಾಡಿದ್ದೆ. ನರೇಂದ್ರ ಮೋದಿ ಅಥವಾ ಸಿಎಂ ಬಸವರಾಜ ಬೊಮ್ಮಾಯಿ ಒಂದು ರೂಪಾಯಿ ರೈತರ ಸಾಲ ಮನ್ನಾ ಮಾಡಿದ್ದಾರ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬಂದ ತಕ್ಷಣ ಆಸ್ಪತ್ರೆ
ಕೋಲಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ಮನವಿ ಮಾಡಿದ್ದಾರೆ, ನಾವು ಅಧಿಕಾರಕ್ಕೆ ಬಂದ ತಕ್ಷಣ ಆಸ್ಪತ್ರೆಯನ್ನು ಮಂಜೂರು ಮಾಡಿ ಸ್ಥಾಪನೆ ಮಾಡುವ ಕೆಲಸ ಮಾಡುತ್ತೇವೆ. ನಮ್ಮದು ನುಡಿದಂತೆ ನಡೆಯುವ ಸಿದ್ಧಾಂತ. ಇಂದು ರಾಜ್ಯದಲ್ಲಿ ವಾತಾವರಣ ಕಾಂಗ್ರೆಸ್ ಪರವಾಗಿ ಬದಲಾಗುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ರಾಜ್ಯದಲ್ಲಿ ನೂರಕ್ಕೆ ನೂರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.












Click it and Unblock the Notifications