ಬೇಲ್ ಕೇಳಿದ ಕನ್ಹಯ್ಯಾನನ್ನು ವಾಪಸ್ ಕಳಿಸಿದ ಸುಪ್ರೀಂಕೋರ್ಟ್
ನವದೆಹಲಿ, ಫೆಬ್ರವರಿ 19 : ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯಾ ಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ದೆಹಲಿ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿತು.
ಶುಕ್ರವಾರ ಕನ್ಹಯ್ಯಾ ಕುಮಾರ್ ಜಾಮೀನು ಅರ್ಜಿಯ ವಿಚಾರಣೆ ಆರಂಭಿಸಿದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಏಕೆ ಅರ್ಜಿ ಸಲ್ಲಿಸಿಲ್ಲ? ಎಂದು ಪ್ರಶ್ನಿಸಿತು. ಕಾನೂನಿನ ಪ್ರಕಾರ ಹೈಕೋರ್ಟ್ನಲ್ಲಿ ಮೊದಲು ಅರ್ಜಿ ಸಲ್ಲಿಸಬೇಕು ಎಂದು ಕನ್ಹಯ್ಯಾ ಕುಮಾರ್ ಪರ ವಕೀಲರಿಗೆ ಸೂಚಿಸಿತು. [JNU ವೃತ್ತಾಂತ: ಗುಪ್ತಚರ ಇಲಾಖೆಯ ಸ್ಫೋಟಕ ಮಾಹಿತಿ]

ಸುಪ್ರೀಂಕೋರ್ಟ್ನಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರೆ ತಪ್ಪು ಸಂದೇಶ ರವಾನೆ ಮಾಡಿದಂತಾಗುತ್ತದೆ. ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ಭದ್ರತೆ ಒದಗಿಸುವುದಾಗಿ ಹೇಳಿವೆ. ಹೈಕೋರ್ಟ್ನಲ್ಲಿ ಮೊದಲು ಜಾಮೀನು ಅರ್ಜಿ ಸಲ್ಲಿಸಿ ಎಂದು ಕೋರ್ಟ್ ತಿಳಿಸಿತು. [JNU, ರಣರಂಗವಾದ ಪಟಿಯಾಲ ಕೋರ್ಟ್]
ಕನ್ಹಯ್ಯಾ ಕುಮಾರ್ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅವರ ವಕೀಲರು ದೆಹಲಿ ಹೈಕೋರ್ಟ್ಗೆ ಮನವಿ ಮಾಡಬಹುದು ಎಂದು ಹೇಳಿದ ಸುಪ್ರೀಂಕೋರ್ಟ್, ಅರ್ಜಿಯ ವಿಚಾರಣೆಯನ್ನು ಯಾವಾಗ ಕೈಗೆತ್ತಿಕೊಳ್ಳಬೇಕು ಎಂದು ಹೈಕೋರ್ಟ್ ತೀರ್ಮಾನ ಕೈಗೊಳ್ಳಬಹುದು ಎಂದು ಸ್ಪಷ್ಟಪಡಿಸಿತು.
ಇದು ಭದ್ರತೆಗೆ ಸಂಬಂಧಿಸಿದ ವಿಷಯವಾದ್ದರಿಂದ ಸುಪ್ರೀಂಕೋರ್ಟ್ಗೆ ಮನವಿ ಮಾಡಲಾಯಿತು ಎಂದು ಹೇಳಿದ ಕನ್ಹಯ್ಯಾ ಕುಮಾರ್ ಪರ ವಕೀಲರ ಮನವಿಯನ್ನು ಆಲಿಸಿದ ಕೋರ್ಟ್, ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿತು.
ಜಾಮೀನು ಅರ್ಜಿಯ ವಿಚಾರಣೆ ವೇಳೆ ದೆಹಲಿ ಪೊಲೀಸರು ಪಟಿಯಾಲಾ ಕೋರ್ಟ್ ಆವರಣದಲ್ಲಿ ನಡೆದ ಗಲಭೆ ಬಗ್ಗೆ ಕೋರ್ಟ್ಗೆ ವರದಿ ಸಲ್ಲಿಸಿದರು. ಸುರಕ್ಷತೆ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಕೋರ್ಟ್ಗೆ ತಿಳಿಸಿದರು. [ಪಿಟಿಐ ಚಿತ್ರ]











Click it and Unblock the Notifications