ದೇಶಾದ್ಯಂತ ಕೇಂದ್ರ ಮತ್ತು ಖಾಕಿ ವಿರುದ್ಧ ಕೆರಳಿದ ವಿದ್ಯಾರ್ಥಿಗಳು
ದೆಹಲಿ, ಡಿಸೆಂಬರ್.16: ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆಯೇ ಇದೀಗ ದೇಶಾದ್ಯಂತ ಆಕ್ರೋಶದ ಬೆಂಕಿಯನ್ನು ಹೊತ್ತಿಸಿದೆ.
ಜಾಮಿಯಾ ವಿವಿ ವಿದ್ಯಾರ್ಥಿಗಳ ಮೇಲೆ ಪೊಲೀಸರೇ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿವಿಧಡೆ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳು ಬೀದಿಗಿಳಿಯುತ್ತಿವೆ. ಕೇಂದ್ರ ಸರ್ಕಾರ ಹಾಗೂ ದೆಹಲಿ ಸರ್ಕಾರ ಮತ್ತು ಪೊಲೀಸರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.
ಪೌರತ್ವದ 'ಪಂಜಿ'ಗೆ ಹೊತ್ತಿ ಉರಿದಿದ್ದು ಈಶಾನ್ಯವಷ್ಟೇ ಅಲ್ಲ
ಇನ್ನೊಂದೆಡೆ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಜನವರಿ.05, 2020ರವರೆಗೂ ವಿವಿ ಬಂದ್ ಮಾಡಲು ಆಡಳಿತ ಮಂಡಳಿ ತೀರ್ಮಾನಿಸಿದೆ. ಈಗಾಗಲೇ ಫೈನಲ್ ಪರೀಕ್ಷೆಯನ್ನೂ ಕೂಡಾ ಮುಂದೂಡಿಕೆ ಮಾಡಲಾಗಿದೆ.
ಮಾನವ ಸರಪಳಿ ನಿರ್ಮಿಸಿ ಪೊಲೀಸರ ವಿರುದ್ಧ ಪ್ರತಿಭಟನೆ
ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವಿನ ಸಂಘರ್ಷ ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ಹೋಗುವಂತೆ ಮಾಡಿದೆ. ಜಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ದರ್ಪ ಮೆರೆದಿದ್ದಾರೆ ಎಂದು ಆರೋಪಿಸಿ, ಇಂದೂ ಕೂಡಾ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿವಿ ಗೇಟ್ ಎದುರು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮೌಲಾನಾ ಅಜದ್ ಉರ್ದು ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ದೆಹಲಿ ಪೊಲೀಸರ ಕ್ರಮ ಖಂಡಿಸಿ ಹೈದ್ರಾಬಾದ್ ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮೌಲಾನಾ ಅಜದ್ ನ್ಯಾಷನಲ್ ಉರ್ದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೆಹಲಿ ಪೊಲೀಸರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸುವುದಾಗಿ ಘೋಷಣೆ ಕೂಗಿದರು.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ವಿದ್ಯಾರ್ಥಿಗಳು
ಉತ್ತರ ಪ್ರದೇಶದ ಲಕ್ನೋದಲ್ಲೂ ಕೂಡಾ ವಿದ್ಯಾರ್ಥಿಗಳ ಹೋರಾಟದ ಕೂಗು ಪ್ರತಿಧ್ವನಿಸಿತು. ನಾಡ್ವಾ ಕಾಲೇಜಿನ ವಿದ್ಯಾರ್ಥಿಗಳು ದೆಹಲಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದರು. ಪೌರತ್ವ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಾವೂ ಕೂಡಾ ಬೆಂಬಲ ನೀಡುವುದಾಗಿ ಘೋಷಿಸಿದರು.
ಬಾನುವಾರ ಜಾಮಿಯಾ ವಿವಿ ಬಳಿ ನಡೆದಿದ್ದೇನು?
ದೆಹಲಿಯಲ್ಲಿ ಡಿಸೆಂಬರ್.15ರಂದು ಪೌರತ್ವ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿತ್ತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಲಾಠಿಪ್ರಹಾರ ನಡೆಸಿದ್ದರು, ಅಶ್ವವಾಯು ಸಿಡಿಸಿದ್ದರು. ಇದರಿಂದ ವಿವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಾ ವಾತಾವರಣ ನಿರ್ಮಾಣವಾಗಿತ್ತು. ಇದೀಗ ವಿವಿ ವಿದ್ಯಾರ್ಥಿಗಳ ಹೋರಾಟಕ್ಕೆ ದೇಶವ್ಯಾಪಿ ಬೆಂಬಲ ಸಿಕ್ಕಿದೆ. ದೆಹಲಿ ಪೊಲೀಸರ ಕ್ರಮ ವಿದ್ಯಾರ್ಥಿ ಸಂಘಟನೆಗಳ ಕಣ್ಣು ಕೆಂಪಾಗಿಸಿದೆ.