'ದಿ ಕೇರಳ ಸ್ಟೋರಿ' ನಿಷೇಧ: ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ
ನವದೆಹಲಿ, ಮೇ. 18: 'ದಿ ಕೇರಳ ಸ್ಟೋರಿ' ಸಿನಿಮಾದ ಮೇಲೆ ಪಶ್ಚಿಮ ಬಂಗಾಳ ಸರ್ಕಾರ ವಿಧಿಸಿದ್ದ ನಿಷೇಧಕ್ಕೆ ಸುಪ್ರೀಂ ಕೋರ್ಟ್ ಗುರುವಾರ ತಡೆ ನೀಡಿದೆ. ಸಾರ್ವಜನಿಕರ ಅಸಹಿಷ್ಣುತೆಗೆ ಶಾಸನಬದ್ಧ ನಿಬಂಧನೆಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
'ದಿ ಕೇರಳ ಸ್ಟೋರಿ' ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಪ್ರಮಾಣ ಪತ್ರ ನೀಡಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.

"ಸಾರ್ವಜನಿಕ ಅಸಹಿಷ್ಣುತೆಗೆ ಕಾನೂನು ನಿಬಂಧನೆಯನ್ನು ಬಳಸಲಾಗುವುದಿಲ್ಲ. ಇಲ್ಲದಿದ್ದರೆ, ಎಲ್ಲಾ ಚಲನಚಿತ್ರಗಳನ್ನು ಹೀಗೆಯೇ ನಿಷೇಧ ಮಾಡಲಾಗುತ್ತಿತ್ತು" ಎಂದು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ವಿಚಾರಣೆಯ ಸಮಯದಲ್ಲಿ ಹೇಳಿದೆ.
ಚಿತ್ರಕ್ಕೆ ಪ್ರಮಾಣಪತ್ರ ನೀಡುವ ಕುರಿತು ರಾಜ್ಯಗಳು ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಚಿತ್ರದ ನಿರ್ಮಾಪಕರ ಪರ ಹಾಜರಾದ ಹಿರಿಯ ವಕೀಲ ಹರೀಶ್ ಸಾಳ್ವೆ ಹೇಳಿದರು. ಚಲನಚಿತ್ರಕ್ಕೆ ಪ್ರಮಾಣೀಕರಣದ ಮಂಜೂರಾತಿ ವಿರುದ್ಧವಾಗಿ ಯಾರೂ ಯಾವುದೇ ಶಾಸನಬದ್ಧ ಮೇಲ್ಮನವಿಯನ್ನು ಸಲ್ಲಿಸಿಲ್ಲ ಎಂದು ಈ ವೇಳೆ ನ್ಯಾಯಾಲಯದ ಗಮನ ಸೆಳೆದಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿರುವುದನ್ನು ಮತ್ತು ತಮಿಳುನಾಡಿನಲ್ಲಿ ಸಿನಿಮಾವನ್ನು ಪ್ರದರ್ಶಿಸದಂತೆ ಥಿಯೇಟರ್ ಮಾಲೀಕರು ತೆಗೆದುಕೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ನಿರ್ಮಾಪಕರು ಸಲ್ಲಿಸಿರುವ ಅಡ್ಡ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇನ್ನು, ಚಿತ್ರದ ಬಿಡುಗಡೆಗೆ ತಡೆ ನೀಡಲು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪತ್ರಕರ್ತ ಕುರ್ಬಾನ್ ಅಲಿ ಅರ್ಜಿ ಸಲ್ಲಿಸಿದ್ದಾರೆ.
ಬಹುಭಾಷಾ ನಟಿ ಅದಾ ಶರ್ಮಾ ನಟಿಸಿರುವ "ದಿ ಕೇರಳ ಸ್ಟೋರಿ" ಮೇ 5 ರಂದು ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸುದೀಪ್ತೋ ಸೇನ್ ನಿರ್ದೇಶಿಸಿದ ಈ ಚಲನಚಿತ್ರವು ಕೇರಳದ ಮಹಿಳೆಯರನ್ನು ಇಸ್ಲಾಂಗೆ ಮತಾಂತರ ಮಾಡಿ, ಭಯೋತ್ಪಾದಕ ಗುಂಪು ಐಸಿಸ್ಗೆ ನೇಮಕ ಮಾಡಿದ್ದಾರೆ ಎಂದು ಹೇಳಲಾಗಿದೆ. ಮೊದಲು 32000 ಮಹಿಳೆಯರು ಎಂದು ಹೇಳಲಾಗಿದ್ದ ಸಿನಿಮಾದಲ್ಲಿ ಟೀಕೆಗಳ ನಂತರ ಮೂರು ಮಹಿಳೆಯ ಕಥೆಯಾಗಿ ಬದಲಾಯಿಸಲಾಗಿದೆ.












Click it and Unblock the Notifications