ಸುಶಾಂತ್ ಸಿಂಗ್ ಸಾವಿನ ಪ್ರಕರಣ ಸಿಬಿಐಗೆ: ಸುಪ್ರೀಂಕೋರ್ಟ್ ಮಹತ್ವದ ಆದೇಶ
ನವದೆಹಲಿ, ಆಗಸ್ಟ್ 19: ಬಾಲಿವುಡ್ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ನ್ಯಾಯ ಸಿಗಬೇಕೆಂಬ ಹೋರಾಟ ನಡೆಸಿದ್ದವರಿಗೆ ದೊಡ್ಡ ಜಯ ಸಿಕ್ಕಿದೆ. ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐಗೆ ತನಿಖೆಗೆ ಒಪ್ಪಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿಗೀಡಾಗಿ ಸುಮಾರು 65 ದಿನಗಳ ಬಳಿಕ ಅವರ ಸಾವಿನ ಹಿಂದಿನ ರಹಸ್ಯ ತಿಳಿಯಲು ಸಿಬಿಐ ತನಿಖೆಯೇ ನಡೆಯಬೇಕೆಂಬ ಹೋರಾಟಕ್ಕೆ ಗೆಲುವು ಸಿಕ್ಕಂತಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸುಶಾಂತ್ ಸಿಂಗ್ ಅಭಿಮಾನಿಗಳು ಮತ್ತು ಕುಟುಂಬದವರು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಜತೆಗೆ ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಪೊಲೀಸರು ಹಾಗೂ ಸಿಬಿಐ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ಅವರಿಗೆ ತೀವ್ರ ಹಿನ್ನಡೆಯಾಗಿದೆ. ಪಟ್ನಾದ ಪೊಲೀಸ್ ಠಾಣೆಯಲ್ಲಿ ರಿಯಾ ಚಕ್ರವರ್ತಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಕೂಡ ಕಾನೂನುಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಂದೆ ಓದಿ.

ಮಹಾರಾಷ್ಟ್ರ ಸಹಕಾರ ನೀಡಲೇಬೇಕು
ಸುಪ್ರೀಂಕೋರ್ಟ್ನ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರ ಏಕ ಸದಸ್ಯ ನ್ಯಾಯಪೀಠ ನೀಡಿರುವ ತೀರ್ಪನ್ನು ಪ್ರಶ್ನಿಸುವ ಸ್ವಾತಂತ್ರ್ಯ ನೀಡುವಂತೆ ಕೋರಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕೂಡ ತಿರಸ್ಕರಿಸಲಾಗಿದೆ. ಸಿಬಿಐ ತನಿಖೆಗೆ ಸ್ವತಃ ನ್ಯಾಯಾಲಯವೇ ಆದೇಶ ನೀಡಿರುವುದರಿಂದ ಮಹಾರಾಷ್ಟ್ರ ಸರ್ಕಾರವು ಸಿಬಿಐ ತನಿಖೆಗೆ ಸಹಕಾರ ನೀಡಲೇಬೇಕಾಗಿದೆ.

ಪುರಾವೆಗಳನ್ನು ಸಿಬಿಐಗೆ ಒಪ್ಪಿಸಿ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಎರಡು ತಿಂಗಳಿನಿಂದ ಮುಂಬೈನ ಬಾಂದ್ರಾ ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ 40ಕ್ಕೂ ಹೆಚ್ಚು ವ್ಯಕ್ತಿಗಳಿಂದ ಹೇಳಿಕೆಗಳನ್ನು ಸಂಗ್ರಹಿಸಿದ್ದರು. ಸುಶಾಂತ್ ಮೃತಪಟ್ಟ ಸ್ಥಳ ಸೇರಿದಂತೆ ಅವರು ವಿವಿಧೆಡೆ ಸಂಗ್ರಹಿಸಿದ ಎಲ್ಲ ದಾಖಲೆಗಳನ್ನೂ ಸಿಬಿಐ ವಶಕ್ಕೆ ಒಪ್ಪಿಸುವಂತೆ ಸುಪ್ರೀಂಕೋರ್ಟ್, ಮುಂಬೈ ಪೊಲೀಸರಿಗೆ ಸೂಚಿಸಿದೆ.

ಎಲ್ಲ ಪ್ರಕರಣಗಳು ಸಿಬಿಐ ವ್ಯಾಪ್ತಿಗೆ
ಸುಶಾಂತ್ ಸಿಂಗ್ ಅವರ ಸಾವಿಗೆ ಸಂಬಂಧಿಸಿದಂತೆ ದಾಖಲಾಗುವ ಯಾವುದೇ ಇತರೆ ಪ್ರಕರಣಗಳನ್ನೂ ತಾನೇ ನೋಡಿಕೊಳ್ಳುವಂತೆ ಕೂಡ ಸಿಬಿಐಗೆ ಸುಪ್ರೀಂಕೋರ್ಟ್ ಸೂಚಿಸಿದೆ. ಬಿಹಾರ ಪೊಲೀಸರು ಮತ್ತು ಮುಂಬೈ ಪೊಲೀಸರ ನಡುವಿನ ತನಿಖಾ ವ್ಯಾಪ್ತಿಯ ಬಗ್ಗೆ ಕಿತ್ತಾಟ ನಡೆದಿತ್ತು. ಈಗ ಬಿಹಾರ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಕಾನೂನು ಬದ್ಧವಾಗಿದೆ ಎಂದು ನ್ಯಾಯಪೀಠ ಹೇಳಿದೆ.

ರಿಯಾ ಚಕ್ರವರ್ತಿಗೆ ತೀವ್ರ ಹಿನ್ನಡೆ
ಸುಶಾಂತ್ ತಂದೆ ಕೆಕೆ ಸಿಂಗ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಬಿಹಾರ ಪೊಲೀಸರು ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಮತ್ತು ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಬಳಿಕ ಬಿಹಾರ ಸರ್ಕಾರದ ಮನವಿಯಂತೆ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು. ಇವುಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದ ರಿಯಾ, ಬಿಹಾರದಲ್ಲಿ ದಾಖಲಾದ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿದ್ದರು.












Click it and Unblock the Notifications