ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರಿಸಿದ ಸೋನಿಯಾ ಗಾಂಧಿ ಹೇಳಿದ್ದೇನು?
ನವದೆಹಲಿ, ಅಕ್ಟೋಬರ್ 26: ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ವಹಿಸಿಕೊಂಡರು. ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಪ್ರಮುಖ ನಾಯಕರು ಭಾಗಿವಹಿಸಿದ್ದಾರೆ.
ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಸೋನಿಯಾ ಗಾಂಧಿ, 'ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ. ಅದಕ್ಕಿಂತ ಹೆಚ್ಚಾಗಿ ನಿರಾಳವಾಗಿದ್ದೇನೆ' ಎಂದು ತಿಳಿಸಿದರು.
ನನ್ನ ಮೇಲೆ ನೀವೆಲ್ಲರೂ ಧಾರೆಯೆರೆದ ಪ್ರೀತಿ ಹಾಗೂ ಅಭಿಮಾನವನ್ನು ನನ್ನ ಕೊನೆಯ ಉಸಿರು ಇರುವವರೆಗೂ ಸ್ಮರಿಸುತ್ತೇನೆ. ನಿಮ್ಮ ಅಭಿಮಾನ ನನಗೆ ದೊಡ್ಡ ಜವಾಬ್ದಾರಿಯೂ ಹೌದು. ನನ್ನ ಹೆಗಲ ಮೇಲಿದ್ದ ಈ ಜವಾಬ್ದಾರಿಯ ಹೊರೆ ಕಡಿಮೆಯಾಗಿದೆ. ನಾನು ಸಮಾಧಾನವಾಗಿದ್ದೇನೆ ಎಂದು ಸೋನಿಯಾ ಹೇಳಿದರು.

ನನ್ನ ಸಾಮರ್ಥ್ಯಕ್ಕೆ ತಕ್ಕ ಹಾಗೇ ನಾನು ಕಾರ್ಯನಿರ್ವಹಿಸಲು ಪ್ರಯತ್ನಿಸಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಈ ಭಾರವನ್ನು ಹೊರುತ್ತಿದ್ದಾರೆ ಎಂದು ತಿಳಿಸಿದರು.
ನೂತನ ಅಧ್ಯಕ್ಷರಾಗಿ ನೇಮಕವಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಬದಲಾವಣೆ ಜಗದ ನಿಯಮವಾಗಿದೆ. ಈ ಹಿಂದೆಯೂ ಸಾಕಷ್ಟು ಸಂಕಷ್ಟಗಳನ್ನು ಕಾಂಗ್ರೆಸ್ ಎದುರಿಸಿದೆ. ಈಗಲೂ ಎದುರಿಸುತ್ತಿದೆ. ನಾವು ಸಮಸ್ಯೆಗಳನ್ನು ನಿವಾರಿಸುತ್ತೇವೆ ಎಂಬುದಾಗಿ ನನಗೆ ಖಾತ್ರಿಯಿದೆ ಎಂದು ಸೋನಿಯಾ ಅಭಿಪ್ರಾಯಪಟ್ಟರು.
ಈಗ ನಮ್ಮ ರಾಷ್ಟ್ರ ದೊಡ್ಡದೊಂದು ಬಿಕ್ಕಟ್ಟನ್ನು ಎದುರಿಸುತ್ತಿದೆ. ನಾವು ಒಟ್ಟಾಗಿ ಹೋರಾಡಬೇಕಿದೆ ಎಂದು ಸೋನಿಯಾ ಕರೆ ನೀಡಿದರು.

ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಹಸ್ತಾಂತರ
ಎಐಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಅವರು ಖರ್ಗೆ ಅವರಿಗೆ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಅಶೋಕ್ ಗೆಹಲೋಟ್, ಸಿದ್ದರಾಮಯ್ಯ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications